ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್ನಲ್ಲಿ ಜಮಾಯಿಸುವಂತೆ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ.
ಇದಕ್ಕೂ ಮುನ್ನ, ಪ್ರತಿಭಟನೆಗೆ ಜಂಟಿಯಾಗಿ ಅನುಮತಿ ಕೋರಲು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಬರುವಂತೆ ಸಿಜೆಪಿ ಬೆಂಬಲಿಗರಿಗೆ ಮನವಿ ಮಾಡಲಾಗಿತ್ತು. ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಈ ಪ್ರತಿಭಟನೆಯನ್ನು ಘೋಷಿಸಿದೆ.
“ದೆಹಲಿ ಪೊಲೀಸರು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಿದ್ದಾರೆ. ಹಾಗಾಗಿ ನಾವು ಈಗ ನೇರವಾಗಿ ಜಂತರ್ ಮಂತರ್ನಲ್ಲಿಯೇ ಜಮಾಯಿಸಬಹುದು.ಈ ಮೊದಲು ಯೋಜಿಸಿದಂತೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಹೋಗುವ ಅಗತ್ಯವಿಲ್ಲ” ಎಂದು ಸಿಜೆಪಿ ತನ್ನ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.
“ಕಾಕ್ರೋಚ್ಗಳು ಬರುತ್ತಿದ್ದಾರೆ, ಧರ್ಮೇಂದ್ರ ಪ್ರಧಾನ್ ಹೋಗುತ್ತಿದ್ದಾರೆ” ಎಂದು ಪೋಸ್ಟ್ನಲ್ಲಿ ಬರೆಯಲಾಗಿದೆ.
ಅಮೆರಿಕದಿಂದ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ದೀಪ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದು, “ಪ್ರೀತಿ ಮತ್ತು ಶಾಂತಿಯಿಂದ” ಪ್ರತಿಭಟನೆಯನ್ನು ಮುನ್ನಡೆಸುವಂತೆ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ.
ಪ್ರತಿಭಟನೆಗೆ ಪುಸ್ತಕ ಮತ್ತು ತ್ರಿವರ್ಣ ಧ್ವಜವನ್ನು ಕೊಂಡೊಯ್ಯುವಂತೆಯೂ ಅವರು ಮನವಿ ಮಾಡಿದ್ದಾರೆ.
“ಬಂದಿಳಿದಿದ್ದೇನೆ. ಜಂತರ್ ಮಂತರ್ನಲ್ಲಿ ನಿಮ್ಮನ್ನೆಲ್ಲಾ ಭೇಟಿಯಾಗಲು ಎದುರು ನೋಡುತ್ತಿದ್ದೇನೆ. ಒಂದು ಪುಸ್ತಕ ಮತ್ತು ನಮ್ಮ ತಿರಂಗಾವನ್ನು ಕೊಂಡೊಯ್ಯುವುದನ್ನು ಮರೆಯಬೇಡಿ! ಕರುಣೆ ಮತ್ತು ಕೃತಜ್ಞತೆಯ ಸಂಕೇತವಾಗಿ ಪೊಲೀಸ್ ಸಿಬ್ಬಂದಿಗೆ ಹೂವುಗಳನ್ನು ನೀಡಿ. ಈ ಚಳವಳಿಯನ್ನು ನಾವು ಪ್ರೀತಿ ಮತ್ತು ಶಾಂತಿಯಿಂದ ಮುನ್ನಡೆಸಬೇಕಾಗಿದೆ!” ಎಂದು ದೀಪ್ಕೆ ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.
“ಭಾರತಕ್ಕೆ ಬರುತ್ತಿದ್ದೇನೆ… ನನ್ನ ಭವಿಷ್ಯವನ್ನು ಸಂವಿಧಾನದ ಕೈಗೆ ಒಪ್ಪಿಸುತ್ತಿದ್ದೇನೆ. #ಜೈಭೀಮ್,” ಎಂದು ದೀಪ್ಕೆ ತಮ್ಮ ಹಿಂದಿನ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದರು.
ದೀಪ್ಕೆ ಅವರು ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ರತಿಕ್ರಿಯೆಯಾಗಿ ಪ್ರಾರಂಭಿಸಿದ ಡಿಜಿಟಲ್ ವೇದಿಕೆಯಾದ ಸಿಜೆಪಿ, ಮುಖ್ಯವಾಗಿ ದೇಶದ ಯುವಜನತೆಯಿಂದ ಆನ್ಲೈನ್ನಲ್ಲಿ ಗಮನಾರ್ಹ ಬೆಂಬಲವನ್ನು ಗಳಿಸಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೀಟ್, ಸಿಬಿಎಸ್ಇ, ಸಿಯುಇಟಿ ಮತ್ತು ಎಸ್ಎಸ್ಸಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಅಕ್ರಮಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಜಂತರ್ ಮಂತರ್ನಲ್ಲಿ ಪ್ರತಿಭಟನೆಯನ್ನು ನಡೆಸುವ ಮೂಲಕ, ಸಿಜೆಪಿ ಒಂದು ವ್ಯಂಗ್ಯಭರಿತ ಆನ್ಲೈನ್ ವೇದಿಕೆಯಿಂದ ಸಂಘಟಿತ ಆಂದೋಲನವಾಗಿ ಹೊರಹೊಮ್ಮುವ ಗುರಿಯನ್ನು ಹೊಂದಿದೆ.
ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಈ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದು, ಒಂದು ವೇಳೆ ದೀಪ್ಕೆ ಅವರನ್ನು ಬಂಧಿಸಿದರೆ ತಾವು ಆರು ವಾರಗಳ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕಾಕ್ರೋಚ್ಗಳ ಪ್ರತಿಭಟನೆ ಹಿನ್ನೆಲೆ, ದೆಹಲಿ ವಿಮಾನ ನಿಲ್ದಾಣ, ಪ್ರಮುಖ ರೈಲ್ವೆ ನಿಲ್ದಾಣಗಳು, ಅಂತಾರಾಜ್ಯ ಬಸ್ ನಿಲ್ದಾಣಗಳು ಮತ್ತು ದೆಹಲಿಯನ್ನು ನೆರೆಹೊರೆಯ ರಾಜ್ಯಗಳೊಂದಿಗೆ ಸಂಪರ್ಕಿಸುವ ಗಡಿ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಲಪಡಿಸಲಾಗಿದೆ.
ಮುನ್ನೆಚ್ಚರಿಕೆ ಭದ್ರತಾ ಕ್ರಮಗಳ ಭಾಗವಾಗಿ ನವದೆಹಲಿ ಜಿಲ್ಲೆ ಮತ್ತು ಇತರ ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲು 1,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಮೀಸಲಿಡಲಾಗಿದೆ ಎಂದು ವರದಿಯಾಗಿದೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪ್ರಮುಖ ಜಂಕ್ಷನ್ಗಳು, ಮಾರುಕಟ್ಟೆ ಪ್ರದೇಶಗಳು ಮತ್ತು ಇತರ ಸೂಕ್ಷ್ಮ ಸ್ಥಳಗಳಲ್ಲಿಯೂ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ವರದಿಗಳು ಹೇಳಿವೆ.
ಹೆಚ್ಚುವರಿ ಭದ್ರತಾ ಕ್ರಮಗಳ ಭಾಗವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದ ಹೊರಗೆ ಹಲವಾರು ಪದರಗಳ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ, ಹಾಗೆಯೇ ಗಡಿ ಪ್ರದೇಶಗಳಲ್ಲಿ ಮತ್ತು ಮಧ್ಯ ದೆಹಲಿಗೆ ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ವಾಹನ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ವ್ಯವಸ್ಥೆಗಳ ಭಾಗವಾಗಿ, ಶುಕ್ರವಾರ ದೆಹಲಿ ವಿಮಾನ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಪ್ರಮಾಣದ ಪೊಲೀಸ್ ಸಿಬ್ಬಂದಿ ನಿಯೋಜನೆ ಕಂಡುಬಂದಿತ್ತು.


