Homeಮುಖಪುಟಇಂದು ಕರಾವಳಿಗೆ ಅಪ್ಪಳಿಸಲಿರುವ ಮೊಂಥಾ ಚಂಡಮಾರುತ : ಆಂಧ್ರ, ಒಡಿಶಾದಲ್ಲಿ ಹೈ ಅಲರ್ಟ್

ಇಂದು ಕರಾವಳಿಗೆ ಅಪ್ಪಳಿಸಲಿರುವ ಮೊಂಥಾ ಚಂಡಮಾರುತ : ಆಂಧ್ರ, ಒಡಿಶಾದಲ್ಲಿ ಹೈ ಅಲರ್ಟ್

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ‘ಮೊಂಥಾ’ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಇಂದು (ಅ.28, ಮಂಗಳವಾರ) ಸಂಜೆ ಅಥವಾ ರಾತ್ರಿ ಆಂಧ್ರ ಪ್ರದೇಶದ ಕಾಕಿನಾಡ ಬಳಿ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆ ಒಡಿಶಾ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿವೆ. ಅಪಾಯಕಾರಿ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುತ್ತಿವೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ರಕ್ಷಣಾ ತಂಡಗಳನ್ನು ನಿಯೋಜಿಸಿವೆ.

ಒಡಿಶಾ ಸರ್ಕಾರ ಸೋಮವಾರ ದಕ್ಷಿಣದ ಎಂಟು ಜಿಲ್ಲೆಗಳಾದ ಮಲ್ಕನ್‌ಗಿರಿ, ಕೊರಾಪುಟ್, ನಬರಂಗ್‌ಪುರ, ರಾಯಗಡ, ಗಜಪತಿ, ಗಂಜಾಂ, ಕಲಹಂಡಿ ಮತ್ತು ಕಂಧಮಲ್‌ಗಳ ತಗ್ಗು ಮತ್ತು ಗುಡ್ಡಗಾಡು ಪ್ರದೇಶಗಳಿಂದ 1,496 ಗರ್ಭಿಣಿಯರು ಸೇರಿದಂತೆ ಸುಮಾರು 3,000 ಜನರನ್ನು ಸ್ಥಳಾಂತರಿಸಿದೆ, ಅಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

“ಒಟ್ಟು 32,528 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಗರ್ಭಿಣಿಯರು, ವೃದ್ಧರು ಮತ್ತು ಅಂಗವಿಕಲರ ಸ್ಥಳಾಂತರಕ್ಕೆ ಆದ್ಯತೆ ನೀಡಲಾಗಿದೆ. 1,445 ಚಂಡಮಾರುತ ಆಶ್ರಯ ಕೇಂದ್ರಗಳನ್ನು ಅಥವಾ ಗಂಜಿ ಕೇಂದ್ರಗಳನ್ನು ತೆರೆದಿದ್ದೇವೆ. ಸಾಕು ಪ್ರಾಣಿಗಳಿಗೆ ಆಹಾರ, ಔಷಧ, ಬೆಳಕು ಮತ್ತು ಆರೈಕೆಯ ವ್ಯವಸ್ಥೆ ಮಾಡಿದ್ದೇವೆ” ಎಂದು ಸೋಮವಾರ ಸಂಜೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಒಡಿಶಾದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ಎನ್‌ಡಿಆರ್‌ಎಫ್‌, ಒಡಿಆರ್‌ಎಫ್‌ ಮತ್ತು ಅಗ್ನಿಶಾಮಕ ಸೇವೆಯಿಂದ ಒಟ್ಟು 140 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ಚಂಡಮಾರುತ ಅಪ್ಪಳಿಸಿದ 24 ಗಂಟೆಗಳ ಒಳಗೆ ವಿದ್ಯುತ್ ಪುನಃಸ್ಥಾಪಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಆಸ್ಪತ್ರೆಗಳು ಮತ್ತು ಕುಡಿಯುವ ನೀರಿನ ಘಟಕಗಳಲ್ಲಿ ವಿದ್ಯುತ್ ಬ್ಯಾಕಪ್ ಸಿದ್ಧವಾಗಿದೆ” ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ (ಎಸ್‌ಆರ್‌ಸಿ) ಡಿ.ಕೆ ಸಿಂಗ್ ತಿಳಿಸಿದ್ದಾರೆ.

ಭುವನೇಶ್ವರ ಸೇರಿದಂತೆ ದಕ್ಷಿಣ ಮತ್ತು ಕರಾವಳಿ ಒಡಿಶಾದ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಅಕ್ಟೋಬರ್ 28 ಮತ್ತು 29 ರಂದು ಮಳೆ ತೀವ್ರಗೊಳ್ಳಲಿದೆ ಎಂದು ಸಚಿವ ಪೂಜಾರಿ ಮಾಹಿತಿ ನೀಡಿದ್ದಾರೆ.

ಗುಡ್ಡಗಾಡು ಗಜಪತಿ ಜಿಲ್ಲೆಯಲ್ಲಿ ಭೂಕುಸಿತ ಪ್ರಮುಖ ಆತಂಕವಾಗಿದೆ. ಅಲ್ಲಿ 139 ಅಪಾಯಕಾರಿ ಪ್ರದೇಶಗಳನ್ನು ಗುರುತಿಸಲಾಗಿದೆ. ಅಕ್ಟೋಬರ್ 30 ರವರೆಗೆ ಸರ್ಕಾರಿ ನೌಕರರ ರಜೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಅಲ್ಲಿಯವರೆಗೆ ಒಂಬತ್ತು ಜಿಲ್ಲೆಗಳಲ್ಲಿನ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಪೂಜಾರಿ ಹೇಳಿದ್ದಾರೆ.

“ಒಡಿಶಾದ ಎಲ್ಲಾ ಬಂದರುಗಳಲ್ಲಿ ದೂರದ ಎಚ್ಚರಿಕೆ ಸಿಗ್ನಲ್ ನಂ-ಐ ಅನ್ನು ತೋರಿಸಲಾಗಿದೆ. ಮೀನುಗಾರರು ಅಕ್ಟೋಬರ್ 29 ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಹೆಚ್ಚಿನ ಮೀನುಗಾರರು ಈಗಾಗಲೇ ಮರಳಿದ್ದಾರೆ. ಗಂಜಾಂ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಆಂಧ್ರದ ಮೀನುಗಾರರಿಗೆ ಆಶ್ರಯ ನೀಡಲಾಗಿದೆ. ಅವರು ಹವಾಮಾನ ಸಾಮಾನ್ಯಗೊಂಡ ನಂತರ ಮನೆಗೆ ಮರಳಲಿದ್ದಾರೆ” ಎಂದು ಎಸ್‌ಆರ್‌ಸಿ ತಿಳಿಸಿದೆ.

ಸೋಮವಾರ ರಾತ್ರಿ 8.30ಕ್ಕೆ ಬಿಡುಗಡೆಯಾದ ಇತ್ತೀಚಿನ ಐಎಂಡಿ ಬುಲೆಟಿನ್ ಪ್ರಕಾರ, “ಥಾಯ್ ಭಾಷೆಯಲ್ಲಿ ‘ಪರಿಮಳಯುಕ್ತ ಹೂವು’ ಎಂಬ ಅರ್ಥವನ್ನು ನೀಡುವ ಚಂಡಮಾರುತ ಮೊಂಥಾ, ಸಂಜೆ 5.30ಕ್ಕೆ ಪಶ್ಚಿಮ-ಮಧ್ಯ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಕೇಂದ್ರೀಕೃತವಾಗಿತ್ತು. ಕಾಕಿನಾಡದಿಂದ ಆಗ್ನೇಯಕ್ಕೆ ಸುಮಾರು 450 ಕಿ.ಮೀ, ವಿಶಾಖಪಟ್ಟಣದಿಂದ ದಕ್ಷಿಣಕ್ಕೆ 500 ಕಿ.ಮೀ ಮತ್ತು ಗೋಪಾಲಪುರದಿಂದ ದಕ್ಷಿಣಕ್ಕೆ 670 ಕಿ.ಮೀ ದೂರದಲ್ಲಿತ್ತು”.

“ಗಾಳಿಯು ಸುಮಾರು 15 ಕಿ.ಮೀ ವೇಗದಲ್ಲಿ ವಾಯುವ್ಯಕ್ಕೆ ಚಲಿಸುತ್ತಿದ್ದು, ಮಂಗಳವಾರ ಬೆಳಿಗ್ಗೆ ವೇಳೆಗೆ ತೀವ್ರ ಚಂಡಮಾರುತವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ. ಅಕ್ಟೋಬರ್ 28ರ ಸಂಜೆ ಅಥವಾ ರಾತ್ರಿ, ಕಾಕಿನಾಡ ಬಳಿಯ ಮಚಲಿಪಟ್ನಂ ಮತ್ತು ಕಳಿಂಗಪಟ್ನಂ ನಡುವೆ ಆಂಧ್ರ ಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಗಂಟೆಗೆ 90-100 ಕಿ.ಮೀ ಅಥವಾ ಗಂಟೆಗೆ 110 ಕಿ.ಮೀ. ಗರಿಷ್ಠ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ”.

ಮಂಗಳವಾರ ಸಂಜೆಯಿಂದ ಒಡಿಶಾದ ದಕ್ಷಿಣ ಕರಾವಳಿ ಪ್ರದೇಶಗಳಲ್ಲಿ ಗಾಳಿಯ ವೇಗ ಗಂಟೆಗೆ 60–70 ಕಿ.ಮೀ. ತಲುಪಿ, ಗಂಟೆಗೆ 80 ಕಿ.ಮೀ. ವೇಗದಲ್ಲಿ ಬೀಸಬಹುದು. ಅಕ್ಟೋಬರ್ 28 ಮತ್ತು 29 ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ನಂತರ ಈ ವಾತಾವರಣ ದುರ್ಬಲಗೊಂಡು ಚಂಡಮಾರುತವಾಗಿ ಛತ್ತೀಸ್‌ಗಢದ ಕಡೆಗೆ ಚಲಿಸುವ ನಿರೀಕ್ಷೆಯಿದೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕೇಂದ್ರದರಿಂದ ಸಾಧ್ಯವಿರುವ ಎಲ್ಲಾ ಸಹಾಯ ಒದಗಿಸುವ ಭರವಸೆ ಕೊಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ನಾಯ್ಡು ಅವರು ರಿಯಲ್ ಟೈಮ್ ಗವರ್ನೆನ್ಸ್ ಸಿಸ್ಟಮ್ (ಆರ್‌ಟಿಜಿಎಸ್) ಮೂಲಕ ಉನ್ನತ ಮಟ್ಟದ ಸಭೆ ನಡೆಸಿ, ಕಾಲುವೆ ದಂಡೆಗಳನ್ನು ಬಲಪಡಿಸಲು, ಪ್ರವಾಹಕ್ಕೆ ಸಿದ್ಧರಾಗಲು ಮತ್ತು ಪ್ರತಿ ಗಂಟೆಯೂ ಚಂಡಮಾರುತದ ಚಲನೆಯನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ವರದಿ ಹೇಳಿದೆ.

“ಎಲ್ಲಾ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಗಿದೆ. ಚಂಡಮಾರುತದ ನಂತರದ ಪರಿಹಾರ ಕಾರ್ಯಾಚರಣೆಗಾಗಿ ವೈದ್ಯಕೀಯ ತಂಡಗಳು, ಎನ್‌ಡಿಆರ್‌ಎಫ್ ಘಟಕಗಳು ಮತ್ತು ಇಂಜಿನಿಯರಿಂಗ್ ವಿಭಾಗಗಳು ಸಿದ್ಧವಾಗಿವೆ” ಎಂದು ಅಧಿಕೃತ ಪ್ರಕಟಣೆಯನ್ನು ಉಲ್ಲೇಖಿಸಿ ಪಿಟಿಐ ತಿಳಿಸಿದೆ.

ಪರಿಹಾರ ಶಿಬಿರಗಳಲ್ಲಿರುವ ಪ್ರತಿ ಕುಟುಂಬಕ್ಕೆ 3,000 ರೂ. ನಗದು, 25 ಕೆಜಿ ಅಕ್ಕಿ ಮತ್ತು ಇತರ ಅಗತ್ಯ ವಸ್ತುಗಳನ್ನು ಘೋಷಿಸಲಾಗಿದೆ. ಕೃಷ್ಣ ಜಿಲ್ಲೆಯಲ್ಲಿ ತೀವ್ರ ಮಳೆಯಾಗುವ ಮುನ್ಸೂಚನೆ ಇದ್ದು, ಮುಂದಿನ ಎರಡು ದಿನಗಳಲ್ಲಿ ಗುಂಟೂರು, ಬಾಪಟ್ಲಾ, ಎನ್‌ಟಿಆರ್, ಪಲ್ನಾಡು ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ವಾಲ್ಟೇರ್ ಪ್ರದೇಶ ಮತ್ತು ಪಕ್ಕದ ಮಾರ್ಗಗಳಲ್ಲಿ ಕಾರ್ಯನಿರ್ವಹಿಸುವ ಕೆಲವು ರೈಲುಗಳನ್ನು ರದ್ದುಪಡಿಸುವುದು, ತಿರುಗಿಸುವುದು ಮತ್ತು ಅಲ್ಪಾವಧಿಗೆ ಸ್ಥಗಿತಗೊಳಿಸುವುದಾಗಿ ಪೂರ್ವ ಕರಾವಳಿ ರೈಲ್ವೆ ಘೋಷಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಆಂಧ್ರಪ್ರದೇಶದ ಕರಾವಳಿಯಲ್ಲಿ ನೆಲ್ಲೂರಿನಿಂದ ಶ್ರೀಕಾಕುಳಂವರೆಗೆ 2 ರಿಂದ 4.7 ಮೀಟರ್ ಎತ್ತರದ ಅಲೆಗಳು ಏಳಲಿವೆ ಎಂದು ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (INCOIS) ಮತ್ತು ಭಾರತ ಹವಾಮಾನ ಇಲಾಖೆ (IMD)ಸೋಮವಾರ ಮುನ್ಸೂಚನೆ ನೀಡಿವೆ.

ಅಕ್ಟೋಬರ್ 27 ರಂದು ಸಂಜೆ 5.30ರಿಂದ ರಾತ್ರಿ 11.30 ರವರೆಗೆ ಆರು ಗಂಟೆಗಳ ಕಾಲ ಎತ್ತರದ ಅಲೆಗಳು ಅಪ್ಪಳಿಸುವ ನಿರೀಕ್ಷೆಯಿದೆ. ಸಾಮಾನ್ಯ ಉಬ್ಬರವಿಳಿತಕ್ಕಿಂತ ಸುಮಾರು ಒಂದು ಮೀಟರ್ ಎತ್ತರದ ಅಲೆಗಳು ಅಪ್ಪಳಿಸಿ ಆಂಧ್ರ ಪ್ರದೇಶ ಮತ್ತು ಯಾನಂನ ತಗ್ಗು ಪ್ರದೇಶಗಳನ್ನು ಮುಳುಗಿಸಬಹುದು ಎಂದು ಜಂಟಿ ಹೇಳಿಕೆಯಲ್ಲಿ ಎರಡೂ ಸಂಸ್ಥೆಗಳು ಎಚ್ಚರಿಸಿದ್ದವು.

ಪ್ರತ್ಯೇಕ ಬೆಳವಣಿಗೆಯಲ್ಲಿ, ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದು, ಅಕ್ಷಾಂಶ 16.7°N ಮತ್ತು ರೇಖಾಂಶ 67.3°E ಬಳಿ ಸ್ಥಿರವಾಗಿದೆ – ವೆರಾವಲ್ (ಗುಜರಾತ್) ನಿಂದ ನೈಋತ್ಯಕ್ಕೆ ಸುಮಾರು 570 ಕಿ.ಮೀ ಮತ್ತು ಮುಂಬೈನಿಂದ ಪಶ್ಚಿಮ-ನೈಋತ್ಯಕ್ಕೆ 650 ಕಿ.ಮೀ ದೂರದಲ್ಲಿದೆ. ಮೊಂಥಾ ಚಂಡಮಾರುತದಿಂದ ಭಿನ್ನವಾಗಿರುವ ಈ ಹವಾಮಾನ ಪರಿಸ್ಥಿತಿಯು ಮುಂದಿನ 48 ಗಂಟೆಗಳಲ್ಲಿ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಾದ್ಯಂತ ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ.

ಮೊಂಥಾ ಚಂಡಮಾರುತವು ಪ್ರಬಲವಾಗುತ್ತಿದ್ದರೂ, ತಮಿಳುನಾಡಿನ ಹೆಚ್ಚಿನ ಭಾಗಗಳಲ್ಲಿ ಸೋಮವಾರ ಒಣ ಹವೆಯಿತ್ತು. ಆದಾಗ್ಯೂ, ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ) ಮಂಗಳವಾರ ತಿರುವಲ್ಲೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದೆ. ಚೆನ್ನೈ, ಚೆಂಗಲ್ಪಟ್ಟು, ಕಾಂಚಿಪುರಂ, ರಾಣಿಪೇಟೆ, ಥೇಣಿ, ತೆಂಕಾಸಿ ಮತ್ತು ಕನ್ಯಾಕುಮಾರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ತಮಿಳುನಾಡು ಕರಾವಳಿಯಿಂದ ಚಂಡಮಾರುತ ದೂರ ಸರಿಯುವುದರಿಂದ, ಮಂಗಳವಾರ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ ಮತ್ತು ಬುಧವಾರ ಚಂಡಮಾರುತ ಅಪ್ಪಳಿಸಿದ ನಂತರ ಗಣನೀಯವಾಗಿ ಕಡಿಮೆಯಾಗಬಹುದು ಎನ್ನಲಾಗಿದೆ.

ಚೆನ್ನೈನ ಕೆಲವು ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾದ ವರದಿಯಾಗಿದ್ದರೆ, ಹೆಚ್ಚಿನ ಒಳನಾಡಿನ ಜಿಲ್ಲೆಗಳು ಒಣಹವೆಯಿಂದ ಕೂಡಿವೆ. ತಮಿಳುನಾಡು ಮತ್ತು ದಕ್ಷಿಣ ಆಂಧ್ರ ಕರಾವಳಿಯ ಮೀನುಗಾರರಿಗೆ ಬಲವಾದ ಗಾಳಿ ಮತ್ತು ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ ‘ನಕಲಿ’ ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...