Homeಮುಖಪುಟಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

- Advertisement -
- Advertisement -

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ.

ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು ಇತ್ತೀಚೆಗೆ ಬೆಳಕಿಗೆ ಬಂದಿದ್ದು, ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ವರದಿಗಳ ಪ್ರಕಾರ, ಇಂದೋರ್‌ನ ವೇಗವಾಗಿ ಬೆಳೆಯುತ್ತಿರುವ ಖಜರಾನಾ ಪ್ರದೇಶದ ಸುಮಾರು 3 ಲಕ್ಷ ಜನಸಂಖ್ಯೆಗೆ ಉಚಿತ ವೈದ್ಯಕೀಯ ಸೌಲಭ್ಯ ನೀಡಲು 23 ಜೂನ್ 2020ರಂದು ಮಧ್ಯ ಪ್ರದೇಶ ಸರ್ಕಾರವು ಈ 100 ಬೆಡ್‌ಗಳ ಆಸ್ಪತ್ರೆಯನ್ನು ಮಂಜೂರು ಮಾಡಿತ್ತು. 

ಈ ಆಸ್ಪತ್ರೆಗೆ ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ದಾದಿಯರು (ನರ್ಸ್‌ಗಳು), ಲ್ಯಾಬ್ ಟೆಕ್ನಿಷಿಯನ್ಸ್ ಹಾಗೂ ಫಾರ್ಮಾಸಿಸ್ಟ್‌ಗಳು ಸೇರಿದಂತೆ ಒಟ್ಟು 87 ಸರ್ಕಾರಿ ಹುದ್ದೆಗಳನ್ನು ಅನುಮೋದಿಸಲಾಗಿದೆ.

ಕಾಗದದ ಮೇಲಿನ ಆಸ್ಪತ್ರೆ

ಆಶ್ಚರ್ಯಕರ ಸಂಗತಿಯೆಂದರೆ, ಆಸ್ಪತ್ರೆ ಘೋಷಣೆಯಾಗಿ 6 ವರ್ಷ ಕಳೆದರೂ, ಕಟ್ಟಡ ನಿರ್ಮಾಣಕ್ಕೆ ಇಂದಿಗೂ ಭೂಮಿ ಮಂಜೂರಾಗಿಲ್ಲ ಮತ್ತು ಒಂದು ಇಟ್ಟಿಗೆಯನ್ನೂ ಇಟ್ಟಿಲ್ಲ.

ಭೌತಿಕವಾಗಿ ಆಸ್ಪತ್ರೆಯೇ ಇಲ್ಲದಿದ್ದರೂ, ಸರ್ಕಾರಿ ಪೋರ್ಟಲ್‌ನಲ್ಲಿ ಈ ಆಸ್ಪತ್ರೆಯ ಹೆಸರಿನಲ್ಲಿ ಸಿಬ್ಬಂದಿಗಳ ನೇಮಕಾತಿ ಮತ್ತು ವರ್ಗಾವಣೆ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿವೆ. ಇತ್ತೀಚೆಗೆ ಜೂನ್ 2026ರಲ್ಲೂ ಒಬ್ಬ ಲ್ಯಾಬ್ ಟೆಕ್ನಿಷಿಯನ್‌ನನ್ನು ಇದೇ ಆಸ್ಪತ್ರೆಗೆ ನೇಮಕ ಮಾಡಲಾಗಿದೆ.

ಸಿಬ್ಬಂದಿ ಎಲ್ಲಿದ್ದಾರೆ?

ವರದಿಗಳ ಪ್ರಕಾರ, ಈ ಆಸ್ಪತ್ರೆಯ ಹೆಸರಿನಲ್ಲಿ ವೇತನ ಪಡೆಯುತ್ತಿರುವ 87 ಸಿಬ್ಬಂದಿಯನ್ನು ಇಂದೋರ್‌ನ ಪಿಸಿ ಸೇಠಿ ಆಸ್ಪತ್ರೆ, ಹುಕುಂಚಂದ್ ಆಸ್ಪತ್ರೆ ಮತ್ತು ಸಂಜೀವಿನಿ ಕ್ಲಿನಿಕ್‌ಗಳಂತಹ ಇತರ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ.

ಸರ್ಕಾರದ ಸಮರ್ಥನೆ ಮತ್ತು ವಿರೋಧ ಪಕ್ಷಗಳ ಆಕ್ರೋಶ

ಆಸ್ಪತ್ರೆ ನಿರ್ಮಾಣಕ್ಕೆ ನಗರ ಪ್ರದೇಶದಲ್ಲಿ ಸೂಕ್ತ ಸರ್ಕಾರಿ ಜಾಗ ಸಿಗದ ಕಾರಣ ಯೋಜನೆ ವಿಳಂಬವಾಗಿದೆ ಎಂದು ಮುಖ್ಯ ವೈದ್ಯಕೀಯ ಅಧಿಕಾರಿ ಸಮರ್ಥಿಸಿಕೊಂಡಿದ್ದಾರೆ. ಜಾಗದ ವಿವಾದ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಆದರೆ, ಅಸ್ತಿತ್ವದಲ್ಲೇ ಇಲ್ಲದ ಆಸ್ಪತ್ರೆಗೆ ಹುದ್ದೆ ಸೃಷ್ಟಿಸಿ, ವರ್ಗಾವಣೆ ದಂಧೆ ನಡೆಸುತ್ತಿರುವುದು ವ್ಯವಸ್ಥೆಯ ದೊಡ್ಡ ಹಗರಣ ಮತ್ತು ಆಡಳಿತಾತ್ಮಕ ವೈಫಲ್ಯ ಎಂದು ಕಾಂಗ್ರೆಸ್ ಮುಖಂಡರು ದೂರಿದ್ದು, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.

ಅಸ್ತಿತ್ವದಲ್ಲೇ ಇಲ್ಲದ ಆಸ್ಪತ್ರೆಗಾಗಿ ಹಲವು ವರ್ಷಗಳಿಂದ ನೇಮಕಾತಿ ಮತ್ತು ವರ್ಗಾವಣೆಗಳನ್ನು ಹೇಗೆ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಸಜ್ಜನ್ ಸಿಂಗ್ ವರ್ಮಾ ಪ್ರಶ್ನಿಸಿದ್ದಾರೆ.

“ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸುತ್ತೇವೆ. ಸರ್ಕಾರದಿಂದ ಸಮಗ್ರ ಉತ್ತರಗಳನ್ನು ಕೋರುತ್ತೇವೆ. ಅಲ್ಲದೆ, ಈ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು” ಎಂದು ವರ್ಮಾ ಆಗ್ರಹಿಸಿದ್ದಾರೆ.

ಉಪಮುಖ್ಯಮಂತ್ರಿ ವಿವರಣೆ

ಈ ಕುರಿತು ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಉಪಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ, ಯೋಜನೆಯ ಹಿನ್ನೆಲೆಯನ್ನು ವಿವರಿಸಿದ್ದಾರೆ.

“ಆರಂಭದಲ್ಲಿ ಈ ಪ್ರದೇಶದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯನಿರ್ವಹಿಸುತ್ತಿತ್ತು. ಬಳಿಕ ಅದನ್ನು 50 ಹಾಸಿಗೆಗಳ ನಾಗರಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಯಿತು. ನಂತರ 100 ಹಾಸಿಗೆಗಳ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಯಿತು. ಆದರೆ, ಸೂಕ್ತ ಸರ್ಕಾರಿ ಭೂಮಿ ಲಭ್ಯವಾಗದ ಕಾರಣ ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸಲು ಸಾಧ್ಯವಾಗಿಲ್ಲ. ಆಸ್ಪತ್ರೆ ಕಟ್ಟಡ ನಿರ್ಮಾಣವಾಗುವವರೆಗೆ ಮಂಜೂರಾದ ಸಿಬ್ಬಂದಿಯನ್ನು ಇತರ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಿಗೆ ನಿಯೋಜಿಸಲಾಗಿದೆ. ಭೂಮಿಯ ಹುಡುಕಾಟ ಪ್ರಕ್ರಿಯೆ ಇನ್ನೂ ಮುಂದುವರಿದಿದೆ” ಎಂದು ಅವರು ತಿಳಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...