ಸಂಯೋಜನೆ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ 4,200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ಖಂಡಿಸಿ ಸೋಮವಾರ ವಿದ್ಯಾರ್ಥಿ ಸಂಘಟನೆ ಎಐಡಿಎಸ್ಓ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ. ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ’ ಎಂದು ಎಐಡಿಎಸ್ಓ ಹೇಳಿದ್ದು, ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿದೆ.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ರಾಜ್ಯ ಖಚಾಂಜಿ ಸುಭಾಷ್ ಬೆಟ್ಟದ ಕೊಪ್ಪ, “ಇತ್ತೀಚೆಗಷ್ಟೆ ರಾಜ್ಯ ಸರ್ಕಾರವು ‘ ಹಬ್ ಅಂಡ್ ಸ್ಪೋಕ್’ ಅಡಿಯಲ್ಲಿ ಕಡಿಮೆ ಹಾಜರಾತಿ ಇರುವ ಸರ್ಕಾರಿ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜಿಸುವ ನಿರ್ಧಾರವನ್ನು ಪ್ರಕಟಿಸಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಸುಧಾರಣಾ ಸಮಿತಿಯನ್ನು ಸಹ ರಚಿಸಲಾಗಿದೆ. ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ರಾಜ್ಯದಲ್ಲಿ 4 ಸಾವಿರಕ್ಕೂ ಅಧಿಕ ಶಾಲೆಗಳು 10 ಮಕ್ಕಳಿಗಿಂತ ಕಡಿಮೆ ದಾಖಲಾತಿಯನ್ನು ಹೊಂದಿವೆ” ಎಂದು ಹೇಳಿದ್ದಾರೆ. ಸಂಯೋಜನೆ ಹೆಸರಿನಲ್ಲಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಈ ಎಲ್ಲಾ ಶಾಲೆಗಳ ಭವಿಷ್ಯದ ಕುರಿತು ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ತಲೆದೊರಿದೆ. ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಲ್ಯಾಣ್ ಅವರು ಮಾತನಾಡಿ, “ಕರ್ನಾಟಕ ರಾಜ್ಯದಲ್ಲಿ 6,000 ಕ್ಕಿಂತ ಹೆಚ್ಚು ಏಕೋಪಾಧ್ಯಾಯ ಶಾಲೆಗಳಿವೆ. 50,000 ಕ್ಕಿಂತ ಹೆಚ್ಚು ಶಿಕ್ಷಕರನ್ನು ನೇಮಕ ಮಾಡಿಕೊಂಡಿಲ್ಲ. ಶಾಲೆಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕ್ರಮಗಳನ್ನು ಕೈಗೊಳ್ಳದೆ, ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ'” ಎಂದು ಹೇಳಿದ್ದಾರೆ.
ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ. “ಆದ್ಯತೆಯ ಮೇರೆಗೆ ಸರ್ಕಾರವು ಶಿಕ್ಷಣಕ್ಕೆ ಬಜೆಟ್ ನಲ್ಲಿ ಅನುದಾನ ನಿಗದಿಪಡಿಸಬೇಕು. ಸರ್ಕಾರಿ ಶಾಲೆಗಳನ್ನು ಸಂಯೋಜನೆಗೊಳಿಸುವ ಬದಲು ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯ ನೀಡಿ ರಕ್ಷಿಸಬೇಕು” ಎಂದು ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಮುಂದಿನ ದಿನಗಳಲ್ಲಿ ಶಾಲೆಗಳ ಮುಚ್ಚುವಿಕೆಯ ವಿರುದ್ಧ ಬಲಿಷ್ಠ ಹೋರಾಟಗಳನ್ನು ಸಂಘಟಿಸುತ್ತೇವೆ. ಶಾಲೆಗಳಲ್ಲಿ ಹೋರಾಟದ ಸಮಿತಿಗಳನ್ನು ರಚಿಸಿ, ಪೋಷಕರ ಸಭೆಗಳನ್ನು ಸಂಘಟಿಸುತ್ತಿದ್ದೇವೆ. ಈ ಹೋರಾಟದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಶಾಲೆಗಳ ಸಂಯೋಜನೆಯನ್ನು ಕೈಬಿಟ್ಟು ಸಮರ್ಪಕ ಮೂಲಭೂತ ಸೌಲಭ್ಯ ನೀಡಿ ಸರ್ಕಾರಿ ಶಾಲೆಗಳನ್ನು ಬಲಪಡಿಸಿ ಎಂದು ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇದನ್ನೂಓದಿ: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ
ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ


