ದೆಹಲಿಯ ಮನೆಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾದ ಪ್ರಕರಣ ಸಂಬಂಧ, ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ದ ಕೇಳಿ ಬಂದಿರುವ ಆರೋಪಗಳ ತನಿಖೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಆ.12) ಮೂವರು ಸದಸ್ಯರ ಸಮಿತಿ ರಚಿಸಿದ್ದಾರೆ.
ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ ಮತ್ತು ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲ ಬಿ.ವಿ. ಆಚಾರ್ಯ ತ್ರಿಸದಸ್ಯ ಸಮಿತಿಯಲ್ಲಿ ಇದ್ದಾರೆ.
ಬಿಜೆಪಿಯ ರವಿಶಂಕರ್ ಪ್ರಸಾದ್, ಕಾಂಗ್ರೆಸ್ನ ರಾಹುಲ್ ಗಾಂಧಿ, ಎನ್ಸಿಪಿ-ಎಸ್ಪಿಯ ಸುಪ್ರಿಯಾ ಸುಳೆ ಸೇರಿದಂತೆ ಹಲವು ಪಕ್ಷಗಳ ಸಂಸದರ ನಿಯೋಗದಿಂದ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಪದಚ್ಯುತಿಗೆ ಮನವಿ ಪತ್ರ ಸ್ವೀಕರಿಸಿರುವುದಾಗಿ ಸ್ಪೀಕರ್ ಲೋಕಸಭೆಗೆ ತಿಳಿಸಿದ್ದಾರೆ. ಆಡಳಿತ ಮತ್ತು ವಿರೋಧ ಪಕ್ಷಗಳ 146 ಸಂಸದರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ಹೇಳಿದ್ದಾರೆ.
ನ್ಯಾಯಾಧೀಶರ ಪದಚ್ಯುತಿಗೆ ಲೋಕಸಭೆಯ ಕನಿಷ್ಠ 100 ಸದಸ್ಯರು ಮತ್ತು ರಾಜ್ಯಸಭೆಯ ಕನಿಷ್ಠ 50 ಸದಸ್ಯರು ಸಹಿ ಹಾಕಬೇಕು. ಈ ನಿರ್ಣಯವನ್ನು ಸ್ಪೀಕರ್ ಅಥವಾ ಅಧ್ಯಕ್ಷರು ಅಂಗೀಕರಿಸಬಹುದು ಅಥವಾ ತಿರಸ್ಕರಿಸಬಹುದು.
ಸಂವಿಧಾನದ 124, 217 ಮತ್ತು 218ನೇ ವಿಧಿಗಳ ಅಡಿಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದರು ಮನವಿ ಅಥವಾ ನೋಟಿಸ್ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರ ಈ ಹಿಂದೆಯೇ ಯಶವಂತ್ ವರ್ಮಾ ಅವರ ಪದಚ್ಯುತಿಗೆ ನಿರ್ಣಯ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ವರ್ಮಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ 200ಕ್ಕೂ ಹೆಚ್ಚು ಸಂಸದರು ಪಕ್ಷಾತೀತವಾಗಿ ಅರ್ಜಿ ಸಲ್ಲಿಸಿದ್ದರು.
ಮನೆಯಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನನ್ನು ತಪ್ಪಿತಸ್ಥ ಎಂದು ಘೋಷಿಸಿ ಆಂತರಿಕ ಸಮಿತಿ ಸಲ್ಲಿಸಿದ್ದ ವರದಿಯನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 7ರಂದು ವಜಾಗೊಳಿಸಿದೆ.
ನ್ಯಾಯಮೂರ್ತಿ ವರ್ಮಾ ಅವರ ನಡವಳಿಕೆಯು ವಿಶ್ವಾಸವನ್ನು ತುಂಬುವಲ್ಲಿ ವಿಫಲವಾಗಿದೆ ಎಂದು ಹೇಳಿದ ನ್ಯಾಯಪೀಠ, ಅವರ ಅರ್ಜಿಯು ಪರಿಗಣನೆಗೆ ಅರ್ಹವಲ್ಲ ಎಂದು ನಿರ್ಧರಿಸಿದೆ.
ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಚಿಸಿದ್ದ ನ್ಯಾಯಾಧೀಶರ ಆಂತರಿಕ ತನಿಖಾ ಸಮಿತಿಯು ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಿದೆ ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಗೊಳಿಸಲು ಶಿಫಾರಸು ಮಾಡಿದ ಸಮಿತಿಯ ವರದಿಯನ್ನು ಪ್ರಧಾನ ಮಂತ್ರಿ ಮತ್ತು ರಾಷ್ಟ್ರಪತಿಗಳಿಗೆ ರವಾನಿಸುವುದು ಸಾಂವಿಧಾನಿಕವಾಗಿ ಮಾನ್ಯವಾಗಿದೆ ಎಂದು ತಿಳಿಸಿದೆ.
ಪ್ರಕರಣದ ಹಿನ್ನೆಲೆ: ನ್ಯಾ.ವರ್ಮಾ ಅವರು ದೆಹಲಿ ಹೈಕೋರ್ಟ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರು ಉಳಿದುಕೊಂಡಿದ್ದ ದೆಹಲಿಯ ಮನೆಯಲ್ಲಿ 2025ರ ಮಾರ್ಚ್ 14ರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಾಗ ಮನೆಯಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು ಎನ್ನಲಾಗಿದೆ. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ, ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪವನ್ನು ನಿರಾಕರಿಸಿದ್ದ ನ್ಯಾ. ವರ್ಮಾ, “ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ” ಎಂದಿದ್ದರು.
ಘಟನೆಯ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾ. ವರ್ಮಾ ಅವರನ್ನು ಅಲಾಹಾಬಾದ್ ಹೈಕೋರ್ಟ್ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. ಆದರೆ, ಅವರ ವಿರುದ್ಧ ಎಫ್ಐಆರ್ ದಾಖಲಿಸಲು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸಿಜೆಐ ಆಂತರಿಕ ಸಮಿತಿ ರಚಿಸಿದ್ದರು.
ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಂಗದ ಪಾರದರ್ಶಕತೆಯ ಬಗ್ಗೆ ದೇಶದಲ್ಲಿ ಚರ್ಚೆಯಾಗಿತ್ತು. ಇದನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿತ್ತು. ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದರು. ಅದರಂತೆ, ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್ನ 21 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದರು.
ಸುಪ್ರೀಂ ಕೋರ್ಟ್ ನಿಯೋಜಿಸಿದ್ದ ಆಂತರಿಕ ಸಮಿತಿಯು ಮಾರ್ಚ್ 25ರಂದು ತನಿಖೆ ಆರಂಭಿಸಿ, ಮೇ 3ರಂದು ತನ್ನ ವರದಿಯನ್ನು ಅಂತಿಮಗೊಳಿಸಿತ್ತು. ಅದನ್ನು ಮೇ4 ರಂದು ಸಿಜೆಐಗೆ ಸಲ್ಲಿಸಿತ್ತು. ವರದಿಯಲ್ಲಿ ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪ ನಿಜ ಎಂದು ಸಮಿತಿ ದೃಢಪಡಿಸಿತ್ತು.
ಆಂತರಿಕ ಸಮಿತಿಯ ವರದಿಯನ್ನು ಪ್ರಶ್ನಿಸಿ ನ್ಯಾ. ವರ್ಮಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಇತ್ತ, ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನ ಎರಡನೇ ದಿನವೇ ನ್ಯಾ.ವರ್ಮಾ ಪದಚ್ಯುತಿಗೆ ಸಂಸದರು ನೋಟಿಸ್ ನೀಡಿದ್ದಾರೆ ಎನ್ನಲಾಗಿತ್ತು. ಈ ನಡುವೆ ರಾಜ್ಯಸಭೆ ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಠಾತ್ ರಾಜೀನಾಮೆ ನೀಡಿದರು. ಹಾಗಾಗಿ, ಆ ಬಳಿಕ ರಾಜ್ಯಸಭೆಯಲ್ಲಿ ಈ ವಿಚಾರವಾಗಿ ಯಾವುದೇ ಬೆಳವಣಿಗೆ ನಡೆದಿಲ್ಲ.
ಸಂಸತ್ತಿನ ಅಧಿವೇಶನಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಕೇಂದ್ರ ಸಚಿವ ಕಿರಣ್ ರಿಜಿಜು, ನ್ಯಾ,ವರ್ಮಾ ಪದಚ್ಯುತಿ ಸಂಬಂಧ ಸಂಸತ್ನಲ್ಲಿ ನಿರ್ಣಯ ಮಂಡಿಸುದು ಖಚಿತ ಎಂದಿದ್ದರು. ಅದರಂತೆ, ಈಗ ಲೋಕಸಭೆ ಸ್ಪೀಕರ್ ತನಿಖಾ ಸಮಿತಿ ರಚಿಸಿದ್ದಾರೆ.


