ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ.
ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಆ.28) ನಡೆಯಿತು. ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.
ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದ ಸಿಂಘ್ವಿ, ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕ್ರಮ ಸರಿಯಾಗಿಲ್ಲ. ಇದು ಮುಡಾ ಹಗರಣವೇ ಅಲ್ಲ. ಸಾಮಾನ್ಯವಾಗಿ ನಡೆದಿರುವ ಪ್ರಕ್ರಿಯೆ ಎಂದು ವಾದಿಸಿದರು.
ಪೊಲೀಸ್ ಅಧಿಕಾರಿ ಅನುಮತಿಯಿಲ್ಲದೆ ತನಿಖೆ ಮಾಡುವಂತಿಲ್ಲ. ಪಿಸಿ ಕಾಯ್ದೆ 17ಎ ಅಡಿ ಪೂರ್ವಾನುಮತಿ ಬೇಕು. 17ಎ ಪಾಲನೆಯಾಗದಿದ್ದರೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಎರಡೂ ಅಂಶಗಳನ್ನು ರಾಜ್ಯಪಾಲರು ಪಾಲಿಸಿಲ್ಲ ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದರು.
ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಆ.31ರ ಬೆಳಿಗ್ಗೆ 10:30ಕ್ಕೆ ವಿಚಾರಣೆ ಮುಂದೂಡಿದೆ. ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರೆಸಿದ್ದು, ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೂ ಆದೇಶಿಸಿದೆ.
ಸಿದ್ದರಾಮಯ್ಯ ಅವರ ರಿಟ್ ಅರ್ಜಿಗೆ ರಾಜ್ಯಪಾಲರು ಮತ್ತು ದೂರುದಾರ ಪ್ರದೀಪ್ ಇಬ್ಬರು ಪ್ರತಿವಾದಿಗಳೂ ಇದುವರೆಗೆ ಆಕ್ಷೇಪಣೆ ಸಲ್ಲಿಸಿಲ್ಲ.
ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳ ಗೌಪ್ಯ ವಿಚಾರಣೆಗೆ ಎಸ್ಐಟಿ ಮನವಿ


