Homeಕರ್ನಾಟಕಜಾತಿ ನಿಂದನೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಜಾತಿ ನಿಂದನೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

- Advertisement -
- Advertisement -

ದಲಿತ ಕುಟುಂಬಗಳ ಶೆಡ್‌ಗಳನ್ನು ನಾಶಪಡಿಸಿ, ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ (ಜ.30) ಕಾಯ್ದಿರಿಸಿದೆ.

ಮಾದಿಗ ಸಮುದಾಯದ 20 ವರ್ಷದ ಮಹಿಳೆ ಮೇಲೆ ದೌರ್ಜನ್ಯ ನಡೆಸಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಮುನಿರತ್ನ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ನಡೆಸಿದ್ದಾರೆ.

ವಿಚಾರಣೆ ವೇಳೆ ಸಂತ್ರಸ್ತೆ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ಹೆಚ್‌ ಹನುಮಂತರಾಯ ಅವರು “ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಚರಿತ್ರೆಯ ತುಂಬಾ ಆಘಾತಕಾರಿ ಅಧ್ಯಾಯಗಳಿವೆ. ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿ ಪ್ರದೇಶವನ್ನು ಮುನಿರತ್ನ ಮತ್ತು ಅವರ ಬೆಂಬಲಿಗರು ಬಲವಂತದಿಂದ ತೆರವುಗೊಳಿಸಿ ಪುನರ್ವಸತಿ ಕೇಳಿದವರ ವಿರುದ್ಧ ಅಮಾನವೀಯವಾಗಿ ವರ್ತಿಸಿದ್ದಾರೆ. ಮುನಿರತ್ನ ಎಂಥವರು ಎಂಬುವುದು ಎಲ್ಲರಿಗೂ ಗೊತ್ತಿದೆ. ಅವರು ತಾವೊಬ್ಬ ಸಾಚಾ ಎಂದು ಪ್ರತಿಬಿಂಬಿಸಿಕೊಂಡರೆ ಅದನ್ನೆಲ್ಲಾ ನಂಬಲಾಗದು” ಎಂದಿದ್ದಾರೆ.

“ಮುನಿರತ್ನ ಮತ್ತು ಅವರ ಬೆಂಬಲಿಗರು ಬಡವರನ್ನು, ಹೆಣ್ಣು ಮಕ್ಕಳನ್ನು ಗುಡಿಸಲುಗಳಿಂದ ರಾತ್ರೋರಾತ್ರಿ ಹೊರ ಹಾಕಿದ್ದಾರೆ. ಇಂತಹ ಕುಕೃತ್ಯಗಳನ್ನು ಮುನಿರತ್ನ ಮಾಡಿಕೊಂಡೇ ಬಂದವರು. ತಮ್ಮ ಮೇಲೆ ಆಪಾದನೆಗಳು ಬಂದಾಗಲೆಲ್ಲಾ ಅವುಗಳಿಂದ ಹೊರ ಬರುವುದು ಹೇಗೆ ಎಂಬುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ಪ್ರತಿ ಘಟನೆಯಲ್ಲೂ ಹಿಂದಿನ ಅನುಭವಗಳ ಆಧಾರದಲ್ಲಿ ತುಂಬಾ ಹುಷಾರಾಗಿ ವರ್ತಿಸುತ್ತಾರೆ” ಎಂದು ವಕೀಲರು ದೂರಿದ್ದಾರೆ.

“ಈ ಪ್ರಕರಣದಲ್ಲಿ ಪ್ರಾಥಮಿಕ ವಿಚಾರಣೆಯ ಅವಶ್ಯಕತೆಯೇ ಇಲ್ಲ. ಒಕ್ಕಲೆಬ್ಬಿಸಿದವರಿಗೆ ಪೂರ್ವಭಾವಿಯಾಗಿ ನೋಟಿಸ್‌ ನೀಡಿಲ್ಲ. ಸೂಕ್ತ ಪುನರ್ವಸತಿ ಕಲ್ಪಿಸಿಲ್ಲ. ವಾಸ್ತವದಲ್ಲಿ ಇದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿರುವ ಕಾರ್ಯಾಚರಣೆಯೇ ಅಲ್ಲ. ಮುನಿರತ್ನ ಸುತ್ತಮುತ್ತ ಇರುವ ಮಾಜಿ ಕಾರ್ಪೊರೇಟರ್‌ಗಳು ಮತ್ತು ಟಿಕೆಟ್‌ ಆಕಾಂಕ್ಷಿಗಳ ತಂಡದಿಂದ ಮುನಿರತ್ನ ನಡೆಸಿರುವ ದುಷ್ಕತ್ಯವಿದು. ಆದಾಗ್ಯೂ, ಸತ್ಯ ಹೊರಗೆಳೆಯುತ್ತೇನೆ ಎಂದು ಈ ಹೆಣ್ಣು ಮಗಳು ಧೈರ್ಯ ಮಾಡಿ ದೂರು ಕೊಟ್ಟಿದ್ದಾರೆ. ಹೀಗಾಗಿ, ಮುನಿರತ್ನಗೆ ನಿರೀಕ್ಷಣಾ ಜಾಮೀನು ನೀಡಬಾರದು” ಎಂದು ವಕೀಲರು ಮನವಿ ಮಾಡಿದ್ದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಮುನಿರತ್ನ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ ಹಾರನಹಳ್ಳಿ “ಇದರಲ್ಲಿ ಮುನಿರತ್ನ ಪಾತ್ರವೇ ಇಲ್ಲ. ಇದೆಲ್ಲಾ ಬಿಬಿಎಂಪಿ ಕಾನೂನುಬದ್ಧವಾಗಿ ನಡೆಸಿರುವ ಕಾರ್ಯಾಚರಣೆ. ಇದಕ್ಕೆ ಪತ್ರಿಕಾ ವರದಿಗಳೇ ಸಾಕ್ಷಿ. ಸದ್ಯ ಪಾಲಿಕೆಯಲ್ಲಿ ಕಾರ್ಪೋರೇಟರ್‌ಗಳು ಇಲ್ಲ. ಅಧಿಕಾರಿಗಳೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಮುನಿರತ್ನ ವಿರುದ್ಧ ರೂಪಿಸಿರುವ ರಾಜಕೀಯ ಪ್ರೇರಿತ ದೂರಿದು. ಆದ್ದರಿಂದ, ನಿರೀಕ್ಷಣಾ ಜಾಮೀನು ನೀಡಬೇಕು” ಎಂದು ಕೋರಿದ್ದಾರೆ.

ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದಾರೆ. ಮುನಿರತ್ನ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಆದೇಶವನ್ನು ವಿಸ್ತರಿಸಿದ್ದಾರೆ. ಸಿಐಡಿ ಪರ ಪ್ರಾಸಿಕ್ಯೂಟರ್ ಝೈದಾ ಬಾನು ಖಾಜಿ ಆಕ್ಷೇಪಣೆ ಸಲ್ಲಿಸಿದ್ದಾರೆ ಎಂದು ಬಾರ್ & ಬೆಂಚ್ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 60ರಿಂದ 70ರಷ್ಟು ಉತ್ತರ ಕರ್ನಾಟಕದ ದಲಿತ ಕುಟುಂಬಗಳನ್ನು ಜನವರಿ 20ರಂದು ಶಾಸಕ ಮುನಿರತ್ನ ಮತ್ತು ಬೆಂಬಲಿಗರಾದ ವಸಂತಕುಮಾರ್, ಚನ್ನಕೇಶವ, ಗೊರಗುಂಟೆಪಾಳ್ಯದ ನವೀನ, ಶ್ರೀರಾಮ, ಪೀಣ್ಯದ ಕಿಟ್ಟಿ, ಗಂಗಾ ಮತ್ತು ಇತರರು ಕಾನೂನು ಬಾಹಿರವಾಗಿ ಜೆಸಿಬಿ ತಂದು ತೆರವುಗೊಳಿಸಿದ್ದಾರೆ. ಅಲ್ಲದೆ, ನನಗೆ ಜಾತಿನಿಂದನೆ ಮಾಡಿ ಅಲ್ಲಿದ್ದ ಕೆಲ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಎದೆಗೆ ಮುನಿರತ್ನ ಒದ್ದಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಜನವರಿ 20ರಂದು ದೂರು ನೀಡಿದ್ದರು.

ಈ ದೂರು ಆಧರಿಸಿ ಪೊಲೀಸರು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ-2023ರ ಸೆಕ್ಷನ್‌ಗಳಾದ 324(2),74,351(2), 351(3) ಮತ್ತು 190 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ–2014ರ ಸೆಕ್ಷನ್‌ 3(1), ಆರ್‌(ಎಸ್‌) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಮುನಿರತ್ನ ವಿರುದ್ದ ದೋಷಾರೋಪ ಪಟ್ಟಿ ಸಲ್ಲಿಕೆ

ಮುನಿರತ್ನ ವಿರುದ್ದದ ಅತ್ಯಾಚಾರ, ಹನಿಟ್ರ್ಯಾಪ್ ಮತ್ತು ಹೆಚ್‌ಐವಿ ಸೋಂಕು ಹರಡಲು ಯತ್ನಿಸಿದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ವರದಿಗಳ ಪ್ರಕಾರ, ಡಿಸೆಂಬರ್ 17, 2024ರಂದು 2,481 ಪುಟಗಳ ದೋಷಾರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಕೆ ಮಾಡಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿ ಆರೋಪಿಗಳಲ್ಲಿ ಶಾಸಕ ಮುನಿರತ್ನ, ಪೊಲೀಸ್ ಇನ್ಸ್‌ಪೆಕ್ಟರ್ ಐಯ್ಯನ ರೆಡ್ಡಿ ಮತ್ತು ಮುನಿರತ್ನ ಅವರ ಇಬ್ಬರು ಸಹಚರರಾದ ಶ್ರೀನಿವಾಸ್ ಪಿ. ಮತ್ತು ಸುಧಾಕರ್ ಆರ್ ವಿರುದ್ಧ ಎಸ್‌ಐಟಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.

ಆರೋಪಿಗಳ ವಿರುದ್ದ ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಕ್ಕಾಗಿ ಸೆಕ್ಷನ್ 376 (2)(n), ಜೀವಕ್ಕೆ ಅಪಾಯಕಾರಿಯಾದ ಕಾಯಿಲೆಯ ಸೋಂಕನ್ನು ಹರಡಿದ್ದಕ್ಕಾಗಿ ಸೆಕ್ಷನ್‌ 270 ಮತ್ತು ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಭಾಗದ ಚಿತ್ರವನ್ನು ಸೆರೆಹಿಡಿದಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಸಿ, ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ.

ಹೆಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಆರೋಪ | ಫೆ.21ರ ಒಳಗೆ ವರದಿ ಸಲ್ಲಿಕೆ : ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...