ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ಮಾಡಿಸಿ, ತಪ್ಪು ಮಾಡಿದವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಶುಕ್ರವಾರ ವಿಧಾನಸಭೆಯ ಕಲಾಪದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಬಗೆದಷ್ಟು, ಲೆಕ್ಕ ಹಾಕಲು ಸಾಧ್ಯವಾಗದಷ್ಟು ಹಗರಣಗಳಿವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 42.16 ಕೋಟಿ ರೂಪಾಯಿ ಎಪಿಎಂಸಿ ಹಗರಣವಾಗಿದೆ. ಕೋಟ ಶ್ರೀನಿವಾಸ ಪೂಜಾರಿ ಮಂತ್ರಿಯಾಗಿದ್ದಾಗ ಭೋವಿ ನಿಗಮದಲ್ಲಿ 87 ಕೋಟಿ ರೂ. ಹಗರಣವಾಗಿದೆ ಎಂದರು.
ದೇವರಾಜ ಅರಸು ಟ್ರಕ್ ಟರ್ಮಿನಲ್ನಲ್ಲಿ 47.10 ಕೋಟಿ ರೂ. ಹಗರಣವಾಗಿತ್ತು. ಅದಕ್ಕೆ ಅಧ್ಯಕ್ಷರಾಗಿದ್ದ ವೀರಯ್ಯ ಬಂಧನವಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಅಂಬೇಡ್ಕರ್ ಅಭಿವೃದ್ದಿ ನಿಗಮ ಸೇರಿ ಬೇರೆ ನಿಗಮಗಳಲ್ಲಿ 437 ಕೋಟಿ ರೂ. ಹಗರಣವಾಗಿದೆ. ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಅವರು ಸಚಿವರಾಗಿದ್ದಾಗ ಕಿಯೋನಿಕ್ಸ್ನಲ್ಲಿ 500 ಕೋಟಿ ರೂ. ಹಗರಣ ನಡೆದಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.
ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ಸಿಐಡಿ ತನಿಖೆಯಲ್ಲಿ ಉಲ್ಲೇಖವಾಗಿದೆ. ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಹಗರಣವಾಗಿದೆ ಎಂದು ಶಾಸಕ ಯತ್ನಾಳ್ ಹೇಳಿದ್ದರು. ಭದ್ರಾ ಮೇಲ್ದಂಡೆ ಯೋಜನೆ ಹಗರಣದ ಬಗ್ಗೆ ಹೆಚ್. ವಿಶ್ವನಾಥ್ ಆರೋಪಿಸಿದ್ದರು. ಬಿಟ್ ಕಾಯಿನ್ ಪ್ರಕರಣದಲ್ಲಿ ಸಾವಿರಾರು ಕೋಟಿ ರೂ. ಹಗರಣ ನಡೆದಿದೆ. ಆಗ ಸಿಎಂ ಆಗಿದ್ದ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ, ಸಚಿವರಾಗಿದ್ದ ಬಸವರಾಜ ಬೊಮ್ಮಾಯಿಗೆ ನೂರಾರು ಕೋಟಿ ರೂ. ಲಾಭವಾಗಿದೆ. ಇದರ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ತಿಳಿಸಿದರು.
ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಹಗರಣದಲ್ಲಿ ಬಡ ಜನರ ಸಾವಿರಾರು ಕೋಟಿ ರೂ. ಹಣವನ್ನು ದೋಚಿದವರನ್ನು ಇಡಿ, ಐಟಿ ಹಾಗೂ ಸಿಬಿಐ ಬಂಧಿಸುವ ಕೆಲಸ ಮಾಡಿಲ್ಲ. ಜಯನಗರ, ಬಸವನಗುಡಿಯ ಬೀದಿ ಬದಿಯ ಕೆಲ ಕಳ್ಳರು ವಿಧಾನಸೌಧ, ಸಂಸತ್ಗೂ ಆಯ್ಕೆಯಾಗಿ ಹೋಗಿದ್ದಾರೆ ಎಂದು ಸಿಎಂ ಹೇಳಿದರು.
ವಿಪಕ್ಷ ನಾಯಕ ಆರ್. ಅಶೋಕ್ ಮೇಲಿನ ಭೂ ಹಗರಣ ಪ್ರಕರಣ ಸುಪ್ರೀಂಕೋರ್ಟ್ನಲ್ಲಿದೆ. ಕೃಷಿ ಸಚಿವರಾಗಿದ್ದ ಬಿ.ಸಿ ಪಾಟೀಲ್ ಕೃಷಿ ಇಲಾಖೆ ನೌಕರರೇ ಲಂಚ ಕೇಳುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದರು ಎಂದರು.
ಬಿಜೆಪಿಯವರು ಭ್ರಷ್ಟಾಚಾರದ ಪಿತಾಮಹರಾಗಿದ್ದಾರೆ. ಅವರ ಹಗರಣಗಳು ಬಿಚ್ಚಬಾರದು ಎಂದು ಸದನದಲ್ಲಿ ಗಲಾಟೆ ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲೇ ಇಷ್ಟು ಕೆಟ್ಟದಾಗಿ ಪ್ರತಿಪಕ್ಷಗಳು ನಡೆದುಕೊಂಡಿಲ್ಲ. ಕೇಂದ್ರ ಹಾಗೂ ಆರ್ಎಸ್ಎಸ್ ಸೂಚನೆಯಿಂದ ಈ ರೀತಿ ಮಾಡುತ್ತಿದ್ದಾರೆ. ಕೇವಲ ಪ್ರಚಾರಕ್ಕಾಗಿ ಈ ರೀತಿ ಗಲಾಟೆ ಮಾಡುತ್ತಿದ್ದಾರೆ. ಇವರು ಉತ್ತರ ಕೇಳಬಾರದು ಎಂಬ ದುರುದ್ದೇಶದಿಂದ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಕಿಡಿಕಾರಿದರು.
ಇದನ್ನೂ ಓದಿ : ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಆರ್ಎಸ್ಎಸ್ ಸಭೆ: ಪ್ರಶ್ನಿಸಿದ ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ


