Homeಮುಖಪುಟ'ಕೊನೆ ಉಸಿರಿನವರೆಗೂ ಹೋರಾಡುತ್ತೇನೆ': ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ

‘ಕೊನೆ ಉಸಿರಿನವರೆಗೂ ಹೋರಾಡುತ್ತೇನೆ’: ಸುಪ್ರೀಂ ಮೊರೆ ಹೋಗಲು ಮುಂದಾದ ನಜೀಬ್ ತಾಯಿ

ಜೆಎನ್‌ಯು ವಿದ್ಯಾರ್ಥಿಯಾಗಿದ್ದ ನಜೀಬ್ ನಾಪತ್ತೆಯಾಗಿ 9 ವರ್ಷ ಕಳೆದರೂ ಸುಳಿವು ಸಿಕ್ಕಿಲ್ಲ. ಪ್ರಕರಣ ಮುಚ್ಚಲು ಸಿಬಿಐಗೆ ಕೋರ್ಟ್ ಅನುಮತಿ ನೀಡಿದೆ.

- Advertisement -
- Advertisement -

“ನನ್ನ ಮಗನನ್ನು ಹುಡುಕಲು ಕೊನೆ ಉಸಿರಿನವರೆಗೆ ಹೋರಾಡುತ್ತೇನೆ. ಇದಕ್ಕಾಗಿ ದೇಶದ ಯಾವುದೇ ನ್ಯಾಯಾಲದ ಮೆಟ್ಟಿಲೇರಲು ನಾನು ಸಿದ್ದ. ನಾನು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇನೆ” ಎಂದು 9 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿರುವ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಅವರ ತಾಯಿ ಫಾತಿಮಾ ನಫೀಸ್ ಮಂಗಳವಾರ (ಜುಲೈ 1, 2025) ಹೇಳಿದ್ದಾರೆ.

ಅಕ್ಟೋಬರ್ 15,2016ರಂದು ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗಿನ ವಾಗ್ವಾದದ ನಂತರ ನಜೀಬ್ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಈ ಪ್ರಕರಣದ ಮುಕ್ತಾಯ ವರದಿಯನ್ನು 2018ರಲ್ಲಿ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ವರದಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ (ಜೂನ್ 30,2025) ಸ್ವೀಕರಿಸಿದೆ.

“ಇಲ್ಲಿಯವರೆಗೆ, ದೆಹಲಿ ಪೊಲೀಸರು ಅಥವಾ ಸಿಬಿಐಗೆ ನನ್ನ ಮಗನನ್ನು ಥಳಿಸಿ ನಂತರ ಅವನು ಕಣ್ಮರೆಯಾಗುವಂತೆ ಮಾಡಿದ ಎಬಿವಿಪಿ ಗೂಂಡಾಗಳನ್ನು ಬಂಧಿಸಲು ಅಥವಾ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ” ಎಂದು ಫಾತಿಮಾ ಬೇಸರ ವ್ಯಕ್ತಪಡಿಸಿದ್ದಾರೆ.

“ವರ್ಷಗಳಿಂದ ನನ್ನ ಮಗನ ಬಗ್ಗೆ ವದಂತಿಗಳು ಮತ್ತು ಸುಳ್ಳುಗಳನ್ನು ಹರಡಲಾಗುತ್ತಿತ್ತು. ದೆಹಲಿ ಹೈಕೋರ್ಟ್ ಆದೇಶದ ನಂತರ ಅವುಗಳನ್ನು ಎಲ್ಲಾ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕಲಾಯಿತು. ಆದರೆ, ಸತ್ಯವೆಂದರೆ ಇಷ್ಟು ದೊಡ್ಡ ತನಿಖಾ ಸಂಸ್ಥೆಗಳು ಮತ್ತು ಇಡೀ ನ್ಯಾಯಾಂಗ ವ್ಯವಸ್ಥೆಗೆ ಇಲ್ಲಿಯವರೆಗೆ ನನ್ನ ನಜೀಬ್ ಎಲ್ಲಿದ್ದಾನೆಂದು ಹೇಳಲು ಸಾಧ್ಯವಾಗಿಲ್ಲ,” ಎಂದು ಫಾತಿಮಾ ನೋವು ಹೊರಹಾಕಿದ್ದಾರೆ.

2018 ರಲ್ಲಿ, ನಜೀಬ್ ಇಸ್ಲಾಮಿಕ್ ಸ್ಟೇಟ್ ಸೇರಲು ತೆರಳಿದ್ದಾರೆ ಎಂಬ ಆಧಾರರಹಿತ ಸುದ್ದಿಗಳನ್ನು ತಮ್ಮ ವೆಬ್‌ಸೈಟ್‌ಗಳಿಂದ ತೆಗೆದುಹಾಕುವಂತೆ ಕೆಲವು ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್‌ಗಳಿಗೆ ಹೈಕೋರ್ಟ್ ಆದೇಶಿಸಿತ್ತು.

ಕಳೆದ 9 ವರ್ಷಗಳ ಕಾಲ ನಾನು ನಜೀಬ್‌ಗಾಗಿ ಹೋರಾಡುವಾಗ ಈ ವ್ಯವಸ್ಥೆ ನನ್ನನ್ನು ಮೌನವಾಗಿಸಲು ಪ್ರಯತ್ನಿಸಿತು. ಆದರೆ, ಜೆಎನ್‌ಯು, ಎಎಂಯು, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ಮುಂತಾದ ವಿವಿಧ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿಗಳು ನನಗೆ ಬೆಂಬಲ ನೀಡಿದರು. ಈ ಕಾರಣಕ್ಕೆ ಆ ಮಕ್ಕಳು ಬೀದಿಗಳಲ್ಲಿ ಲಾಠಿ ಏಟು ತಿನ್ನಬೇಕಾಯಿತು. ವಿದ್ಯಾರ್ಥಿಗಳ ಬೆಂಬಲ ಮತ್ತು ಹೋರಾಟ ನನಗೆ ಧೈರ್ಯ ನೀಡಿತು” ಎಂದು ಫಾತಿಮಾ ಹೇಳಿಕೊಂಡಿದ್ದಾರೆ.

2017ರಲ್ಲಿ ಕನಿಷ್ಠ ಎರಡು ಸಂದರ್ಭಗಳಲ್ಲಿ, ಜೆಎನ್‌ಯುನ ಮಹಿ ಮಾಂಡವಿ ಹಾಸ್ಟೆಲ್ ನಿವಾಸಿ ಮತ್ತು ಎಂಎಸ್ಸಿ ಬಯೋಟೆಕ್ನಾಲಜಿ ವಿದ್ಯಾರ್ಥಿಯಾಗಿದ್ದ ನಜೀಬ್ ಕಣ್ಮರೆಯಾದದ್ದನ್ನು ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಿದ್ದರು.

ನಜೀಬ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಎಬಿವಿಪಿ ಸದಸ್ಯರಿಗೆ ಹಾಸ್ಟೆಲ್ ವರ್ಗಾವಣೆಯ ಶಿಕ್ಷೆ ವಿಧಿಸಿದ ಜೆಎನ್‌ಯು ಮಾಜಿ ಉಪಕುಲಪತಿ ಎಂ. ಜಗದೀಶ್ ಕುಮಾರ್ ಅವರನ್ನು ವಿದ್ಯಾರ್ಥಿಗಳು ಆರು ದಿನಗಳ ಕಾಲ ಘೇರಾವ್ ಮಾಡಿದ್ದರು. ನಂತರ ಅವರು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷರಾದರು.

“ನಾನು ನನ್ನ ಭರವಸೆಯನ್ನು ಹೇಗೆ ಬಿಟ್ಟುಕೊಡಲಿ? ಧೈರ್ಯವನ್ನು ಹೇಗೆ ಕಳೆದುಕೊಳ್ಳಲಿ ಎಂದು ಹಲವು ಬಾರಿ ಅನಿಸಿದೆ. ಏಕೆಂದರೆ, ನಜೀಬ್ ನನ್ನ ಮಗ. ನನಗೆ ನನ್ನ ಮಗ ಬೇಕು. ಇದಕ್ಕಾಗಿ ನಾನು ದೇಶದ ಯಾವುದೇ ನ್ಯಾಯಾಲಕ್ಕೆ ಹೋಗಲು ಸಿದ್ದ. ನನ್ನ ಕೊನೆಯ ಉಸಿರಿನವರೆಗೂ ಹೋರಾಡುತ್ತೇನೆ” ಎಂದು ಫಾತಿಮಾ ಮನದಾಳ ಹಂಚಿಕೊಂಡಿದ್ದಾರೆ.

“ಮುಂಬರುವ ದಿನಗಳಲ್ಲಿ ಹೆಚ್ಚಿನ ಜನರು ನನ್ನೊಂದಿಗೆ ಸೇರುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ಹೋರಾಟ ನನ್ನ ಮಗನಿಗಾಗಿ ಮಾತ್ರವಲ್ಲ, ತನ್ನ ಮಗುವಿಗೆ ನ್ಯಾಯ ಬಯಸುವ ಪ್ರತಿಯೊಬ್ಬ ತಾಯಿಗಾಗಿ. ನಾನು ಸುಪ್ರೀಂ ಕೋರ್ಟ್‌ಗೆ ಹೋಗಬೇಕಾದರೆ, ಅಲ್ಲಿಗೂ ಹೋಗುತ್ತೇನೆ” ಎಂದು ಹೇಳಿದ್ದಾರೆ.

ಪ್ರಕರಣ ಮುಚ್ಚುವ ಕೆಳ ನ್ಯಾಯಾಲಯದ ಆದೇಶವನ್ನು ‘ನ್ಯಾಯ ನಿರಾಕರಣೆ’ ಎಂದು ಕರೆದಿರುವ ಜೆಎನ್‌ಯು ವಿದ್ಯಾರ್ಥಿ ಸಂಘ, ಆರಂಭದಲ್ಲಿ ಪ್ರಕರಣದ ತನಿಖೆ ನಡೆಸಿದ ದೆಹಲಿ ಪೊಲೀಸರ ಪ್ರತಿಕೃತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದೆ.

“ಸಿಬಿಐ ಸಲ್ಲಿಸಿರುವ ಪ್ರಕರಣ ಮುಕ್ತಾಯದ ವರದಿಯನ್ನು ಹೊಣೆಗಾರಿಕೆಯಿಲ್ಲದೆ ಒಪ್ಪಿಕೊಂಡಿರುವ ದೆಹಲಿ ನ್ಯಾಯಾಲಯದ ಬಗ್ಗೆ ನಾವು ನಮ್ಮ ಕಳವಳವನ್ನು ವ್ಯಕ್ತಪಡಿಸುತ್ತೇವೆ. ಎಬಿವಿಪಿ ಸಂಬಂಧಿತ ವಿದ್ಯಾರ್ಥಿಗಳ ವ್ಯವಸ್ಥಿತ ರಕ್ಷಣೆಯನ್ನು ನಾವು ಖಂಡಿಸುತ್ತೇವೆ. ಆಡಳಿತಾತ್ಮಕ ಅಥವಾ ರಾಜಕೀಯ ಹಸ್ತಕ್ಷೇಪವಿಲ್ಲದೆ ಪೂರ್ಣ ಪಾರದರ್ಶಕತೆಯೊಂದಿಗೆ ಪ್ರಕರಣದ ಮರುತನಿಖೆ ಮಾಡಬೇಕು ಎಂಬ ನಮ್ಮ ಬೇಡಿಕೆಯನ್ನು ಪುನರುಚ್ಚರಿಸುತ್ತೇವೆ” ಎಂದು ಒಕ್ಕೂಟವು ಹೇಳಿಕೆಯಲ್ಲಿ ತಿಳಿಸಿದೆ.

ನಜೀಬ್ ನಿಗೂಢ ನಾಪತ್ತೆ ಪ್ರಕರಣದ ಮುಕ್ತಾಯ ವರದಿಯನ್ನು ಸಿಬಿಐ 2018ರಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಆದರೆ, ನಜೀಬ್ ಅವರ ತಾಯಿ ಫಾತಿಮಾ ನಫೀಸ್ ಪ್ರತಿಭಟನಾ ಅರ್ಜಿಯೊಂದಿಗೆ ಸಿಬಿಐ ವರದಿಯನ್ನು ಪ್ರಶ್ನಿಸಿದ್ದರು. ಫಾತಿಮಾ ವಾದಗಳನ್ನು ತಿರಸ್ಕರಿಸಿರುವ ನ್ಯಾಯಾಲಯ ಪ್ರಕರಣ ಮುಕ್ತಾಯಗೊಳಿಸು ಸಿಬಿಐಗೆ ಸಮ್ಮತಿ ನೀಡಿದೆ.

ಆದರೆ, ಈ ವಿಷಯವನ್ನು ವಿಲೇವಾರಿ ಮಾಡುವಾಗ ನಜೀಬ್ ಇರುವಿಕೆಯ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ದೊರೆತರೆ ತನಿಖೆಯನ್ನು ಪುನರಾರಂಭಿಸಲು ಸಿಬಿಐಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದೆ ಮತ್ತು ಅದಕ್ಕೆ ಅನುಗುಣವಾಗಿ ನ್ಯಾಯಾಲಯಕ್ಕೆ ತಿಳಿಸಲು ಸಂಸ್ಥೆಗೆ ಸೂಚಿಸಿದೆ.

“ಸಿಬಿಐ ಎಲ್ಲಾ ಸಂಭಾವ್ಯ ಮಾರ್ಗಗಳನ್ನು ಅನ್ವೇಷಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿದೆ ಎಂಬುವುದು ಸ್ಪಷ್ಟ. ಆದರೂ, ನಜೀಬ್ ಇರುವ ಸ್ಥಳದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಅಕ್ಟೋಬರ್ 14, 2016ರ ರಾತ್ರಿ ನಜೀಬ್ ವಿರುದ್ಧ ದೈಹಿಕ ಹಲ್ಲೆ ಮತ್ತು ಮೌಖಿಕ ಬೆದರಿಕೆ ಆರೋಪಗಳನ್ನು ಸಾಕ್ಷಿ, ಸಾಕ್ಷ್ಯಗಳು ಬೆಂಬಲಿಸುತ್ತದೆಯಾದರೂ, ಆ ಘಟನೆಗಳು ಮತ್ತು ಮರುದಿನ ಅವರ ಕಣ್ಮರೆಗೆ ಯಾವುದೇ ನೇರ ಅಥವಾ ಸಾಂದರ್ಭಿಕ ಪುರಾವೆಗಳು ಸಂಬಂಧವನ್ನು ಸ್ಥಾಪಿಸುವುದಿಲ್ಲ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಜೆಎನ್‌ಯು ವಿದ್ಯಾರ್ಥಿ ನಜೀಬ್‌ ನಾಪತ್ತೆ: ಪ್ರಕರಣ ಮುಕ್ತಾಯಕ್ಕೆ ಕೋರ್ಟ್‌ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...