ಕೋವಿಡ್ ವೇಳೆ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎ ಪಾಟೀಲ್ ಅವರ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಸಚಿವ ಸಂಪುಟ ಉಪ ಸಮಿತಿ ಸಭೆ ನಂತರ ಮಾಧ್ಯಮದವರನ್ನು ಉದ್ದೇಶಿಸಿ ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, “ಚಾಮರಾಜನಗರ ದುರಂತ ನಡೆದ ವೇಳೆ ನಾನು ಹಾಗೂ ಸಿದ್ದರಾಮಯ್ಯನವರು ಸ್ಥಳಕ್ಕೆ ತೆರಳಿ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೆವು. ಮೃತರ ಕುಟುಂಬ ವರ್ಗದವರನ್ನೂ ಭೇಟಿ ಮಾಡಲಾಗಿತ್ತು. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅವರು ಯಾರ ತಪ್ಪಿದೆ ಎಂದು ಹೇಳಿದ್ದರು” ಎಂದಿದ್ದಾರೆ.
ವರದಿಯಲ್ಲಿ ಕುನ್ಹಾ ಅವರು ಹೆಸರಿಸಿರುವ ಹಿಂದಿನ ಆರೋಗ್ಯ ಸಚಿವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆಯೇ ? ಎಂದು ಕೇಳಿದಾಗ, “ಕೋವಿಡ್ ಅಕ್ರಮಗಳ ಬಗ್ಗೆ ಮೈಕೆಲ್ ಕುನ್ಹಾ ಅವರು ಅತ್ಯಂತ ಸಮಗ್ರವಾಗಿ ವರದಿಯನ್ನು ನೀಡಿದ್ದಾರೆ. ಅದನ್ನು ಕೂಲಂಕುಷವಾಗಿ ಅಧ್ಯಯನ ಮಾಡಬೇಕಾಗುತ್ತದೆ. ಇದರಲ್ಲಿ ಕಾನೂನು ಸಂಬಂಧಿತ, ಕ್ರಿಮಿನಲ್ ಸಂಬಂಧಿತ ವಿಚಾರಗಳನ್ನು ಗಮನಿಸಲು ಸಹಾಯ ತೆಗೆದುಕೊಳ್ಳಲಾಗುತ್ತಿದೆ” ಎಂದು ತಿಳಿಸಿದ್ದಾರೆ.
“ಸುಮಾರು 29 ಜನ ಅಧಿಕಾರಿಗಳು ಸಮಿತಿ ನೀಡಿರುವ ನೋಟಿಸ್ಗೆ ಉತ್ತರ ನೀಡಿಲ್ಲ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಕುನ್ಹಾ ಅವರು ವರದಿಯಲ್ಲಿ ಅನೇಕ ರಾಜಕಾರಣಿಗಳ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇದರ ಬಗ್ಗೆ ನಮಗೂ ಅರಿವಿದೆ. ಸೂಕ್ತಕಾಲದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಕೆಶಿ ಹೇಳಿದ್ದಾರೆ.
15 ದಿನಗಳಿಗೊಮ್ಮೆ ಸಭೆ, ಸಮಿತಿಗೆ ಹಿರಿಯ ಅಧಿಕಾರಿಗಳ ನೇಮಕ :
“ಮುಂದಿನ ದಿನಗಳಲ್ಲಿ ಪ್ರತಿ 15 ದಿನಗಳಿಗೊಮ್ಮೆ ಉಪಸಮಿತಿ ಸಭೆ ನಡೆಸಬೇಕು ಎನ್ನುವ ತೀರ್ಮಾನಕ್ಕೆ ಬರಲಾಗಿದೆ. ಅಧಿಕಾರಿಗಳ ಕೊರತೆ ಇರುವ ಕಾರಣಕ್ಕೆ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಸಮಿತಿಗೆ ನೇಮಕ ಮಾಡಿ ಅವರಿಗೂ ಕೆಲವು ಜವಾಬ್ದಾರಿಗಳನ್ನು ನೀಡಬೇಕು ಎಂದು ತೀರ್ಮಾನ ಮಾಡಲಾಗಿದೆ” ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
“ಆರೋಗ್ಯ ಇಲಾಖೆ ನಡೆಸುವುದು ಪ್ರತಿ ದಿನವೂ ಸವಾಲಿನಿಂದ ಕೂಡಿರುವ ಕೆಲಸ. ಇಲಾಖೆ ಅಡಿಯಲ್ಲಿ 70 ಮೆಡಿಕಲ್ ಕಾಲೇಜುಗಳು ಬರುತ್ತವೆ. ದಿನವು ಹೊಸ ಸವಾಲುಗಳು ಎದುರಾಗುತ್ತವೆ. ಆದ ಕಾರಣ ಒಂದಷ್ಟು ಜವಾಬ್ದಾರಿಗಳನ್ನು ಹಿರಿಯ ಅಧಿಕಾರಿಗಳಿಗೆ ನೀಡಲಾಗುವುದು” ಎಂದು ಹೇಳಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ವಕ್ತಾರ :
ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ಸತೀಶ್ ಜಾರಕಿಹೊಳಿ ಅವರು ಭೇಟಿ ಮಾಡಿರುವ ಬಗ್ಗೆ ಕೇಳಿದಾಗ, “ನಾನು ಕಾಂಗ್ರೆಸ್ ಪಕ್ಷದ ವಕ್ತಾರ. ಕುಮಾರಸ್ವಾಮಿ ಹಾಗೂ ಸತೀಶ್ ಜಾರಕಿಹೊಳಿ ಅವರ ಬಳಿ ಈ ಬಗ್ಗೆ ಚರ್ಚೆ ಮಾಡಿದರೆ ಒಳ್ಳೆಯದು. ದೇಶ, ರಾಜ್ಯ, ವೈಯಕ್ತಿಕ ವಿಚಾರಗಳಿಗೆ ಭೇಟಿಯಾಗಿದ್ದರೋ ತಿಳಿದಿಲ್ಲ. ಇದರ ಬಗ್ಗೆ ಅವರನ್ನೇ ಕೇಳಿದರೆ ಬಹಳ ಉತ್ತಮ” ಎಂದಿದ್ದಾರೆ.
ಯತ್ನಾಳ್ ಉಚ್ಚಾಟನೆ ಬಿಜೆಪಿ ಆಂತರಿಕ ವಿಚಾರ :
ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿರುವ ಬಗ್ಗೆ ಕೇಳಿದಾಗ, “ಬಿಜೆಪಿಯ ಆಂತರಿಕ ವಿಚಾರಗಳನ್ನು ನಾನು ಏಕೆ ಮಾತನಾಡಲಿ? ಅವರ ಪಕ್ಷದ ಮುತ್ತು ರತ್ನಗಳನ್ನು ಇಟ್ಟುಕೊಳ್ಳಲಿ ಅಥವಾ ಆಚೆಯಾದರೂ ಬಿಸಾಡಲಿ” ಎಂದು ಕುಟುಕಿದರು.
ಯತ್ನಾಳ್ ಅವರು ನಮ್ಮಲ್ಲಿ ಇದ್ದಿದ್ದರೆ ಇಷ್ಟೊತ್ತಿಗಾಗಲೇ ನಾನು ಪಕ್ಷದಿಂದ ಉಚ್ಚಾಟನೆ ಮಾಡುತ್ತಿದ್ದೆ ಎನ್ನುವ ಹಿಂದಿನ ಹೇಳಿಕೆ ಬಗ್ಗೆ ಕೇಳಿದಾಗ, “ಒಂದಷ್ಟು ಜನ ಶೋಭೆಗೆ ಎಂದು ಓಲೆ, ಮೂಗುತಿ, ಹಣೆಗೆ ಕುಂಕುಮ ಇಟ್ಟುಕೊಳ್ಳುತ್ತಾರೆ. ಅದೇ ರೀತಿ ಒಂದಷ್ಟು ಜನ ಪಕ್ಷದಲ್ಲಿ ಇದ್ದರೆ ಒಳ್ಳೆಯದು” ಎಂದು ಮಾರ್ಮಿಕವಾಗಿ ನುಡಿದರು.


