ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ (ಘಟಿಕೋತ್ಸವ) ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ನಾಡೋಜ ಗೌರವ ಪ್ರದಾನ ಮಾಡಲಿದ್ದಾರೆ. ಆದರೆ, ರಾಜ್ಯಪಾಲರ ಇತ್ತೀಚಿನ ಕೆಲವು ಧೋರಣೆ ಮತ್ತು ನಿರ್ಧಾರಗಳ ವಿರುದ್ಧ ಪ್ರತಿಭಟನಾರ್ಥವಾಗಿ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸದಿರುವ ನಿಲುವಿಗೆ ಬಂದಿರುವುದಾಗಿ ತಿಳಿಸಿರುವುದಾಗಿ ಈ ದಿನ.ಕಾಮ್ ವರದಿ ಮಾಡಿದೆ.
ನಾಡೋಜ ಪ್ರಶಸ್ತಿಯು ಹಂಪಿ ಕನ್ನಡ ವಿಶ್ವವಿದ್ಯಾಲಯವು ಪ್ರತಿವರ್ಷ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾಗಿದ್ದು, ಈ ಬಾರಿ ಶತಾಯುಷಿ ಪ್ರೊ.ಸಿ ಮಹದೇವಪ್ಪ, ಡಾ.ಜಿ ರಾಮಕೃಷ್ಣ ಮತ್ತು ಸಾರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಎಚ್ ಸಿ ಸತ್ಯನ್ ಅವರಿಗೆ ನಾಡೋಜ ಪ್ರಶಸ್ತಿ ನೀಡುವುದಾಗಿ ಕುಲಪತಿ ಪ್ರೊ ಡಿ.ವಿ ಪರಮಶಿವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದರು. ಸತ್ಯನ್ ಅವರಿಗೆ ಪ್ರಶಸ್ತಿ ನೀಡುತ್ತಿರುವುದು ಕೂಡ ವಿವಾದಕ್ಕೆ ಕಾರಣವಾಗಿದೆ. ಅವರ ಹೆಸರನ್ನು ಪಟ್ಟಿಗೆ ಸೇರಿಸಿದವರು ಯಾರು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
ಸತ್ಯನ್ ಅವರ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ಸೇರಿದಂತೆ ಇತರ ಕೋರ್ಟ್ಗಳಲ್ಲಿ ಪ್ರಕರಣಗಳ ವಿಚಾರಣೆ ಬಾಕಿ ಇದೆ. ಇಂತಹ ವ್ಯಕ್ತಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡುವುದರ ಬಗ್ಗೆ ಪುನರ್ಪರಿಶೀಲನೆ ನಡೆಸಬೇಕು. ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ʼಸಾರ್ವಜನಿಕ ಹೊಣೆಗಾರಿಕೆ ಸಮಿತಿʼ ಕುಲಪತಿಗಳಿಗೆ ಪತ್ರ ಬರೆದು ಒತ್ತಾಯಿಸಿದೆ.


