ಮನೆ ಕೆಲಸದ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ ಅವರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸೋಮವಾರ (ಡಿ.29) ಆರೋಪ ಮುಕ್ತಗೊಳಿಸಿ ಮಹತ್ವದ ಆದೇಶ ನೀಡಿದೆ. ಕಳೆದ ತಿಂಗಳು ಇದೇ ಸಂತ್ರಸ್ತೆಯ ಘನತೆಗೆ ಚ್ಯುತಿ ಉಂಟು ಮಾಡಿದ ರೇವಣ್ಣ ವಿರುದ್ಧದ ಆರೋಪವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿತ್ತು.
ಹೈಕೋರ್ಟ್ ನಿರ್ದೇಶನದಂತೆ ಪ್ರಕರಣದ ವಿಚಾರಣೆಯನ್ನು ವಿಶೇಷ ಮ್ಯಾಜಿಸ್ಟ್ರೇಟ್ ಕೆ.ಎನ್ ಶಿವಕುಮಾರ್ ಅವರು ವಿಚಾರಣೆ ನಡೆಸಿದ್ದರು.
ಸಂತ್ರಸ್ತೆ ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿರುವ ಕಾರಣಕ್ಕೆ ಪ್ರಕರಣದ ಸಂಜ್ಞೇಯ ಪರಿಗಣಿಸಲು ನಿರಾಕರಿಸಿರುವ ನ್ಯಾಯಾಲಯ, ರೇವಣ್ಣ ವಿರುದ್ಧದ ಆರೋಪಗಳನ್ನು ಕೈಬಿಟ್ಟು ಆದೇಶಿಸಿದೆ.
ಪ್ರಕರಣದ ಮೊದಲ ಆರೋಪಿಯಾಗಿರುವ ಎಚ್.ಡಿ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಲಾಗಿತ್ತು. ಆದರೆ, ಈ ಅಪರಾಧಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ಅಥವಾ ಪ್ರಾಸಿಕ್ಯೂಷನ್ ಆರಂಭಿಸಲು ಸಾಕಷ್ಟು ವಿಳಂಬವಾಗಿದ್ದು, ಈ ವಿಳಂಬವನ್ನು ಮನ್ನಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
2025ರ ನವೆಂಬರ್ 19ರಂದು ಮನೆ ಕೆಲಸದ ಮಹಿಳೆಯ ಘನತೆಗೆ ಧಕ್ಕೆಯುಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಚ್.ಡಿ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ಸಂಜ್ಞೇಯ ತೆಗೆದುಕೊಂಡಿದ್ದ ವಿಚಾರಣಾಧೀನ ನ್ಯಾಯಾಲಯದ ಕ್ರಮವನ್ನು ರದ್ದುಪಡಿಸಿದ್ದ ಹೈಕೋರ್ಟ್, ಲೈಂಗಿಕ ದೌರ್ಜನ್ಯ ಆರೋಪವನ್ನು ಪರಿಗಣಿಸಲು ಪ್ರಕರಣವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಮರಳಿಸಿತ್ತು.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಎಚ್.ಡಿ ರೇವಣ್ಣ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ್ದ ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠವು ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ರ (ಮಹಿಳೆಯ ಘನತೆಗೆ ಚ್ಯುತಿ) ಅಡಿ ಸಂಜ್ಞೇಯ ತೆಗೆದುಕೊಂಡು 42ನೇ ಎಸಿಜೆಎಂ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಿತ್ತು. ಆದರೆ, ಐಪಿಸಿ 354ಎ (ಲೈಂಗಿಕ ದೌರ್ಜನ್ಯ) ಅಡಿ ಸೂಕ್ತ ಆದೇಶ ಹೊರಡಿಸಲು ಪರಿಗಣಿಸುವಂತೆ ಪ್ರಕರಣವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಹಿಂದಿರುಗಿಸಿತ್ತು. ಇದೀಗ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಸಂಜ್ಞೇಯ ತೆಗೆದುಕೊಳ್ಳಲು ವಿಚಾರಣಾ ನ್ಯಾಯಾಲಯವು ನಿರಾಕರಿಸಿದೆ.
ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ ರೇವಣ್ಣ ಹಾಗೂ ಅವರ ಪುತ್ರ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ 2024ರ ಏಪ್ರಿಲ್ 28ರಂದು ಪ್ರಕರಣ ದಾಖಲಾಗಿತ್ತು.
ಸಂತ್ರಸ್ತೆಯ ದೂರು ಆಧರಿಸಿ ಐಪಿಸಿ ಸೆಕ್ಷನ್ 354ಎ, 354ಡಿ, 506, 509ರ ಅಡಿ ಪ್ರಕರಣ ದಾಖಲಿಸಲಾಗಿದ್ದು ರೇವಣ್ಣ ಅವರನ್ನು ಮೊದಲನೇ ಆರೋಪಿ ಹಾಗೂ ಪ್ರಜ್ವಲ್ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.
ರೇವಣ್ಣ ಅವರು ತಮ್ಮ ಪತ್ನಿ ಭವಾನಿ ಮನೆಯಲ್ಲಿ ಇಲ್ಲದ ವೇಳೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತಿದ್ದರು. ಅಲ್ಲದೆ ನನ್ನ ಮಗಳಿಗೂ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದನೆ ನೀಡುತ್ತಿದ್ದು, ಮಗಳು ಹೆದರಿ ನಂಬರ್ ಬ್ಲಾಕ್ ಮಾಡಿಕೊಂಡಿದ್ದಳು. ಇದರಿಂದ ನಾನು ಕೆಲಸ ತೊರೆದಿದ್ದಾಗಿ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದರು.
ಜೀವ ಭಯ ಇರುವುದರಿಂದ ನನಗೆ ಹಾಗೂ ನನ್ನ ಮಗಳ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್ ಡಿ ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಕೋರಿದ್ದರು.
ಈ ಮಧ್ಯೆ, ಸಂತ್ರಸ್ತೆಯನ್ನು ಅಪಹರಿಸಿದ ಸಂಬಂಧ ರೇವಣ್ಣ, ಅವರ ಪತ್ನಿ ಭವಾನಿ ಸೇರಿದಂತೆ 9 ಮಂದಿ ವಿರುದ್ಧ ಕೆ.ಆರ್ ಪೇಟೆಯಲ್ಲಿ ಬೇರೊಂದು ಪ್ರಕರಣ ದಾಖಲಾಗಿದೆ. ಇದರಲ್ಲಿ ರೇವಣ್ಣ ಮೊದಲ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗಿದ್ದಾರೆ.


