ಪರಿಶಿಷ್ಟರ ಮೇಲಿನ ದೌರ್ಜನ್ಯದ ಪ್ರಕರಣಗಳನ್ನು ನಿರ್ವಹಿಸಲು ನಾಗರಿಕ ಹಕ್ಕು ನಿರ್ದೇಶನಾಲಯದ (ಡಿಸಿಆರ್ಇ) 33 ಘಟಕಗಳನ್ನು ‘ವಿಶೇಷ ಪೊಲೀಸ್ ಠಾಣೆ’ಗಳೆಂದು ಘೋಷಿಸಲು ಮತ್ತು ಈ ಠಾಣೆಗಳ ನಿರ್ವಹಣೆಗೆ 450 ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ “ಪ್ರತಿ ಜಿಲ್ಲೆಗೊಂದು ಠಾಣೆ ಮತ್ತು ಬೆಂಗಳೂರಿನಲ್ಲಿ ಎರಡು ಈ ವಿಶೇಷ ಪೊಲೀಸ್ ಠಾಣೆಗಳಿರಲಿವೆ. ಪರಿಶಿಷ್ಟರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಈ ಠಾಣೆಗಳಿಗೆ ವರ್ಗಾಯಿಸಲಾಗುವುದು” ಎಂದರು.
ಸಿಆರ್ಪಿಸಿ ಕಾಯ್ದೆ 1973 ರ ಕಲಂ 2 ಎಸ್ ಅಡಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೆಲವು ರಾಜ್ಯಗಳಲ್ಲಿ ಈಗಾಗಲೇ ವಿಶೇಷ ಪೊಲೀಸ್ ಠಾಣೆಗಳು ಇವೆ. ಕರ್ನಾಟಕದಲ್ಲಿ 2022ರ ಡಿಸೆಂಬರ್ವರೆಗೆ 7,633 ಪ್ರಕರಣಗಳು ಮಾತ್ರ ನ್ಯಾಯಾಲಯಕ್ಕೆ ಬಂದಿವೆ. ಈ ಪೈಕಿ 1,723 ಪ್ರಕರಣಗಳು ವಿಲೇವಾರಿ ಆಗಿವೆ. 1,363 ಪ್ರಕರಣಗಳು ಖುಲಾಸೆ ಆಗಿದ್ದು, ಕೇವಲ 68 ಪ್ರಕರಣಗಳಲ್ಲಿ ಶಿಕ್ಷೆ ಆಗಿದೆ. ರಾಜ್ಯದಲ್ಲಿ ಶಿಕ್ಷೆ ಪ್ರಮಾಣ ಶೇ 4ರಷ್ಟಿದೆ. ಉತ್ತರಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಶಿಕ್ಷೆ ಪ್ರಮಾಣ ಶೇ 50ರಷ್ಟಿದೆ ಎಂದು ಮಹದೇವಪ್ಪ ವಿವರಿಸಿದರು.
ಪ್ರತ್ಯೇಕ ಪೊಲೀಸ್ ಠಾಣೆಗಳೆಂದು ಘೋಷಿಸಲು ಮತ್ತು 450 ಸಿಬ್ಬಂದಿ ನೇಮಕಕ್ಕೆ 15.45 ಕೋಟಿ ರೂಪಾಯಿ ವೆಚ್ಚವಾಗಲಿದೆ. ಹೆಚ್ಚುವರಿ ಸಿಬ್ಬಂದಿಗೆ ತಗಲುವ ಆವರ್ತಕ ವೆಚ್ಚ 37.79 ಕೋಟಿ ರೂ. ಆಗಲಿದೆ. ವೆಚ್ಚದ ಶೇ 50ರಷ್ಟನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಹೇಳಿದರು.
ಇದನ್ನೂ ಓದಿ : ರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ


