ನ್ಯಾಯಾಲಯದ ಕಲಾಪದ ಕೆಲವು ವಿಡಿಯೋಗಳು ವೈರಲ್ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ಪೂರ್ವಾನುಮತಿ ಪಡೆಯದೆ ವಿಡಿಯೋ ರೆಕಾರ್ಡಿಂಗ್, ಹಂಚಿಕೆ ಮಾಡದಂತೆ ವೀಕ್ಷಕರಿಗೆ ಎಚ್ಚರಿಸಿದೆ. ಅಲ್ಲದೆ, ಲೈವ್ ಸ್ಟ್ರೀಮಿಂಗ್ಗೂ ಮುನ್ನ ಸಂದೇಶ ಹಾಕಲಾರಂಭಿಸಿದೆ.
ಕರ್ನಾಟಕ ಹೈಕೋರ್ಟ್ 2022ರ ಜನವರಿ 1ರಿಂದ “ಕರ್ನಾಟಕ ನ್ಯಾಯಾಲಯ ಕಲಾಪಗಳ ನೇರಪ್ರಸಾರ (ಲೈವ್ಸ್ಟ್ರೀಮ್) ಮತ್ತು ರೆಕಾರ್ಡಿಂಗ್ ನಿಯಮಗಳು 2021” ಅನ್ನು ಜಾರಿಗೊಳಿಸಿದೆ. ಇದರನ್ವಯ ಲೈವ್ ಸ್ಟ್ರೀಮಿಂಗ್ ಹಾಗೂ ರೆಕಾರ್ಡಿಂಗ್ ನಿಯಮಗಳನ್ನು ಸೂಚಿಸಲಾಗಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ಈ ಸಂಬಂಧದ ನೋಟಿಸ್ ಅನ್ನು ಪ್ರತಿಯೊಂದು ಕೋರ್ಟ್ ಹಾಲ್ಗಳ ವಿಡಿಯೋ ಕಾನ್ಫರೆನ್ಸ್ ಪರದೆಯ ಮೇಲೆ ಕಲಾಪ ಆರಂಭಕ್ಕೂ ಮುನ್ನ ಮತ್ತು ಮಧ್ಯಾಹ್ನ ಭೋಜನದ ವೇಳೆಯಲ್ಲಿ ಪ್ರಸಾರ ಮಾಡಲಾಗಿದೆ.
“ಅನುಮತಿ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆ ಹೊರತುಪಡಿಸಿ, ಯಾವುದೇ ವ್ಯಕ್ತಿ ಅಥವಾ ಸಂಸ್ಥೆ (ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಜಾಲತಾಣಗಳು) ಕಲಾಪದ ಲೈವ್ ಸ್ಟ್ರೀಮಿಂಗ್ ಅಥವಾ ಹೈಕೋರ್ಟ್ ಯೂಟ್ಯೂಬ್ ಚಾನಲ್ನಲ್ಲಿನ ವಿಡಿಯೋಗಳನ್ನು ರೆಕಾರ್ಡ್ ಮಾಡುವುದಾಗಲಿ, ಪ್ರಸರಣ ಮಾಡುವುದಾಗಲಿ ಮಾಡುವಂತಿಲ್ಲ” ಎಂದು ಸಂದೇಶದಲ್ಲಿ ಹೇಳಲಾಗಿದೆ. ಈ ನಿರ್ಬಂಧವು ಎಲ್ಲಾ ಸಂದೇಶ ಅಪ್ಲಿಕೇಶನ್ಗಳಿಗೂ ಅನ್ವಯಿಸಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಪೂರ್ವಾನುಮತಿ ಪಡೆಯದೇ ಲೈವ್ ಸ್ಟ್ರೀಮಿಂಗ್ನ ಮರು ಪ್ರಸಾರ, ವರ್ಗಾವಣೆ, ಅಪ್ಲೋಡ್ ಮಾಡುವುದು, ಪೋಸ್ಟ್ ಮಾಡುವುದು, ಮಾರ್ಪಾಡು ಮಾಡುವುದು ಪ್ರಸಾರ ಅಥವಾ ಮರು ಪ್ರಸಾರವನ್ನು ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಾಲಯದ ಕಲಾಪವನ್ನು ರೆಕಾರ್ಡ್ ಮಾಡಲು ಅಥವಾ ಅದರ ನಿರೂಪಣೆಗೆ ಯಾವುದೇ ವ್ಯಕ್ತಿಗೆ ಅನುಮತಿ ನೀಡಲಾಗಿಲ್ಲ. ನ್ಯಾಯಾಲಯದ ನಿಯಮ ಉಲ್ಲಂಘಿಸಿದ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಾನೂನಿನಡಿ ಕ್ರಮಕೈಗೊಳ್ಳಲಾಗುತ್ತದೆ. ನ್ಯಾಯಾಲಯದ ಕಲಾಪದ ರೆಕಾರ್ಡಿಂಗ್ ಮತ್ತು ಆರ್ಕೈವ್ ದತ್ತಾಂಶದ ಮೇಲೆ ನ್ಯಾಯಾಲಯಕ್ಕೆ ವಿಶೇಷ ಹಕ್ಕುಸ್ವಾಮ್ಯವಿದೆ ಎಂದು ನೋಟಿಸ್ನಲ್ಲಿ ಹೇಳಲಾಗಿದೆ.
ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಬೆಂಗಳೂರಿನ ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ ಮತ್ತು ಮಹಿಳಾ ವಕೀಲೆಯೊಬ್ಬರಿಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಡಿಯೋ ಕ್ಲಿಪ್ಗಳು ಎಲ್ಲೆಡೆ ವೈರಲ್ ಆದ ಬಳಿಕ, ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ ಹೇರಿದೆ.
ಇದನ್ನೂ ಓದಿ : ಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್ & ಕುಮಾರಸ್ವಾಮಿ ಕುಮ್ಮಕ್ಕು ಇದೆಯೆ? – ಸಚಿವ ಭೈರೆಗೌಡ ಪ್ರಶ್ನೆ


