ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಮತ್ತು ಯಾದಗಿರಿ ಸೇರಿದಂತೆ ಒಟ್ಟು 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆದಿದೆ.
ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ), ವಿದ್ಯುತ್ ಇಲಾಖೆ (ಕೆಪಿಟಿಸಿಎಲ್/ ಬೆಸ್ಕಾಂ), ಜಲಮಂಡಳಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಉನ್ನತ ಹುದ್ದೆಗಳಲ್ಲಿರುವವರ ಮನೆ ಹಾಗೂ ಕಚೇರಿಗಳ ಶೋಧ ಕಾರ್ಯ ಕೈಗೊಳ್ಳಲಾಗಿದೆ.
ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳು, ಬ್ಯಾಂಕ್ ಖಾತೆಗಳ ವಿವರ ಮತ್ತು ನಗದನ್ನು ವಶಪಡಿಸಿಕೊಂಡು ಪರಿಶೀಲಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಹಾಸನ ಮಹಾನಗರ ಪಾಲಿಕೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ (ಇಇ) ಸತ್ಯನಾರಾಯಣ ಅವರ ಮನೆ, ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಎಇಇ ಸತೀಶ್ ಅವರ ಮನೆ ಮತ್ತು ಕಚೇರಿ, ಬಾಗಲಕೋಟೆಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್ಡಿಸಿಎಲ್) ಮುಖ್ಯ ಇಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ಮನೆ, ಮೈಸೂರಿನಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇಇ ಆಸಿಫ್ ಇಕ್ಬಾಲ್ ಅವರ ಮನೆ ಮತ್ತು ಕಚೇರಿ, ಯಾದಗಿರಿಯಲ್ಲಿ ವಿದ್ಯುತ್ ಇಲಾಖೆಯ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್ ವಿರೇಶ್ ಹಿರೇಮಠ್, ಧಾರವಾಡದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ. ಕೆ. ಸುರಕೋಡ್ ಅವರ ಮನೆ ಮೇಲೆ ದಾಳಿ ನಡೆದಿದೆ ಎಂದು ವರದಿಗಳು ವಿವರಿಸಿವೆ.
ಹಾಸನದಲ್ಲಿ ಎಎಇ ಸತ್ಯನಾರಾಯಣ ಅವರು ಬಾಗಿಲು ತೆರೆಯಲು ನಿರಾಕರಿಸಿದಾಗ, ಲೋಕಾಯುಕ್ತ ಪೊಲೀಸರು ಜೀಪ್ ಮೇಲೆ ಹತ್ತಿ ಮೊದಲ ಮಹಡಿಯ ಮೂಲಕ ಮನೆಯೊಳಗೆ ಪ್ರವೇಶಿಸಿದ್ದಾರೆ ಎಂದು ವರದಿಯಾಗಿದೆ.
ಬಾಗಲಕೋಟೆಯಲ್ಲಿ ಕೆಆರ್ಡಿಸಿಎಲ್ ಇಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ಮನೆಯಲ್ಲಿ ಶೋಧ ನಡೆಸುತ್ತಿದ್ದಾಗ ಕೆರೆ ಹಾವೊಂದು ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಅಧಿಕಾರಿಗಳು ಅಕ್ರಮವಾಗಿ ಗಳಿಸಿರುವ ಆಸ್ತಿ ಪತ್ರಗಳು, ಚಿನ್ನಾಭರಣ ಮತ್ತು ನಗದನ್ನು ಲೋಕಾಯುಕ್ತ ತಂಡ ವಶಪಡಿಸಿಕೊಳ್ಳುತ್ತಿದೆ. ಸದ್ಯಕ್ಕೆ ದಾಖಲೆಗಳ ಪರಿಶೀಲನೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.


