Homeಮುಖಪುಟಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

- Advertisement -
- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ‘ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ’ ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿತು, ಸಾರಿಗೆ ಮತ್ತು ಬ್ಯಾಂಕಿಂಗ್ ಸೇರಿದಂತೆ ಅಗತ್ಯ ಸೇವೆಗಳಲ್ಲಿ ವ್ಯತ್ಯಯ ಉಂಟಾಯಿತು ಎಂದು ವರದಿಯಾಗಿದೆ.

ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಎಸ್‌ಇಡಬ್ಲ್ಯುಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ ಹತ್ತು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿತ್ತು. ದೇಶದಾದ್ಯಂತ ಸುಮಾರು 30 ಕೋಟಿ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ ಎಂದು ವೇದಿಕೆ ಹೇಳಿಕೊಂಡಿದೆ.

ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುವ, ಉದ್ಯೋಗ ಭದ್ರತೆಯನ್ನು ಕಡಿಮೆ ಮಾಡುವ ಮತ್ತು ಉದ್ಯೋಗದಾತರಿಗೆ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಹಾಗೂ ಕೆಲಸದಿಂದ ತೆಗೆದುಹಾಕಲು ಸುಲಭವಾಗಿಸುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮನರೇಗಾ ಯೋಜನೆಯನ್ನು ಮರುಸ್ಥಾಪಿಸಬೇಕು, ವಿಬಿ-ಜಿ ರಾಮ್‌ಜಿ ಕಾಯ್ದೆ ರದ್ದುಗೊಳಿಸಬೇಕು, ಕರಡು ಬೀಜ ಮಸೂದೆಮತ್ತು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು, ಪರಮಾಣು ಶಕ್ತಿಯ ಶಾಂತಿ ಕಾಯ್ದೆಯನ್ನೂ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಅಸ್ಸಾಂ, ತಮಿಳುನಾಡು, ಪಾಂಡಿಚೇರಿ, ಕೇರಳ, ಒಡಿಶಾ ಮತ್ತು ಬಿಹಾರ ಸೇರಿದಂತೆ ರಾಜ್ಯಗಳಿಂದ ಪ್ರತಿಭಟನೆಯ ವರದಿಗಳು ಬಂದಿವೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕರ್ನಾಟಕದಲ್ಲಿ ಪ್ರತಿಭಟನೆ

ಕರ್ನಾಟಕದಲ್ಲಿ ಮುಷ್ಕರಕ್ಕೆ ಹೆಚ್ಚಿನ ಬೆಂಬಲ ದೊರೆತಂತೆ ಕಂಡು ಬಂದಿಲ್ಲ. ಬೆಂಗಳೂರಿನ ಟೌನ್‌ ಹಾಲ್ ಬಳಿ ಪ್ರತಿಭಟನೆಗೆ ಮುಂದಾದ ಕಾರ್ಮಿಕ ಸಂಘಟನೆಗಳ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು. ಇನ್ನುಳಿದಂತೆ ರಾಜ್ಯದ ವಿವಿಧ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆದ ಬಗ್ಗೆ ವರದಿಯಾಗಿದೆ.

ದೆಹಲಿಯ ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನೆ

ದೆಹಲಿಯ ಕೈಗಾರಿಕಾ ವಲಯಗಳಾದ ಓಖ್ಲಾ ಮತ್ತು ಬವಾನಾಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಹೆಚ್ಚಿನ ಖಾಸಗಿ ವಾಹನಗಳು ರಸ್ತೆಗೆ ಇಳಿಯದ ಕಾರಣ ಸಂಚಾರ ದಟ್ಟಣೆ ಕಡಿಮೆಯಿತ್ತು. ಬ್ಯಾಂಕಿಂಗ್, ವಿಮೆ, ಅಂಚೆ, ಸಾರಿಗೆ, ಆರೋಗ್ಯ, ಕಲ್ಲಿದ್ದಲು ಮತ್ತು ಕಲ್ಲಿದ್ದಲೇತರ ಗಣಿಗಳು, ಗ್ಯಾಸ್ ಪೈಪ್‌ಲೈನ್ ಹಾಗೂ ವಿದ್ಯುತ್ ವಲಯಗಳ ಮೇಲೆ ಇಂದಿನ ಮುಷ್ಕರದ ಪರಿಣಾಮ ಬೀರಿದೆ ಎಂದು ಕೌರ್ ತಿಳಿಸಿದ್ದಾರೆ.

ಒಡಿಶಾದಲ್ಲಿ ಪ್ರತಿಭಟನಾಕಾರರಿಂದ ರಸ್ತೆ ತಡೆ, ಸಾರಿಗೆ ಸೇವೆಯಲ್ಲಿ ವ್ಯತ್ಯಯ

ದೇಶದಾದ್ಯಂತ ನಡೆದ ಮುಷ್ಕರದಿಂದ ಒಡಿಶಾದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಭುವನೇಶ್ವರ, ಕಟಕ್ ಮತ್ತು ರೂರ್ಕೆಲಾದಂತಹ ಸ್ಥಳಗಳಲ್ಲಿ ಸಾರಿಗೆ ಸೇವೆಗಳು ವ್ಯತ್ಯಯಗೊಂಡವು. ಭುವನೇಶ್ವರದಲ್ಲಿ ಪ್ರತಿಭಟನಾಕಾರರು ಸ್ಟೇಷನ್ ಸ್ಕ್ವೇರ್ ಬಳಿ ರಸ್ತೆ ತಡೆ ನಡೆಸಿದ್ದರಿಂದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಯಿತು. ಮುಷ್ಕರದಿಂದಾಗಿ ‘ಅಮಾ ಬಸ್’ ಮತ್ತು ಆಟೋರಿಕ್ಷಾ ಸೇವೆಗಳು ಸ್ಥಗಿತಗೊಂಡವು. ರಾಜಧಾನಿಯ ಪ್ರಮುಖ ವಾಣಿಜ್ಯ ಸಂಸ್ಥೆಗಳೂ ಕೂಡ ಮುಚ್ಚಲ್ಪಟ್ಟಿತ್ತು ಎಂದು ವರದಿಯಾಗಿದೆ.

ಜಯದೇವ್ ವಿಹಾರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ-16 ರಲ್ಲಿಯೂ ಪ್ರತಿಭಟನೆಗಳು ನಡೆದವು. ಇದರಿಂದಾಗಿ ಸಂಚಾರಕ್ಕೆ ಅಡಚಣೆ ಉಂಟಾಯಿತು ಎಂದು ವರದಿ ತಿಳಿಸಿದೆ.

ಜಾರ್ಖಂಡ್‌ನಲ್ಲಿ ಬ್ಯಾಂಕಿಂಗ್, ವಿಮೆ, ಕಲ್ಲಿದ್ದಲು ವಲಯಗಳಿಗೆ ತಟ್ಟಿದ ಮುಷ್ಕರದ ಬಿಸಿ

ಜಾರ್ಖಂಡ್‌ನ ವಿವಿಧ ಕಾರ್ಮಿಕ ಸಂಘಗಳ ಸದಸ್ಯರು ವಿವಿಧ ಕಲ್ಲಿದ್ದಲು ಕಂಪನಿಗಳು ಮತ್ತು ಪಿಎಸ್‌ಯುಗಳ ದ್ವಾರಗಳ ಮುಂದೆ ಪ್ರತಿಭಟಿಸಿದರು. ಮುಷ್ಕರದಿಂದ ರಾಜ್ಯದ ಬ್ಯಾಂಕಿಂಗ್, ವಿಮೆ ಮತ್ತು ಕಲ್ಲಿದ್ದಲು ವಲಯಗಳ ಮೇಲೂ ಪರಿಣಾಮ ಬೀರಿದೆ. ಎಡಪಕ್ಷಗಳು ಮತ್ತು ಕಾಂಗ್ರೆಸ್ ಮುಷ್ಕರಕ್ಕೆ ಬೆಂಬಲ ನೀಡಿತ್ತು.

ಕೇರಳದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ, ಸಾರಿಗೆ ಸೇವೆಗಳಲ್ಲಿ ವ್ಯತ್ಯಯ

ಕೇರಳದಲ್ಲಿ ಮುಷ್ಕರದಿಂದ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ರಸ್ತೆಗಿಳಿಯದ ಕಾರಣ ಪ್ರಯಾಣಿಕರು ಹೆಚ್ಚು ತೊಂದರೆ ಅನುಭವಿಸಿದರು. ಆಟೋ-ರಿಕ್ಷಾ ಒಕ್ಕೂಟಗಳು ಕೂಡ ಮುಷ್ಕರದ ಸಮಯದಲ್ಲಿ ಕಾರ್ಯನಿರ್ವಹಿಸುವುದಿಲ್ಲ ಎಂದು ಘೋಷಿಸಿದ್ದವು. ಇದರಿಂದ ಪ್ರಯಾಣಿಕರಿಗೆ ತೊಂದರೆ ಆಯಿತು ಎಂದು ವರದಿಯಾಗಿದೆ.

ಸಾರಿಗೆ ಸೇವೆಗಳ ವ್ಯತ್ಯಯವು ಸರ್ಕಾರಿ ಕಚೇರಿಗಳಲ್ಲಿನ ಹಾಜರಾತಿಯ ಮೇಲೂ ಪರಿಣಾಮ ಬೀರಿತ್ತು. ಈ ನಡುವೆ, ಮುಷ್ಕರದ ಕಾರಣದಿಂದ ಕಚೇರಿಗೆ ತೆರಳಲು ಆಗದೆ ಆದ ಗೈರುಹಾಜರಿಯನ್ನು ‘ಡೈಸ್-ನಾನ್’ (ಕೆಲಸವಿಲ್ಲದ ದಿನಕ್ಕೆ ವೇತನವಿಲ್ಲ) ಎಂದು ಪರಿಗಣಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ಗೋವಾದಲ್ಲಿ ಮಿಶ್ರ ಪ್ರತಿಕ್ರಿಯೆ

ಗೋವಾದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಅನೇಕ ವಿಮಾ ಕಂಪನಿಗಳ ಕಚೇರಿಗಳು ಮುಚ್ಚಲ್ಪಟ್ಟಿತ್ತು. ರಾಜ್ಯದ ಕೆಲವು ಕೈಗಾರಿಕಾ ಘಟಕಗಳ ಮೇಲೂ ಮುಷ್ಕರ ಪರಿಣಾಮ ಬೀರಿದೆ. ಮುಷ್ಕರದ ಕರೆಗೆ ಬೆಂಬಲ ಸೂಚಿಸಲು ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಕಾರ್ಮಿಕ ಸಂಘಟನೆಗಳು ಕೆಲಸವನ್ನು ಸ್ಥಗಿತಗೊಳಿಸಿವೆ ಎಂದು ಎಐಟಿಯುಸಿ ಕಾರ್ಯದರ್ಶಿ ಸುಹಾಸ್ ನಾಯಕ್ ತಿಳಿಸಿದ್ದಾರೆ.

ಅಗತ್ಯ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ನಾಯಕ್ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕೂಡ ಯಾವುದೇ ಸಮಸ್ಯೆಯಿಲ್ಲದೆ ಕಾರ್ಯನಿರ್ವಹಿಸಿದೆ ಎಂದು ಅವರು ಹೇಳಿದ್ದಾರೆ.

ಕಾರ್ಮಿಕ ಸಂಘಟನೆಗಳ ಸದಸ್ಯರು ರಾಜಧಾನಿ ಪಣಜಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಪಶ್ಚಿಮ ಬಂಗಾಳದಿಂದ ಭಾಗಶಃ ಪ್ರತಿಕ್ರಿಯೆ

ಪಶ್ಚಿಮ ಬಂಗಾಳದಲ್ಲಿ ಮುಷ್ಕರಕ್ಕೆ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ಬ್ಯಾಂಕುಗಳು ಮತ್ತು ಕೈಗಾರಿಕಾ ವಲಯಗಳಲ್ಲಿ ಕೆಲಸದ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ‘ಬಂಗಾಳವನ್ನು ಉಳಿಸಿ’ ಎಂಬ ಕರೆ ನೀಡಿರುವ ಸಿಐಟಿಯು, ಎಐಟಿಯುಸಿ ಮತ್ತು ಯುಟಿಯುಸಿ ಸೇರಿದಂತೆ ಕಾರ್ಮಿಕ ಸಂಘಟನೆಗಳ ಸದಸ್ಯರು ದುರ್ಗಾಪುರ ಮತ್ತು ಹಲ್ದಿಯಾದ ಕೈಗಾರಿಕಾ ಕೇಂದ್ರಗಳ ಕಾರ್ಖಾನೆಗಳ ಮುಂದೆ ಪ್ರತಿಭಟನೆ ನಡೆಸಿದರು.

ರಾಜ್ಯದ ಹಲವು ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳ ಕಾರ್ಯಾಚರಣೆಯ ಮೇಲೆ ಮುಷ್ಕರ ಪರಿಣಾಮ ಬೀರಿದೆ ಎಂದು ಕಾರ್ಮಿಕ ಸಂಘಟನೆಯ ನಾಯಕರು ತಿಳಿಸಿದ್ದಾರೆ. ಆದರೆ, ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಎಂದಿನಂತೆ ಕಾರ್ಯನಿರ್ವಹಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...

ವಿದ್ಯಾರ್ಥಿ ದಂಗೆ ಬಳಿಕ ಬಾಂಗ್ಲಾದಲ್ಲಿ ಇಂದು ಮೊದಲ ಮತದಾನ

ಬಾಂಗ್ಲಾದೇಶದಲ್ಲಿ ಇಂದು (ಫೆ. 12, 2026) ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯುತ್ತಿದೆ. ಶೇಖ್ ಹಸೀನಾ ಅವರ ಪದಚ್ಯುತಿಯ ನಂತರ ನಡೆಯುತ್ತಿರುವ ಮೊದಲ ಪ್ರಮುಖ ಚುನಾವಣೆ ಇದಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7:30ಕ್ಕೆ ಆರಂಭವಾದ ಮತದಾನವು...