ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್ಐಆರ್ ನಡೆಸುತ್ತಿಲ್ಲ ಎಂಬುವುದಾಗಿ ಪ್ರಶ್ನಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.
ಚುನಾವಣಾ ಆಯೋಗವು ಅಸ್ಸಾಂನಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ನಡೆಸುತ್ತಿದೆ, ಇದು ಮತದಾರರ ಪಟ್ಟಿಯ ಸಾಮಾನ್ಯ ನವೀಕರಣಗಳಂತೆಯೇ ಇರುತ್ತದೆ.
ಪಶ್ಚಿಮ ಬಂಗಾಳದ ಎಸ್ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದ್ದು, ತನ್ನ ಅರ್ಜಿಯ ಪರ ವಾದ ಮಂಡಿಸಲು ಸ್ವತಃ ಮಮತಾ ಬ್ಯಾನರ್ಜಿಯೇ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ವರದಿಗಳ ಪ್ರಕಾರ, ಮುಖ್ಯಮಂತ್ರಿಯೊಬ್ಬರು ಸುಪ್ರೀಂ ಕೋರ್ಟ್ ಮುಂದೆ ವೈಯಕ್ತಿಕವಾಗಿ ಹಾಜರಾಗಿ ಮೌಖಿಕ ವಾದ ಮಂಡಿಸುತ್ತಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು.
ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿ ವಾದ ಮಂಡಿಸಲು ಅನುಮತಿ ಕೋರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.
ಎಸ್ಐಆರ್ ಪ್ರಕ್ರಿಯೆಯಿಂದಾಗಿ ಪಶ್ಚಿಮ ಬಂಗಾಳದ ನಿವಾಸಿಗಳು ಎದುರಿಸುತ್ತಿರುವ ವಾಸ್ತವಗಳ ಬಗ್ಗೆ ತನಗೆ ಅರಿವಿದೆ ಎಂದು ಅವರು ತಮ್ಮ ಮಧ್ಯಂತರ ಅರ್ಜಿಯಲ್ಲಿ ತಿಳಿಸಿದ್ದಾರೆ ವರದಿ ತಿಳಿಸಿದೆ.
ತಾನು ವೈಯಕ್ತಿಕವಾಗಿ ಹಾಜರಾಗುವುದರಿಂದ ಪ್ರಕರಣದ ಪರಿಣಾಮಕಾರಿ ತೀರ್ಪು ನೀಡಲು ನ್ಯಾಯಾಲಯಕ್ಕೆ ಸಹಾಯವಾಗುತ್ತದೆ ಎಂದು ಮಮತಾ ಬ್ಯಾನರ್ಜಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಎಸ್ಐಆರ್ ಪ್ರಕ್ರಿಯೆಯ ವಿರುದ್ದ ಜನವರಿ 28ರಂದು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಎಸ್ಐಆರ್ ಚುನಾವಣಾ ಆಯೋಗದ ಅಪಾರದರ್ಶಕ, ಆತುರದ, ಅಸಂವಿಧಾನಿಕ ಮತ್ತು ಕಾನೂನುಬಾಹಿರ ಕ್ರಮ ಎಂದು ಅವರು ವಾದಿಸಿದ್ದು, ಲಕ್ಷಾಂತರ ಜನರ ಹಕ್ಕು ಕಸಿದುಕೊಳ್ಳಲಿದೆ ಎಂದು ಹೇಳಿದ್ದಾರೆ.
‘ತಾರ್ಕಿಕ ವ್ಯತ್ಯಾಸ’ (Logical Discrepancy-LD) ವರ್ಗದ ಅಡಿಯಲ್ಲಿ ವ್ಯಕ್ತಿಗಳ ವರ್ಗೀಕರಣದಲ್ಲಿ ಗಂಭೀರ ಅಕ್ರಮಗಳಿವೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ನ್ಯಾಯಾಲಯದ ನಿರ್ದೇಶನಗಳ ಹೊರತಾಗಿಯೂ ಅಂತಹ ವ್ಯಕ್ತಿಗಳ ಪಟ್ಟಿಯನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ.
ಅಧಿಕೃತ ಪೋರ್ಟಲ್ನಲ್ಲಿ ಎಲ್ಡಿ ಪಟ್ಟಿಯನ್ನು ಪ್ರಕಟಿಸದಿರುವುದು ಪಾರದರ್ಶಕತೆಯ ಕೊರತೆಗೆ ಕಾರಣವಾಗಿದೆ. ಈ ಪಟ್ಟಿಯನ್ನು ಸಾರ್ವಜನಿಕಗೊಳಿಸದ ಕಾರಣ, ಇದರಿಂದ ಬಾಧಿತರಾಗುವ ವ್ಯಕ್ತಿಗಳಿಗೆ ಸೂಕ್ತವಾಗಿ ಪ್ರತಿಕ್ರಿಯಿಸಲು ಅಥವಾ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಸಿಗದಂತಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯ ಮೇಲೆ ನನಗೆ ನಂಬಿಕೆ ಇಲ್ಲ. ಈ ಹೊಸ ಪ್ರಕ್ರಿಯೆಯ ಬದಲಾಗಿ ಕಳೆದ ವರ್ಷ ಸಿದ್ಧಪಡಿಸಲಾದ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯ ಆಧಾರದ ಮೇಲೆಯೇ ಚುನಾವಣೆಗಳನ್ನು ನಡೆಸಬೇಕು ಎಂದು ನಿರ್ದೇಶನ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.
ಅರ್ಜಿ ವಿಚಾರಣೆ ವೇಳೆ ಚುನಾವಣಾ ಆಯೋಗದ ಪರ ನ್ಯಾಯಾಲಯಕ್ಕೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ರಾಜ್ಯದಲ್ಲಿ (ಪಶ್ಚಿಮ ಬಂಗಾಳದಲ್ಲಿ) “ಹಗೆತನದ ವಾತಾವರಣ” ಇದೆ ಎಂದು ಹೇಳಿರುವುದಾಗಿ ಲೈವ್ ಲಾ ವರದಿ ಮಾಡಿದೆ.
ಮಮತಾ ಬ್ಯಾನರ್ಜಿ ಅವರ ಮನವಿಯ ಮೇರೆಗೆ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿರುವ ನ್ಯಾಯ ಪೀಠ, ಸೋಮವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ “ತಾರ್ಕಿಕ ವ್ಯತ್ಯಾಸಗಳು” ಎಂದು ವರ್ಗೀಕರಿಸಲಾದ ಹೆಸರು ಹೊಂದಾಣಿಕೆಯಾಗದ ಅಥವಾ ಕಾಗುಣಿತ ವ್ಯತ್ಯಾಸಗಳನ್ನು ಒಳಗೊಂಡಿರುವ ಪ್ರಕರಣಗಳಲ್ಲಿ ಮತದಾರರನ್ನು ವಿಚಾರಣೆಗೆ ಕರೆಯದಂತೆ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮಮತಾ ಬ್ಯಾನರ್ಜಿ ನ್ಯಾಯಾಲಯವನ್ನು ಕೋರಿದ್ದಾರೆ. ಲಭ್ಯವಿರುವ ದಾಖಲೆಗಳ ಆಧಾರದ ಮೇಲೆ ಅಂತಹ ತಿದ್ದುಪಡಿಗಳನ್ನು ಸ್ವಯಂಪ್ರೇರಿತವಾಗಿ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.
ತಾರ್ಕಿಕ ವ್ಯತ್ಯಾಸಗಳಲ್ಲಿ ಪೋಷಕರ ಹೆಸರುಗಳಲ್ಲಿನ ಹೊಂದಾಣಿಕೆಯಿಲ್ಲದಿರುವುದು, ಪೋಷಕರೊಂದಿಗೆ ಕಡಿಮೆ ವಯಸ್ಸಿನ ಅಂತರ ಮತ್ತು ಪೋಷಕರ ಮಕ್ಕಳ ಸಂಖ್ಯೆ ಆರು ವರ್ಷಕ್ಕಿಂತ ಮೇಲ್ಪಟ್ಟಿರುವುದು ಸೇರಿವೆ. ಅಂತಹ ನೋಟಿಸ್ ಪಡೆದವರಲ್ಲಿ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಕೂಡ ಒಬ್ಬರು, ಚುನಾವಣಾ ಆಯೋಗವು ಅವರ ಮತ್ತು ಅವರ ಪೋಷಕರ ನಡುವೆ 15 ವರ್ಷಗಳಿಗಿಂತ ಕಡಿಮೆ ಅಂತರವನ್ನು ಉಲ್ಲೇಖಿಸಿದೆ ಎಂದು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್ಗೆ ವಿವರಿಸಿದ್ದಾರೆ.
ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ವಿಶೇಷ ಪರಿಷ್ಕರಣಾ ಕಾರ್ಯದಡಿಯಲ್ಲಿ ಡಿಸೆಂಬರ್ 16 ರಂದು ಪ್ರಕಟಿಸಲಾಗಿದೆ. ರಾಜ್ಯದಲ್ಲಿ 58 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಜನರು ಸಾವನ್ನಪ್ಪಿದ್ದಾರೆ, ರಾಜ್ಯದ ಹೊರಗೆ ವಲಸೆ ಹೋಗಿದ್ದಾರೆ ಅಥವಾ ಎಣಿಕೆ ನಮೂನೆಗಳನ್ನು ಸಲ್ಲಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.


