Homeಮುಖಪುಟ'ಇಸ್ಲಾಮೋಫೋಬಿಕ್' ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

‘ಇಸ್ಲಾಮೋಫೋಬಿಕ್’ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ: ವ್ಯಾಪಕ ವಿರೋಧ, ದೂರು ದಾಖಲಿಸಲು ಮುಂದಾದ ಪ್ರತಿಪಕ್ಷಗಳು

- Advertisement -
- Advertisement -

ಬಿಜೆಪಿ ಅಸ್ಸಾಂ ಘಟಕ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ ‘ಇಸ್ಲಾಮೋಫೋಬಿಕ್’ ವಿಡಿಯೋ ಒಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷವು ಮುಸ್ಲಿಮರನ್ನು ನಿಂದಿಸುತ್ತಿದೆ ಮತ್ತು ಕೋಮು ದ್ವೇಷವನ್ನು ಪ್ರಚೋದಿಸುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

‘ಬಿಜೆಪಿ ಇಲ್ಲದ ಅಸ್ಸಾಂ’ ಎಂಬ ಶೀರ್ಷಿಕೆಯ ಈ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ವಿಡಿಯೋದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿರುವ ಮುಸ್ಲಿಮರನ್ನು ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಅಕ್ರಮ ವಲಸಿಗರಂತೆ ಚಿತ್ರಿಸಲಾಗಿದೆ. ವಿಡಿಯೋದಲ್ಲಿ ಕಾಂಗ್ರೆಸ್ ನಾಯಕರಾದ ಗೌರವ್ ಗೊಗೊಯ್ ಮತ್ತು ರಾಹುಲ್ ಗಾಂಧಿ ಅವರನ್ನು ತೋರಿಸಿ, ಅವರಿಬ್ಬರು ‘ಪಾಕಿಸ್ತಾನದ ಜೊತೆ ಸಂಪರ್ಕ’ ಹೊಂದಿರುವಂತೆ ಬಿಂಬಿಸಲಾಗಿದೆ.

ರಾಜಕೀಯ ಮುಖಂಡರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಈ ವಿಡಿಯೋ ಪ್ರಚೋದನಕಾರಿ ಎಂದು ಖಂಡಿಸಿದ್ದಾರೆ. ಇದು ಅಸ್ಸಾಂನಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.

ಚುನಾವಣಾ ಆಯೋಗ ಈ ವಿಡಿಯೋ ಬಗ್ಗೆ ಗಮನಹರಿಸಬೇಕು ಎಂದು ಅಸ್ಸಾಂ ಕಾಂಗ್ರೆಸ್ ಒತ್ತಾಯಿಸಿದೆ. ಬಿಜೆಪಿ ವಿರುದ್ದ ದೂರು ದಾಖಲಿಸಲು ಯೋಜಿಸುತ್ತಿರುವುದಾಗಿ ತಿಳಿಸಿದೆ.

ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಮತ್ತು ಲೋಕಸಭೆಯ ವಿರೋಧ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಅವರು ವಿಡಿಯೋಗೆ ಖಂಡನೆ ವ್ಯಕ್ತಪಡಿಸಿದ್ದು, “ಇದು ಅಸ್ಸಾಮಿ ಸಮಾಜ ಮತ್ತು ಅದರ ಸಂಪ್ರದಾಯಗಳನ್ನು ತಪ್ಪಾಗಿ ಬಿಂಬಿಸುತ್ತದೆ” ಎಂದು ಹೇಳಿದ್ದಾರೆ.

ಬಿಜೆಪಿ ಐಟಿ ಸೆಲ್ ಸೃಷ್ಟಿಸುವ ಫೋಟೋ, ವಿಡಿಯೋ, ಮಾತು, ಕೃತಿ ಯಾವುದೂ ಕೂಡ ಅಸ್ಸಾಮಿ ಸಮಾಜದ ಮೇಲೆ ಹಾನಿ ಮಾಡುವ ಶಕ್ತಿ ಹೊಂದಿಲ್ಲ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಗೊಗೊಯ್ ತಿಳಿಸಿದ್ದಾರೆ.

“ಅಸ್ಸಾಂ ಅನ್ನು ಮಹಾಪುರುಷರಾದ ಶ್ರೀಮಂತ ಶಂಕರದೇವ, ಅಝಾನ್ ಪೀರ್, ಸ್ವರ್ಗದೇವ್ ಸಿಯುಕಾಫ, ಲಚಿತ್ ಬೋರ್ಫುಕನ್ ಮತ್ತು ಭೂಪೇನ್ ಹಝಾರಿಕಾ ಪೋಷಿಸಿದ್ದಾರೆ. ದನ, ಕಲ್ಲಿದ್ದಲು, ವೀಳ್ಯದೆಲೆ ಅಥವಾ ಮಾದಕವಸ್ತುಗಳ ಕಳ್ಳಸಾಗಣೆಗೆ ಸಂಬಂಧಿಸಿದ ಜನರು ಅಸ್ಸಾಮಿಗಳ ಮನಸ್ಸನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಹೆಮ್ಮೆಯ ಮತ್ತು ಶ್ರೇಷ್ಠ ರಾಜ್ಯವಾದ ಅಸ್ಸಾಂ, ತನ್ನ ಜನರು ಹೊಸ ಎತ್ತರವನ್ನು ತಲುಪಲು ಸಹಾಯ ಮಾಡುವ ರಾಜಕಾರಣಿಗಳಿಗೆ ಅರ್ಹವಾಗಿದೆ” ಎಂದು ಗೊಗೊಯ್ ಹೇಳಿದ್ದಾರೆ.

ವಿಡಿಯೋ ವಿರುದ್ದ ಕಾಂಗ್ರೆಸ್ ಪಕ್ಷವು ಗುವಾಹಟಿಯಲ್ಲಿ ಔಪಚಾರಿಕ ಪೊಲೀಸ್ ದೂರು ದಾಖಲಿಸಲಿದೆ ಎಂದು ಗೊಗೊಯ್ ತಿಳಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಗೊಗೊಯ್ ಅವರು ರಾಜ್ಯದ ಬಗ್ಗೆ ತಮ್ಮ ಪಕ್ಷದ ದೃಷ್ಟಿಕೋನವನ್ನು ವಿವರಿಸಿದ್ದಾರೆ: “ನಾವು ಪೈಲಟ್‌ಗಳು, ಇಂಜಿನಿಯರ್‌ಗಳು, ವೈದ್ಯರು, ಉದ್ಯಮಿಗಳು, ಬ್ಯಾಂಕರ್‌ಗಳು ಮತ್ತು ವ್ಯಾಪಾರ ಮಾಲೀಕರ ಸಮಾಜವನ್ನು ನಿರ್ಮಿಸಬೇಕೆಂದು ಬಯಸುತ್ತೇವೆ. ಕಠಿಣ ಪರಿಶ್ರಮವು ದ್ವೇಷವನ್ನು ಹಿಂದಿಕ್ಕುವ, ಸಭ್ಯತೆಯು ದುರಹಂಕಾರಕ್ಕಿಂತ ಮುಖ್ಯವಾದ, ಪ್ರಜಾಪ್ರಭುತ್ವವು ನಿರಂಕುಶಾಧಿಕಾರವನ್ನು ಹತ್ತಿಕ್ಕುವ ಮತ್ತು ಎಲ್ಲರನ್ನೂ ಗೌರವದಿಂದ ನಡೆಸಿಕೊಳ್ಳುವ ಅಸ್ಸಾಂ ಅನ್ನು ನಾವು ನೋಡಲು ಬಯಸುತ್ತೇವೆ” ಎಂದಿದ್ದಾರೆ.

ಅಸ್ಸಾಂನ ಮತ್ತೊಂದು ಪ್ರಮುಖ ವಿರೋಧ ಪಕ್ಷವಾದ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಕೂಡ ಬಿಜೆಪಿಯ ವಿಡಿಯೋವನ್ನು ಟೀಕಿಸಿದೆ.

“ಈ ಎಐ ವಿಡಿಯೋ ಮೂಲಕ ಅಸ್ಸಾಂ ಬಿಜೆಪಿ ಭಯದ ಭಾವನೆಯನ್ನು ಸೃಷ್ಟಿಸಲು ಬಯಸುತ್ತಿದೆ” ಎಂದು ಎಐಯುಡಿಎಫ್‌ನ ಶಾಸಕ ಮತ್ತು ಪ್ರಧಾನ ಕಾರ್ಯದರ್ಶಿ ಅಮೀನುಲ್ ಇಸ್ಲಾಂ ಹೇಳಿದ್ದಾರೆ.

“ಬಿಜೆಪಿ ಅಧಿಕಾರದಲ್ಲಿ ಇಲ್ಲದಿದ್ದರೆ ಅಸ್ಸಾಂ ಸಂಪೂರ್ಣ ಮುಸ್ಲಿಂ ಸ್ವಾಧೀನವಾಗುತ್ತದೆ ಎಂಬ ಭಾವನೆಯನ್ನು ಬಹುಸಂಖ್ಯಾತ ಸಮುದಾಯದಲ್ಲಿ ಬಿತ್ತಲು ಅವರು ಬಯಸುತ್ತಿದ್ದಾರೆ. ಅವರು ಈ ಹಿಂದೆಯೂ ಇಂತಹ ನಿರೂಪಣೆಗಳನ್ನು ಮಂಡಿಸಿದ್ದಾರೆ. ಕೆಲವೊಮ್ಮೆ ‘ಲವ್ ಜಿಹಾದ್’ ಎಂದು ಕರೆಯಲ್ಪಡುವ ಮೂಲಕ, ಕೆಲವೊಮ್ಮೆ ‘ಬೌದ್ಧಿಕ ಜಿಹಾದ್’ ಮೂಲಕ ಮುಸ್ಲಿಮರನ್ನು ರಾಕ್ಷಸೀಕರಿಸಲು ಪ್ರಯತ್ನಿಸಿದ್ದಾರೆ. ಈ ವಿಡಿಯೋ ದ್ವೇಷ ಭಾಷಣದ ಒಂದು ರೂಪವಾಗಿದೆ. ಇದರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಬೇಕು ಮತ್ತು ನಾವು ಚುನಾವಣಾ ಆಯೋಗವನ್ನು ಸಂಪರ್ಕಿಸಲು ಯೋಜಿಸಿದ್ದೇವೆ” ಎಂದು ಅಮೀನುಲ್ ಇಸ್ಲಾಂ ತಿಳಿಸಿದ್ದಾರೆ.

ವಿಡಿಯೋಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, “ಬಿಜೆಪಿ ಮುಸ್ಲಿಂ ಮುಕ್ತ ಭಾರತ’ದ ಗುರಿ ಹೊಂದಿದೆ ಎಂದಿದ್ದಾರೆ.

“ಬಿಜೆಪಿ ಇಲ್ಲದಿದ್ದರೆ ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ ಇರುತ್ತಿತ್ತು ಎಂದು ತೋರಿಸುವ ಅಸಹ್ಯಕರ ಕೃತಕ ಬುದ್ಧಿಮತ್ತೆಯ ವಿಡಿಯೋವನ್ನು ಬಿಜೆಪಿ ಅಸ್ಸಾಂ ಪೋಸ್ಟ್ ಮಾಡಿದೆ. ಅವರು ಕೇವಲ ಓಟಿಗಾಗಿ ಈ ಭಯ ಹುಟ್ಟಿಸುತ್ತಿಲ್ಲ, ಇದು ನಿಜ ರೂಪದಲ್ಲಿ ಅಸಹ್ಯಕರ ಹಿಂದುತ್ವ ಸಿದ್ಧಾಂತವಾಗಿದೆ”ಎಂದು ಓವೈಸಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ಕುರಿತ ಎಐ ವಿಡಿಯೋ ತೆಗೆದು ಹಾಕಲು ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದ್ದನ್ನು ನೆನಪಿಸಿದ ಓವೈಸಿ, “ಪ್ರತಿಯೊಬ್ಬರಿಗೂ ಅವರ ತಾಯಿ ಮೇಲೆ ದೊಡ್ಡ ಗೌರವವಿದೆ. ಅಸ್ಸಾಂ ಬಿಜೆಪಿಯ ಅಸಹ್ಯಕರ ವಿಡಿಯೋಗೂ ಅದೇ ತತ್ವವನ್ನು ಅನುಸರಿಸಬೇಕು. ಮುಸ್ಲಿಂ ನಾಗರಿಕರನ್ನು ಅಪಾಯಕಾರಿ ಎಂದು, ನಿರಂತರವಾಗಿ ದಮನಿಸಬೇಕಾದ ಗುಂಪು ಎಂದು ಚಿತ್ರಿಸುವುದು ಅವಹೇಳನಕಾರಿ ಮಾತ್ರವಲ್ಲ, ನರಮೇಧವೂ ಆಗಿದೆ” ಎಂದು ಓವೈಸಿ ಕಿಡಿಕಾರಿದ್ದಾರೆ.

“ಬಿಜೆಪಿ ಉದ್ದೇಶಪೂರ್ಕವಾಗಿ ಇದನ್ನು ಮಾಡುತ್ತಿದೆ. ಅಸ್ಸಾಂ ಬಿಜೆಪಿ ವಿಡಿಯೋ ಪೋಸ್ಟ್‌ ಮಾಡಿರುವುದು ಹೊಸ ವಿಷಯವೇನಲ್ಲ. ಎಲ್ಲೆಲ್ಲಿ ಚುನಾವಣೆಗಳು ಇರುತ್ತವೋ ಅಂತಹ ರಾಜ್ಯಗಳಲ್ಲಿ ಬಿಜೆಪಿ ಇದನ್ನು ಮಾಡುತ್ತವೆ. ನಿಮಗೆ ನೆನಪಿದ್ದರೆ, ಕರ್ನಾಟಕದಲ್ಲೂ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಇದೇ ರೀತಿ ಮಾಡಿತ್ತು. ಮುಂದೆ ಅಸ್ಸಾಂನಲ್ಲಿ ಚುನಾವಣೆ ಇದೆ. ಬಿಜೆಪಿಯ ಇಂತಹ ನಡೆಗಳು ಮುಸ್ಲಿಮರ ವಿರುದ್ದ ಹಿಂಸಾಚಾರವನ್ನು ಪ್ರಚೋದಿಸುತ್ತದೆ” ಎಂದಿದ್ದಾರೆ.

“ಕೋಮು ದ್ವೇಷವನ್ನು ಹುಟ್ಟುಹಾಕಲು ‘ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ’ ಎಂಬ ಎಐ ವಿಡಿಯೋ ಹಂಚಿಕೊಳ್ಳುವ ಮೂಲಕ ಅಸ್ಸಾಂ ಬಿಜೆಪಿ ಅತ್ಯಂತ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದೆ. ಇದು ಸಾಮಾಜಿಕ ಸಾಮರಸ್ಯದ ಮೇಲಿನ ಉದ್ದೇಶಪೂರ್ವಕ ದಾಳಿಯಾಗಿದೆ. ನಮ್ಮ ಹಂಚಿಕೆಯ ಮೌಲ್ಯಗಳಿಗೆ ಮಾಡಿದ ಅವಮಾನವಾಗಿದೆ. ನಿಮ್ಮ ವಿಷಕಾರಿ ಅಭಿಯಾನಕ್ಕೆ ಅಸ್ಸಾಂನ ಜನರು ಸರಿಯಾದ ಉತ್ತರವನ್ನು ನೀಡುತ್ತಾರೆ” ಎಂದು ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಖಾನ್ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ವಿಡಿಯೋಗೆ ವಿರೋಧ ವ್ಯಕ್ತವಾದ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂ ಬಿಜೆಪಿ ವಕ್ತಾರ ರೂಪಮ್ ಗೋಸ್ವಾಮಿ, ವಿಡಿಯೋವನ್ನು ಸಮರ್ಥಿಸಿಕೊಂಡಿದ್ದಾರೆ. ಎನ್‌ಡಿಟಿವಿ ಜೊತೆ ಮಾತನಾಡಿರುವ ಅವರು, “ಸ್ಥಳೀಯ ಸಮುದಾಯಗಳ ಜೀವನ, ಜೀವನೋಪಾಯ, ಭೂಮಿ ಮತ್ತು ಸಂಸ್ಕೃತಿಗೆ ಬೆದರಿಕೆಯೊಡ್ಡಿರುವ ಜನಸಂಖ್ಯಾ ಬದಲಾವಣೆಯನ್ನು ರಾಜ್ಯವು ಹೇಗೆ ಅನುಭವಿಸಿದೆ ಎಂಬುದರ ಕುರಿತು ಸತ್ಯವನ್ನು ಈ ವಿಡಿಯೋ ಪ್ರತಿಬಿಂಬಿಸುತ್ತದೆ ಎಂದು ಅಸ್ಸಾಂ ಬಿಜೆಪಿ ನಂಬುತ್ತದೆ” ಎಂದಿದ್ದಾರೆ.

ಅದಾನಿ ಕುರಿತ ಪೋಸ್ಟ್ ತೆಗೆದು ಹಾಕಲು ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಆದೇಶ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...