ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ.
ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಇದು ವಿಶೇಷ ಹಕ್ಕುಚ್ಯುತಿ ನೋಟಿಸ್ ಅಲ್ಲ. ನಾನು ಒಂದು ಪ್ರಮುಖ ಪ್ರಸ್ತಾವನೆಯನ್ನು ಸಲ್ಲಿಸಿದ್ದೇನೆ ಎಂದಿದ್ದಾರೆ. ರಾಹುಲ್ ಗಾಂಧಿ ದೇಶದ ಜನರನ್ನು ದಾರಿತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿರುವ ದುಬೆ, ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಬೇಕು ಮತ್ತು ಚುನಾವಣೆಗೆ ಸ್ಪರ್ಧಿಸದಂತೆ ಅವರಿಗೆ ಜೀವಿತಾವಧಿ ನಿಷೇಧ ಹೇರಬೇಕು ಎಂದು ಒತ್ತಾಯಿಸಿದ್ದಾರೆ.
ರಾಹುಲ್ ಗಾಂಧಿ ಅವರು ಜಾರ್ಜ್ ಸೊರೊಸ್ ಫೌಂಡೇಶನ್, ಫೋರ್ಡ್ ಫೌಂಡೇಶನ್ ಮತ್ತು ಯುಎಸ್ಐಐಡಿನಂತಹ ವಿದೇಶಿ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದು, ಭಾರತ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸುತ್ತಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ.
ಲೋಕಸಭೆಯಲ್ಲಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಬಗ್ಗೆ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ, ಸರ್ಕಾರ ರಾಷ್ಟ್ರೀಯ ಹಿತಾಸಕ್ತಿಗಳನ್ನು ಬಿಟ್ಟುಕೊಟ್ಟಿದೆ ಎಂದು ಆರೋಪಿಸಿದ್ದರು. ಈ ಭಾಷಣದ ಬೆನ್ನಲ್ಲೇ ನಿಲುವಳಿ ಸೂಚನೆ ಮಂಡನೆಯಾಗಿದೆ.
ಇದು ಸಾಮಾನ್ಯ ಹಕ್ಕುಚ್ಯುತಿ ನಿರ್ಣಯಕ್ಕಿಂತ ಗಂಭೀರವಾದದ್ದು ಎಂದು ದುಬೆ ಹೇಳಿದ್ದಾರೆ.


