ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ ಮಾಡಿದೆ.
ಕುಕಿ ಝೋ ಮತ್ತು ಮೈತೇಯಿ ಗುಂಪುಗಳ ನಡುವಿನ ದೀರ್ಘಕಾಲ ಜನಾಂಗೀಯ ಸಂಘರ್ಷದ ಬಳಿಕ, ಫೆಬ್ರವರಿ 9,2025ರಂದು ಮಣಿಪುರದ ಮುಖ್ಯಮಂತ್ರಿ ಎನ್. ಬೀರೇನ್ ಸಿಂಗ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಫೆ.13ರಂದು ಕೇಂದ್ರ ಸರ್ಕಾರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿತು.
ಮಂಗಳವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಖೇಮ್ಚಂದ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಹೈಕಮಾಂಡ್ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದೆ. ಬುಧವಾರ (ಫೆ.4) ಸಂಜೆ ಅವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಯುಮ್ನಮ್ ಖೇಮ್ಚಂದ್ ಸಿಂಗ್ ಅವರು, ಈಗ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದ ಇತರ ಎಲ್ಲಾ ಮಿತ್ರಪಕ್ಷಗಳ ಶಾಸಕರ ಬೆಂಬಲವನ್ನು ಪಡೆಯಬೇಕಾಗುತ್ತದೆ. ಈ ಒಕ್ಕೂಟದ ಎಲ್ಲಾ ಶಾಸಕರು ಒಟ್ಟಾಗಿ ಸೇರಿ ಅವರನ್ನು ತಮ್ಮ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಅಧಿಕೃತವಾಗಿ ಆಯ್ಕೆ ಮಾಡಲಿದ್ದಾರೆ. ಈ ಪ್ರಕ್ರಿಯೆಯು ಪೂರ್ಣಗೊಂಡ ನಂತರವೇ ಅವರು ರಾಜ್ಯದಲ್ಲಿ ಸರ್ಕಾರ ರಚಿಸಲು ಅರ್ಹರಾಗುತ್ತಾರೆ ಮತ್ತು ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗುತ್ತದೆ.
ಈ ಉದ್ದೇಶಕ್ಕಾಗಿ ಪ್ರತ್ಯೇಕ ಸಭೆ ನಡೆಯಲಿದೆ. 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಬಿಜೆಪಿಯ ಪ್ರಸ್ತುತ ಬಲ 37. ಆರಂಭದಲ್ಲಿ, 2022ರ ವಿಧಾನಸಭಾ ಚುನಾವಣೆಯಲ್ಲಿ ‘ಕೇಸರಿ ಪಕ್ಷದಿಂದ 32 ಮಂದಿ ಗೆದ್ದಿದ್ದರು. ಜೆಡಿಯು ಆರು ಸ್ಥಾನಗಳನ್ನು ಗೆದ್ದಿತ್ತು. ನಂತರ ಐವರು ಜೆಡಿಯು ಶಾಸಕರು ಬಿಜೆಪಿ ಸೇರಿದರು. ಇದಲ್ಲದೆ, ರಾಜ್ಯ ವಿಧಾನಸಭೆಯಲ್ಲಿ ಒಂದು ಸ್ಥಾನವು ಹಾಲಿ ಶಾಸಕರ ಮರಣದ ನಂತರ ಖಾಲಿಯಾಯಿತು.
ರಾಷ್ಟ್ರಪತಿ ಆಳ್ವಿಕೆಯ ನಿಗದಿತ ಅವಧಿ ಮುಗಿಯುವ 10 ದಿನಗಳ ಮೊದಲು ಖೇಮ್ಚಂದ್ ಸಿಂಗ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಘೋಷಿಸಲಾಗಿದೆ.
ಖೇಮ್ಚಂದ್ ಸಿಂಗ್ ರಾಜಕೀಯ ಹಿನ್ನೆಲೆ
ಮೈತೇಯಿ ಸಮುದಾಯಕ್ಕೆ ಸೇರಿದ ಖೇಮ್ಚಂದ್ ಸಿಂಗ್ ಎರಡು ಬಾರಿ ಶಾಸಕರಾಗಿದ್ದಾರೆ. 2017ರಲ್ಲಿ ಮತ್ತು 2022ರಲ್ಲಿ ಅವರು ಸಿಂಗ್ಜಮೇಯ್ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಮಾರ್ಚ್ 2017ರಲ್ಲಿ ಖೇಮ್ಚಂದ್ ಮಣಿಪುರ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾದರು. ನಂತರ ಐದು ವರ್ಷಗಳ ಪೂರ್ಣ ಅವಧಿಗೆ ಆ ಹುದ್ದೆಯನ್ನು ಅವರು ಅಲಂಕರಿಸಿದರು.
2022ರ ವಿಧಾನಸಭಾ ಚುನಾವಣೆಯ ಗೆಲುವು ಸಾಧಿಸಿದ ಖೇಮ್ಚಂದ್ ಅವರಿಗೆ ಎರಡನೇ ಬಿರೇನ್ ಸಿಂಗ್ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪುರಸಭೆ ಆಡಳಿತ, ವಸತಿ ಅಭಿವೃದ್ಧಿ ಮತ್ತು ಶಿಕ್ಷಣ ಸೇರಿದಂತೆ ಹಲವಾರು ಖಾತೆಗಳ ಜವಾಬ್ದಾರಿಗಳನ್ನು ಅವರು ನಿರ್ವಹಿಸಿದ್ದಾರೆ. ರಾಷ್ಟ್ರಪತಿ ಆಳ್ವಿಕೆ ಹೇರುವವರೆಗೂ ಸಿಂಗ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಕುಕಿ ಮತ್ತು ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ
ಮೈತೇಯಿ ಸಮುದಾಯದ ಖೇಮ್ಚಂದ್ ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ, ಕುಕಿ ಸಮುದಾಯವನ್ನು ಪ್ರತಿನಿಧಿಸುವ ನೆಮ್ಚಾ ಕಿಪ್ಗೆನ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಇವರು ಮಣಿಪುರದ ಮೊದಲ ಮಹಿಳಾ ಉಪ ಮುಖ್ಯಮಂತ್ರಿಯಾಗಲಿದ್ದಾರೆ.
ನಾಗಾ ಸಮುದಾಯವನ್ನು ಪ್ರತಿನಿಧಿಸುವ ಲೋಸಿ ದಿಖೋ ಎರಡನೇ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಬಿಜೆಪಿಯ ಹಿರಿಯ ನಾಯಕ ಗೋವಿಂದದಾಸ್ ಕೊಂಥೌಜಮ್ ಅವರಿಗೆ ಗೃಹ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗುತ್ತದೆ ಎಂದು ವರದಿಯಾಗಿದೆ.


