ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಆರ್ಎಸ್ಎಸ್ ಬ್ಯಾನರ್ ಅಡಿಯಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ “ಸೇವೆ, ಸಂಘಟನೆ, ಸಂಸ್ಕೃತಿ ಮತ್ತು ಅಭಿವೃದ್ಧಿ ಹೊಂದಿದ ಭಾರತದಲ್ಲಿ ಯುವಕರ ಪಾತ್ರ” ಎಂಬ ಶೀರ್ಷಿಕೆಯ ಕಾರ್ಯಕ್ರಮವನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಯಿತು.
ಘಟನೆಯ ವೀಡಿಯೊಗಳಲ್ಲಿ, “ಆರ್ಎಸ್ಎಸ್ ಹಿಂತಿರುಗಿ” ಎಂಬ ಘೋಷಣೆಗಳನ್ನು ಕೂಗುತ್ತಿದ್ದ ವಿದ್ಯಾರ್ಥಿನಿ ಸೇರಿದಂತೆ ಪ್ರತಿಭಟನಾಕಾರರನ್ನು ಕಾರ್ಯಕ್ರಮ ಆಯೋಜಕರು ಥಳಿಸಿ, ನಂತರ ಭದ್ರತಾ ಸಿಬ್ಬಂದಿ ಕರೆದೊಯ್ದಿದ್ದಾರೆ.
ನಾಲ್ವರು ವಿದ್ಯಾರ್ಥಿಗಳು ಪ್ರಸ್ತುತ ಜ್ಯೋತಿನಗರ ಪೊಲೀಸ್ ಠಾಣೆಯಲ್ಲಿದ್ದಾರೆ.
ಬಂಧಿತರಲ್ಲಿ ಮೂವರು ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ) ಕಾರ್ಯಕರ್ತರು ಮತ್ತು ಒಬ್ಬರು ಫ್ರೆಟರ್ನಿಟಿ ಮೂವ್ಮೆಂಟ್ ಕಾರ್ಯಕರ್ತ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಫ್ರೆಟರ್ನಿಟಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಲುಬೈಬ್ ಬಶೀರ್, ಎಲ್ಲಾ ಬಂಧಿತರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಹೇಳಿದ್ದಾರೆ.
ಹಿಂದೂ ರಾಷ್ಟ್ರೀಯತಾವಾದಿ ಉಗ್ರಗಾಮಿ ಗುಂಪಾದ ಆರ್ಎಸ್ಎಸ್ಗೆ ಸಾರ್ವಜನಿಕ ವಿಶ್ವವಿದ್ಯಾಲಯದಲ್ಲಿ ಹೇಗೆ ಅವಕಾಶ ನೀಡಲಾಗಿದೆ ಎಂಬುದರ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ.


