ಮಾಜಿ ಪ್ರಧಾನಮಂತ್ರಿಗಳಾದ ಎಚ್.ಎಡಿ. ದೇವೇಗೌಡರ ತವರು ಜಿಲ್ಲೆಯಾದ ಹಾಸನದಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ ‘ಜನಕಲ್ಯಾಣ ಸಮಾವೇಶ’ಕ್ಕೆ ಜನಸಾಗರವೇ ಹರಿದುಬಂತು. ‘ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯ’ದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಕಾರ್ಯಕ್ರಮ ಯಶಸ್ವಿಯಾಗಿದ್ದು, ಜೆಡಿಎಸ್ ಭದ್ರಕೋಟೆ ಎಂದು ಹೇಳಲಾಗುತ್ತಿದ್ದ ಪಶ್ಚಿಮಘಟ್ಟದ ಹೆಬ್ಬಾಗಿಲು ‘ಕೈ’ ನಾಯಕರ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.
ಸಮಾವೇಶದಲ್ಲಿ ಜನರನ್ನುದ್ದೇಶಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಎಚ್.ಡಿ. ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಿ.ಎನ್. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ಅವರು ರಾಜಕೀಯವಾಗಿ ಮುಗಿಸಿದರು. ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ ಅವರು ಆಗಲೇ ಈ ಪಾಪದ ಹೊರೆಯನ್ನು ಹೊರಬೇಕಾಗುತ್ತದೆ ಎಂದು ದೇವೇಗೌಡರಿಗೆ ಹೇಳಿದ್ದರು. ಈಗ ಒಕ್ಕಲಿಗ ನಾಯಕ ಕೃಷ್ಣಪ್ಪ ಅವರ ಮಾತು ನಿಜವಾಗಿದೆ” ಎಂದು ದೇವೇಗೌಡರ ರಾಜಕೀಯ ಭದ್ರಕೋಟೆಯಲ್ಲಿ ನಿಂತು, ಅವರ ವಿರುದ್ಧವೇ ವಾಗ್ದಾಳಿ ನಡೆಸಿದರು.
“ನಾನು ಮತ್ತು ಆರ್.ಎಲ್. ಜಾಲಪ್ಪ ಒಟ್ಟಾಗಿ, ರಾಮಕೃಷ್ಣ ಹೆಗಡೆಯವರ ಬದಲಿಗೆ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದೆವು. ಆಮೇಲೆ ಅವರು ನನ್ನನ್ನೇ ಪಕ್ಷದಿಂದ ಉಚ್ಚಾಟಿಸಿದರು” ಎಂದರು.
“ಹಾಸನದಲ್ಲಿ ಈ ಮಟ್ಟದ ದೊಡ್ಡ ಜಸಮಾವೇಶ ಹಿಂದೆಂದೂ ಆಗಿರಲಿಲ್ಲ. ಇದರಲ್ಲಿ ಸ್ವಾಭಿಮಾನಿ ಒಕ್ಕೂಟಗಳು, ಕಾಂಗ್ರೆಸ್ಸೇತರ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷ ಒಟ್ಟಾಗಿ ಶ್ರಮಿಸಿದ್ದಾರೆ. ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ” ಎಂದು ಸಿಎಂ ಘೋಷಿಸಿದರು.

“ಡಾ.ರಾಜ್ಕುಮಾರ್ ಅವರು ತಮ್ಮ ಅಭಿಮಾನಿಗಳನ್ನು ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರ ಬಂಧುಗಳೇ ದೇವರು. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಆಶೀರ್ವದಿಸಿದ್ದಕ್ಕೆ ಧನ್ಯವಾದ ತಿಳಿಸುವೆ. ಹಾಸನದ ಮಹಾನ್ ನಾಯಕರ (ಎಚ್.ಡಿ. ದೇವೇಗೌಡ) ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣದಲ್ಲಿ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗನನ್ನು ಶಿಗ್ಗಾಂವಿಯಲ್ಲಿ ಜನ ಸೋಲಿಸಿ ನಮಗೆ ಆಶೀರ್ವದಿಸಿದ್ದಾರೆ” ಎಂದರು.
“ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತ ಈ ರಾಜ್ಯದ ಜನತೆ ಎಂದಿಗೂ ಕೊಟ್ಟಿಲ್ಲ. ಒಮ್ಮೆ ಕಾಂಗ್ರೆಸ್ ಬೆಂಬಲದಲ್ಲಿ, ಮತ್ತೊಮ್ಮೆ ಬಿಜೆಪಿ ಬೆಂಬಲದಲ್ಲಿ ಮುಖ್ಯಮಂತ್ರಿ ಆದರು. ಬಳಿಕ ಎರಡೂ ಪಕ್ಷಗಳಿಗೆ ವಂಚಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಸರ್ಕಾರ ಕೊಟ್ಟಿದೆ. ಮಾತ್ರವಲ್ಲ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. 2013 ರಲ್ಲಿ ಕೊಟ್ಟ ಮಾತಿನಂತೆ ಹಲವಾರು ಭಾಗ್ಯಗಳನ್ನು ಜಾರಿ ಮಾಡಿದೆವು. ಈ ಬಾರಿ ಐದಕ್ಕೆ ಐದೂ ಗ್ಯಾರಂಟಿಗಳ ಜೊತೆಗೆ, ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ” ಎಂದು ಭರವಸೆ ನೀಡಿದರು.
“ಬಿಜೆಪಿಯಾಗಲಿ, ಜೆಡಿಎಸ್ ಆಗಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಪ್ರಧಾನಿ ಮೋದಿ ಅವರ ಸರ್ಕಾರ ನಾವು ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಕೊಡಲಿಲ್ಲ. ಇಂತಹ ಜನದ್ರೋಹಿ ಸರ್ಕಾರ ಬಿಜೆಪಿಯದ್ದು. ನಾವು ಐದು ಗ್ಯಾರಂಟಿಗಳಿಗಾಗಿ ₹56 ಸಾವಿರ ಕೋಟಿ ರಾಜ್ಯದ ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಈ ಐದು ಗ್ಯಾರಂಟಿಗಳನ್ನು ಪಡೆಯುತ್ತಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ದೊಡ್ಡ ಜನದ್ರೋಹಿಗಳು” ಎಂದು ವಾಗ್ದಾಳಿ ನಡೆಸಿದರು.
“ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಿರುವ ಎಚ್.ಡಿ.ಕುಮಾರಸ್ವಾಮಿಯವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂರಿನ ಜನತೆಗೆ ನೀರು ಬೇಕಾಗಿದೆ; ಕೊಡಿಸಲಿ. ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ ಹಿರಿಯರು. ಅವರು ಅಷ್ಟೆ ಘನತೆಯಿಂದ ಮಾತಾಡಬೇಕಿತ್ತು. ಯಾವತ್ತೂ ಗರ್ವ ತೋರಿಸದ ನನಗೆ, ‘ಸಿದ್ದರಾಮಯ್ಯ ಅವರ ಗರ್ವಭಂಗ ಮಾಡ್ತೀನಿ’ ಎಂದರು. ಇದನ್ನು ನೀವು ಒಪ್ಪಿಕೊಳ್ಳುತ್ತೀರಾ..? ಸಹಿಸುತ್ತೀರಾ..? ಎಂದು ಸಭಿಕರನ್ನು ಪ್ರಶ್ನಿಸಿದರು; ಆಗ ಜನ ಚಪ್ಪಾಳೆ ಮೂಲಕ ಅವರ ಮಾತಿಗೆ ಬೆಂಬಲ ಸೂಚಿಸಿದರು.
“ಹಾಸನದ ಹೆಣ್ಣು ಮಕ್ಕಳು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ರೈತರ ಪಾಲಿನ ಸಾಲದಲ್ಲಿ ಶೇ.58 ರಷ್ಟನ್ನು ಕಡಿತಗೊಳಿಸಿದೆ. ಇದರಿಂದ ಹಾಸನದ ರೈತರು ಮತ್ತು ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮಗ ಎಂದುಕೊಂಡಿರುವ ಕುಮಾರಸ್ವಾಮಿಯವರು ಕೇಂದ್ರ ಸರ್ಕಾರವನ್ನು ಏಕೆ ಪ್ರಶ್ನಿಸುತ್ತಿಲ್ಲ? ನಬಾರ್ಡ್ನಿಂದ ಆಗಿರುವ ಅನ್ಯಾಯವನ್ನು ಅವರು ಏಕೆ ಸರಿಪಡಿಸುತ್ತಿಲ್ಲ? ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ₹11 ಸಾವಿರ ಕೋಟಿ ರಾಜ್ಯಕ್ಕೆ ಕೊಡಿಸಲು ಬಿಜೆಪಿ-ಜೆಡಿಎಸ್ ಏಕೆ ಬಾಯಿ ಬಿಡುತ್ತಿಲ್ಲ” ಸರಣಿ ಪ್ರಶ್ನೆಗಳನ್ನು ಮೈತ್ರಿ ನಾಯಕರ ಮುಂದಿಟ್ಟರು.
ನಾವು ವಚನ ಪಾಲಕರು, ವಚನ ಭ್ರಷ್ಟರಲ್ಲ: ಡಿಕೆಶಿ
ಸಮಾವೇಶದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದವರೂ ಅಧಿಕಾರಕ್ಕೆ ಬಂದಂತೆ. ನಮ್ಮ ಗ್ಯಾರಂಟಿಗಳ ಶಕ್ತಿಯಿಂದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅದ್ವಿತೀಯ ಗೆಲುವು ಸಾಧಿಸಿದೆ. ಇದು ಕೇವಲ ಜನಕಲ್ಯಾಣ ಸಮಾವೇಶವಲ್ಲ, ಗ್ಯಾರಂಟಿಗಳ ಗೆಲುವಿನ ಸಮಾವೇಶವಾಗಿದೆ. ಕಾಂಗ್ರೆಸ್ ಪಕ್ಷ ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ, ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತದೆ” ಎಂದರು.

“ನಮ್ಮ ಸರ್ಕಾರವನ್ನು ಕಿತ್ತೆಸೆಯುತ್ತೇವೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ರು, ಇದಕ್ಕೆ ಜನರೇ ಉತ್ತರ ಕೊಟ್ಟಿದ್ದಾರೆ. ನಾವು ವಚನ ಪಾಲಕರು, ವಚನ ಭ್ರಷ್ಟರಲ್ಲ. ಜನರಿಗೆ ಕೊಟ್ಟ ಮಾತುಗಳನ್ನು ನಾವು ಉಳಿಸಿಕೊಂಡಿದ್ದೇವೆ. ಜನರ ಬದುಕಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ಜನರ ನಂಬಿಕೆ ಹಾಗೂ ವಿಶ್ವಾಸವೇ ನಮಗೆ ಶಕ್ತಿ. ಈ ದೇಶಕ್ಕೆ ಅಂಬೇಡ್ಕರ್ ಅವರು ನೀಡಿದ ಸಂವಿಧಾನವನ್ನು ನಾವು ಉಳಿಸಿಕೊಳ್ಳಬೇಕು. ಹಾಸನದ ಸ್ವಾಭಿಮಾನ ಉಳಿಸಲು ಈ ಸಮಾವೇಶ ಸಹಕಾರಿಯಾಗಿದೆ. ಜನಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ 2028ರಲ್ಲೂ ಅಧಿಕಾರಕ್ಕೆ ಬರುವುದು ನಿಶ್ಚಿತ” ಎಂದು ಭರವಸೆ ವ್ಯಕ್ತಪಡಿಸಿದರು.
“ಗೃಹಲಕ್ಮೀ ಯೋಜನೆ ಬಂದ್ ಮಾಡಲು ಬಿಜೆಪಿ ಕುತಂತ್ರ ನಡೆಸಿದೆ. ಗ್ಯಾರಂಟಿಗಳ ಮೇಲೆ ಬಿಜೆಪಿ ಕಣ್ಣು ಹಾಕಿದೆ. ನಮ್ಮ ಗ್ಯಾರಂಟಿಗಳನ್ನು ಮುಟ್ಟಲು ಯಾರಿಗೂ ಸಧ್ಯವಿಲ್ಲ. ನಾವು ಸಂವಿಧಾನದ ರಕ್ಷಣೆ ಮಾಡ್ತೇವೆ. ಕೇಂದ್ರದಲ್ಲಿರುವ ಬಿಜೆಪಿ ಬಂಡವಾಳ ಶಾಹಿಗಳ ಪರ ಇದೆ” ಎಂದರು.
“ಈ ಬಂಡೆ ಶಿವಕುಮಾರ್ ಸಿದ್ದರಾಮಯ್ಯ ಜೊತೆಗೆ ಇರುತ್ತಾನೆ. ಸಾಯುವವರೆಗೂ ಸಿದ್ದರಾಮಯ್ಯ ಜೊತೆ ನಾನು ಇರ್ತೇನೆ. 5 ಗ್ಯಾರಂಟಿಗಳು ಫರ್ಮನೆಂಟು. 2028ರಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ. ಕಮಲ ಕೆರೆಯಲ್ಲಿ ಇದ್ದರೆ ಚಂದ. ದಾನ-ಧರ್ಮದ ಕೈ ಅಧಿಕಾರದಲ್ಲಿ ಇದ್ದರೆ ಚೆಂದ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಮುಂದೊಂದು ದಿನ ಹಾಸನದ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ತಾಯಂದಿರ ಸ್ವಾಭಿಮಾನ ಉಳಿಸಲು ಸ್ವಾಭಿಮಾನಿ ಸಮಾವೇಶ ಹಮ್ಮಿಕೊಂಡಿದ್ದೇವೆ” ಎಂದು ಹೇಳಿದರು.
ಬಿಜೆಪಿಯಿಂದ ಸಿಎಂ-ಡಿಸಿಎಂ ಟಾರ್ಗೆಟ್: ಸುರ್ಜೇವಾಲ
ಸಮಾವೇಶದಲ್ಲಿ ನೆರೆದಿದ್ದ ಸಭಿಕರನ್ನುದ್ದೇಶಿಸಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ ದೀಪ್ ಸಿಂಗ್ ಸುರ್ಜೇವಾವಾ, “ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬಿಜೆಪಿ ಟಾರ್ಗೆಟ್ ಮಾಡಿದ್ದು, ಇಡಿ ಮೂಲಕ ಅವರನ್ನು ಬೆದರಿಸಲಾಗುತ್ತಿದೆ. ಹಾಗೆಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ಕುರುಕುಳ ನೀಡುತ್ತಿದೆ. ಇದು ಕರ್ನಾಟಕದ ಕಡು ಬಡವರ ಮೇಲೆ ಮಾಡುತ್ತಿರುವ ದಾಳಿಯಾಗಿದೆ” ಎಂದರು.

“ಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳ ಯಶಸ್ಸನ್ನು ಸಹಿಸದ ಬಿಜೆಪಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದೆ” ಎಂದರು.
ಇದನ್ನೂ ಓದಿ; ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್


