ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಸಂಬಂಧ ಸುಪ್ರೀಂ ಕೋರ್ಟ್ ಸೋಮವಾರ (ಏ.13) ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು livelaw.in ವರದಿ ಮಾಡಿದೆ.
ವಕೀಲ ಹಾಗೂ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಮೂಲಭೂತ ಹಕ್ಕುಗಳ ಜಾರಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಹಕ್ಕನ್ನು ಈ ವಿಧಿಯು ಖಾತರಿಪಡಿಸುತ್ತದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ಅರ್ಜಿಯ ಪ್ರಾಥಮಿಕ ಪರಿಶೀಲನೆಯ ನಂತರ, ಇದರಲ್ಲಿ ಕೋರಲಾದ ಪರಿಹಾರಗಳನ್ನು ಈಗ ನಡೆಯುತ್ತಿರುವ ಚುನಾವಣೆಗಳಿಗೆ ಪರಿಗಣಿಸಲು ಸಾಧ್ಯವಿಲ್ಲ ಎಂಬುವುದಾಗಿ ತಿಳಿಸಿದೆ ಎಂದು livelaw.in ವರದಿ ಉಲ್ಲೇಖಿಸಿದೆ.
ಆದಾಗ್ಯೂ, “ಮುಂದಿನ ಸಂಸತ್ತಿನ ಚುನಾವಣೆಗಳಿಗೆ ಅಥವಾ ರಾಜ್ಯ ವಿಧಾನಸಭೆಗಳ ಚುನಾವಣೆಗಳಿಗೆ ಇಂತಹ ಕ್ರಮವನ್ನು ಅನುಸರಿಸುವ ಅಗತ್ಯವಿದೆಯೇ ಎಂಬ ಬಗ್ಗೆ ಪರಿಶೀಲಿಸುವ ಅಗತ್ಯವಿದೆ” ಎಂದು ಪೀಠವು ಅಭಿಪ್ರಾಯಪಟ್ಟಿದೆ.
ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆಗಳು ನಡೆದಿವೆ. ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು ಏಪ್ರಿಲ್ 29 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಎಲ್ಲಾ ರಾಜ್ಯಗಳ ಫಲಿತಾಂಶಗಳು ಮೇ 4ರಂದು ಪ್ರಕಟವಾಗಲಿವೆ.
ವಿಚಾರಣೆಯ ಸಮಯದಲ್ಲಿ, ಪ್ರಸ್ತಾವಿತ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆಯು ಚುನಾವಣಾ ಅಕ್ರಮಗಳ ವಿರುದ್ಧ ತಡೆಗಟ್ಟುವ ಕ್ರಮವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಅಶ್ವಿನಿ ಕುಮಾರ್ ಉಪಾಧ್ಯಾಯ ಪ್ರತಿಪಾದಿಸಿದ್ದಾರೆ. ಈ ವ್ಯವಸ್ಥೆಯು ಚುನಾವಣಾ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ ಮತ್ತು ನಿಖರತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದಿದ್ದಾರೆ.
ಪ್ರಸ್ತುತ ವಿಧಾನಸಭಾ ಚುನಾವಣೆಗಳಲ್ಲಿ ಇಂತಹ ಕ್ರಮಗಳನ್ನು ಜಾರಿಗೆ ತರುವುದು ಕಾರ್ಯಸಾಧ್ಯವಲ್ಲ ಎಂದು ಅರ್ಜಿದಾರ ಹೇಳಿದ್ದಾರೆ. ಆದಾಗ್ಯೂ, ಪ್ರಾಕ್ಸಿ ಮತದಾನ ಮತ್ತು ಮತದಾರರನ್ನು ಆಕರ್ಷಿಸುವಂತಹ ಅಭ್ಯಾಸಗಳನ್ನು ತಡೆಯಲು ಭವಿಷ್ಯದ ಚುನಾವಣೆಗಳಲ್ಲಿ ಈ ವ್ಯವಸ್ಥೆಯನ್ನು ಪರಿಚಯಿಸಬಹುದು ಎಂದು ಅವರು ಪ್ರತಿಪಾದಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, ಈ ಪ್ರಸ್ತಾವನೆಯನ್ನು ಜಾರಿಗೆ ತರಲು ನಿಯಮಗಳನ್ನು ಬದಲಾಯಿಸಬೇಕಾಗುತ್ತದೆ ಎಂದು ತಿಳಿಸಿದೆ. ಅಷ್ಟೇ ಅಲ್ಲದೆ, ಇದು ಸರ್ಕಾರಿ ಬೊಕ್ಕಸದ ಮೇಲೆ ಹೆಚ್ಚಿನ ಆರ್ಥಿಕ ಹೊರೆಯನ್ನು ಉಂಟುಮಾಡುತ್ತದೆ ಎಂದು ಹೇಳಿದೆ.


