ದಕ್ಷಿಣದ ಕನ್ನಡ ಜಿಲ್ಲೆಯ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ (ಕೋಟೆಕಾರು ಬ್ಯಾಂಕ್) ಕೆ.ಸಿ.ರೋಡ್ ಶಾಖೆಗೆ ನುಗ್ಗಿದ ಐದು ಮಂದಿ ಬಂದೂಕುಧಾರಿಗಳು ದರೋಡೆ ಮಾಡಿರುವ ಘಟನೆ ಇಂದು (ಜ.17) ನಡೆದಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ.
ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಸಿಎಂ ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ನ ಐಜಿ ಅಮಿತ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಎಸ್ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದ್ದಾರೆ.
ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಸಿಎಂ, “ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ? ಎಷ್ಟು ಟೋಲ್ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ.
ಸಹಕಾರಿ ಬ್ಯಾಂಕ್ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.
ಎಲ್ಲಾ ಟೋಲ್ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ.
ಕಾರಿನಲ್ಲಿ ಬಂದ ಐವರು ದರೋಡೆಕೋರರು ಬ್ಯಾಂಕ್ ಕಚೇರಿಗೆ ನುಗ್ಗಿ ಬಂದೂಕು ತೋರಿಸಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ. ಈ ವೇಳೆ ಕೆಲಸದಲ್ಲಿ ನಿರತರಾಗಿದ್ದ ಮಹಿಳಾ ಸಿಬ್ಬಂದಿ ಬೊಬ್ಬೆ ಹೊಡೆಯಲು ಮುಂದಾದಾಗ ಅವರನ್ನು ಹೆದರಿಸಿದ ದರೋಡೆ ಕೋರರು ನಗ ನಗದು ದೋಚಿ ಪರಾರಿಯಾಗಿದ್ದಾರೆ.
ನಿನ್ನೆ ಬೀದರ್ನಲ್ಲಿ ದರೋಡೆ
ನಿನ್ನೆ (ಜ.16) ಬೀದರ್ನಲ್ಲಿ ಎಟಿಎಂಗೆ ತುಂಬಲು ತಂದಿದ್ದ 93 ಲಕ್ಷ ರೂಪಾಯಿ ಹಣವನ್ನು ದೋಚಿದ್ದ ದರೋಡೆಕೋರರು ಒಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದರು.
ಇದನ್ನೂ ಓದಿ : ಕೆಪಿಸಿಸಿ ನಾಯಕತ್ವ ಬದಲಾವಣೆ ವದಂತಿಗಳನ್ನು ತಳ್ಳಿಹಾಕಿದ ರಣದೀಪ್ ಸಿಂಗ್ ಸುರ್ಜೇವಾಲಾ


