ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ, ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ (ಜ.28) ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ ಮೇಲ್ಮನವಿ ಹೋಗಿ, ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ? ಈ ಬಗ್ಗೆ ವಿವರ ಕೊಡಿ ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳನ್ನು ಪ್ರಶ್ನಿಸಿದರು.
ಪೊಲೀಸ್ ಇಲಾಖೆಯಲ್ಲಿ ಹಿರಿತನ ಪಟ್ಟಿ ಉಲ್ಲಂಘನೆಯಾಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು, ನಾವು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ? ಎಂದು ಸಭೆಯಲ್ಲಿ ಸಿಎಂ ಅಧಿಕಾರಿಗಳನ್ನು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಈ. ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಎಡಿಜಿಪಿ ಅಡ್ಮಿನ್, ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ, ಈ ವಿಚಾರವನ್ನು ಮುಂದಿನ ಸಂಪುಟ ಸಭೆಯ ಮುಂದಿಡಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.
ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ, ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಪ್ರಶ್ನಿಸಿದರು.
ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
ಎಲ್ಲಾ ಇಲಾಖೆಗಳು ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಟ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ. ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ ಪರಿಶೀಲನೆ ಮೀಟಿಂಗ್ ಕರೆಯುವಂತೆ ಸಿಎಂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದರು.
ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.
ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್ಪಿ-ಡಿಸಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದರು.
ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಮಹಿಳೆಯರ ಅಹೋರಾತ್ರಿ ಧರಣಿ ವಿಚಾರವನ್ನು ಸಿಎಂ ಸಭೆಯಲ್ಲಿ ಪ್ರಸ್ತಾಪಿಸಿದರು. ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವೈಜ್ಞಾನಿಕವಾಗಿ ದೇವದಾಸಿ ಮಹಿಳೆಯರ ಸ್ಥಿತಿಗತಿ ಬಗ್ಗೆ ಸಮೀಕ್ಷೆ ನಡೆಸಬೇಕು ಎನ್ನುವುದು ಪ್ರತಿಭಟನಾ ನಿರತರ ಬೇಡಿಕೆಯಾಗಿದೆ ಎಂದು ಉಲ್ಲೇಖಿಸಿದ ಸಿಎಂ, ದೇವದಾಸಿಯರ ಪುನರ್ವಸತಿ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಕೇಳಿದರು. ಈ ಬಗ್ಗೆ ಕೆಲ ಹೊತ್ತು ಚರ್ಚೆ ನಡೆದ ಬಳಿಕ ದೇವದಾಸಿಯರ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದರು.
ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸಿಎಂ ಸೂಚಿಸಿದರು. ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಆದೇಶಿಸಿದರು.
ಮೂಡಾ ಹಗರಣ | ಸಿದ್ದರಾಮಯ್ಯ ಪತ್ನಿ, ಭೈರತಿ ಸುರೇಶ್ಗೆ ಇಡಿ ನೀಡಿದ್ದ ನೋಟಿಸ್ಗೆ ತಡೆ


