ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಅದಾನಿ ವಿರುದ್ಧ ಅಮೆರಿಕಾದಲ್ಲಿ ಲಂಚ ಮತ್ತು ವಂಚನೆ ಆರೋಪ ಹೊರಿಸಲಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ”ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ತಕ್ಷಣವೇ ಬಂಧಿಸಬೇಕು” ಎಂದು ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್ ಲಂಚ ನೀಡಿದ ಆರೋಪದ ಮೇಲೆ ಅಮೆರಿಕಾದ ಪ್ರಾಸಿಕ್ಯೂಟರ್ಗಳು ಅದಾನಿ ಮತ್ತು ಸಹಚರರ ಮೇಲೆ ಆರೋಪ ಹೊರಿಸಿದ ನಂತರ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
“ಉದ್ಯಮಿ ಅದಾನಿ ಭಾರತೀಯ ಮತ್ತು ಅಮೇರಿಕನ್ ಕಾನೂನುಗಳನ್ನು ಉಲ್ಲಂಘಿಸಿದ್ದಾರೆ ಎಂಬುದು ಈಗ ಅಮೆರಿಕಾದಲ್ಲಿ ಸ್ಪಷ್ಟವಾಗಿದೆ ಮತ್ತು ದೃಢಪಟ್ಟಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ‘ಏಕ್ ಹೈ ತೋ ಸೇಫ್ ಹೇ’ ಘೋಷಣೆಗೆ ವ್ಯಂಗ್ಯವಾಡಿದ ಅವರು, ಪ್ರಧಾನಿ ಮತ್ತು ಅದಾನಿ ಒಟ್ಟಿಗೆ ಇರುವವರೆಗೂ ಅವರು ಭಾರತದಲ್ಲಿ ಸುರಕ್ಷಿತವಾಗಿರುತ್ತಾರೆ ಎಂದು ಹೇಳಿದ್ದಾರೆ. ತಮ್ಮ ಮೇಲಿನ ಆರೋಪದ ಬಗ್ಗೆ ಅದಾನಿ ಸಮೂಹ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಅದಾನಿಯನ್ನು ತಕ್ಷಣವೇ ಬಂಧಿಸಿ ವಿಚಾರಣೆಗೊಳಪಡಿಸಬೇಕು ಮತ್ತು ಅವರ ‘ರಕ್ಷಕ’ರಾದ ಮತ್ತು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರನ್ನು ಸ್ಥಾನದಿಂದ ಕಿತ್ತುಹಾಕಿ, ಅವರನ್ನೂ ತನಿಖೆಗೆ ಒಳಪಡಿಸಬೇಕು” ಎಂದು ಅವರು ಹೇಳಿದ್ದಾರೆ. ಸೋಮವಾರದಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಅವರು ಹೇಳಿದ್ದಾರೆ.
ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಕೂಡಾ ಪ್ರತಿಪಕ್ಷಗಳು ಬೇಡಿಕೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. “ಮೋದಿ ಸರಕಾರವು ಅದಾನಿಯನ್ನು ರಕ್ಷಿಸುತ್ತಿದೆ. ಆದ್ದರಿಂದ ಭಾರತದಲ್ಲಿ ಅದಾನಿಯನ್ನು ಬಂಧಿಸುವುದಿಲ್ಲ ಅಥವಾ ತನಿಖೆ ಮಾಡುವುದಿಲ್ಲ ಎಂದು ನನಗೆ ಖಾತರಿಯಿದೆ” ಎಂದು ಗಾಂಧಿ ಆರೋಪಿಸಿದ್ದಾರೆ.
ಏನಿದು ಅದಾನಿಯ ಹೊಸ ವಂಚನೆ?
ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಗುರುವಾರ ವರದಿಯಾಗಿದೆ. ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭವನ್ನು ನಿರೀಕ್ಷಿಸುವ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಿದ್ದರು ಎನ್ನಲಾಗಿದೆ.
ನ್ಯೂಯಾರ್ಕ್ನ ಪೂರ್ವ ಜಿಲ್ಲಾ ನ್ಯಾಯಾಲಯದಲ್ಲಿರುವ ಅಮೆರಿಕದ ಅಟಾರ್ನಿ ಕಚೇರಿಯ ಮಾಹಿತಿ ಪ್ರಕಾರ, ಗೌತಮ್ ಅದಾನಿ, ಸಾಗರ್ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್ ವಿರುದ್ಧ ಐದು ಅಂಶಗಳ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಲಾಗಿದೆ. ಬಂಡವಾಳ ಆಕರ್ಷಿಸಲು ಅಮೆರಿಕದ ಹೂಡಿಕೆದಾರರು ಹಾಗೂ ಜಾಗತಿಕ ಹಣಕಾಸು ಸಂಸ್ಥೆಗಳಿಗೆ ಸುಳ್ಳು ಮತ್ತು ತಪ್ಪು ಹೇಳಿಕೆ ನೀಡಿರುವ ಆರೋಪ ಇವರ ಮೇಲಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ನ್ಯಾಯಾಧೀಶರು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ದ ಬಂಧನ ವಾರೆಂಟ್ಗಳನ್ನು ಹೊರಡಿಸಿದ್ದಾರೆ. ಆ ವಾರೆಂಟ್ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್ಗಳು ಯೋಜಿಸಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ರಾಯಿಟರ್ಸ್ ತಿಳಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್ ಸ್ಟಾಕ್ ಎಕ್ಸ್ಚೇಂಜ್ನಲ್ಲಿ ವ್ಯವಹಾರ ನಡೆಸಿದ್ದ ಕಂಪನಿಯ ಮಾಜಿ ಅಧಿಕಾರಿಗಳಾದ ರಂಜಿತ್ ಗುಪ್ತಾ ಹಾಗೂ ರೂಪೇಶ್ ಅಗರವಾಲ್ ಹಾಗೂ ಕೆನಡಾ ಮೂಲದ ಹೂಡಿಕೆದಾರರಾದ ದೀಪಕ್ ಮಲ್ಹೋತ್ರಾ ಮತ್ತು ಸೌರಬ್ ಅಗರವಾಲ್ ಅವರು ಲಂಚ ನೀಡಿರುವುದು ವಿದೇಶಿ ಭ್ರಷ್ಟ ಕಾರ್ಯಾಚರಣೆ ಕಾಯ್ದೆಯಡಿ ಅಪರಾಧವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.
“ತಮ್ಮ ವ್ಯವಹಾರಗಳಿಗೆ ಅನುಕೂಲವಾಗುವಂತೆ ಭಾರತ ಸರ್ಕಾರದ ಅಧಿಕಾರಿಗಳಿಗೆ ಆರೋಪಿಗಳು ಲಂಚ ನೀಡಿದ್ದಾರೆ. ಲಂಚ ಹಾಗೂ ಭ್ರಷ್ಟಾಚಾರದ ಕುರಿತು ಸುಳ್ಳು ಹೇಳಿಕೆಗಳ ಮೂಲಕ ಅದಾನಿ ಹಾಗೂ ಇತರ ಆರೋಪಿಗಳು ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇತರ ಆರೋಪಿಗಳು ತನಿಖೆಗೆ ಅಡ್ಡಿಪಡಿಸುವ ಮೂಲಕ ಲಂಚದ ಆರೋಪವನ್ನು ಮರೆಮಾಚಲು ಯತ್ನಿಸಿದ್ದಾರೆ” ಎಂದು ಆರೋಪಿಸಲಾಗಿದೆ.
ದೋಷಾರೋಪಣೆಯ ಪ್ರಕಾರ, ಆರೋಪಿಗಳು ವಂಚನೆಗೆ ಗೌತಮ್ ಅದಾಮಿ ಅವರನ್ನು “ನ್ಯೂಮೆರೊ ಯುನೊ” ಮತ್ತು “ಬಿಗ್ ಮ್ಯಾನ್” ಎಂಬ ಕೋಡ್ ಹೆಸರುಗಳೊಂದಿಗೆ ಖಾಸಗಿಯಾಗಿ ಕರೆಯತ್ತಿದ್ದರು. ಸಾಗರ್ ಅದಾನಿ ಲಂಚದ ವ್ಯವಹಾರದ ಬಗ್ಗೆ ನಿಗಾ ಇಡಲು ತಮ್ಮ ಸೆಲ್ ಫೋನ್ ಬಳಸಿದ್ದಾರೆ ಎಂದು ಹೇಳಲಾಗಿದೆ. ಅದಾನಿಗಳು, ವಿನೀತ್ ಜೈನ್ ಸೇರಿದಂತೆ ಅದಾನಿ ಗ್ರೀನ್ ಎನರ್ಜಿಯ ಕಾರ್ಯನಿರ್ವಾಹಕರು ಸಾಲದಾತರು ಮತ್ತು ಹೂಡಿಕೆದಾರರಿಂದ ಭ್ರಷ್ಟಾಚಾರವನ್ನು ಮರೆಮಾಚುವ ಮೂಲಕ ತಮ್ಮ ಕಂಪನಿಗೆ 3 ಶತಕೋಟಿ ಡಾಲರ್ಗಿಂತ ಹೆಚ್ಚಿನ ಸಾಲ ಮತ್ತು ಬಾಂಡ್ಗಳನ್ನು ಸಂಗ್ರಹಿಸಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
“ಈ ಪ್ರಕರಣ ಕುರಿತ ತನಿಖೆಯನ್ನು ತಡೆಯಲು ಎಫ್ಬಿಐ, ನ್ಯಾಯಾಂಗ ಇಲಾಖೆ ಮತ್ತು ಸೆಕ್ಯುರಿಟಿ ಅಂಡ್ ಎಕ್ಸ್ಚೇಂಜ್ ಕಮಿಷನ್ ಕೂಡಾ ಪ್ರಯತ್ನಿಸುತ್ತಿದೆ” ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾಗಿ ವರದಿಯಾಗಿದೆ.
ಪ್ರಕರಣದ ತನಿಖೆಯನ್ನು ನ್ಯೂಯಾರ್ಕ್ನ ಎಫ್ಬಿಐ ಕಚೇರಿ ನಡೆಸುತ್ತಿದೆ.
ಭಾರತೀಯ ಕಾಲಮಾನದ ಪ್ರಕಾರ ಇಂದು (ನ.21) ಬೆಳಿಗ್ಗೆ ವರದಿ ಹೊರಬಿದ್ದಿದೆ. ಅದಾನಿ ಗ್ರೂಪ್ ತಮ್ಮ ಮೇಲಿನ ಆರೋಪದ ಕುರಿತು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವಾಷಿಂಗ್ಟನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಕೂಡ ಪ್ರತಿಕ್ರಿಯಿಸಿಲ್ಲ. ಆರೋಪಿಗಳ ಪರ ವಕೀಲರನ್ನು ತಕ್ಷಣ ಗುರುತಿಸಲು ಸಾಧ್ಯವಾಗಿಲ್ಲ ಎಂದು business-standard.com ವರದಿ ಮಾಡಿದೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಎಪಿಎಲ್ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬಿಪಿಎಲ್ ಕಾರ್ಡ್ ಎಪಿಎಲ್ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್


