Homeಮುಖಪುಟಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

- Advertisement -
- Advertisement -

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ ವಿವಾದಗಳನ್ನು ಸುಪ್ರೀಂ ಕೋರ್ಟ್ ವಿಶೇಷ ಲೋಕ ಅದಾಲತ್‌ಗೆ ಒಪ್ಪಿಸಿದೆ. “ಸಮಾಧಾನ್ ಸಮಾರೋಹ್” ಎಂಬ ಹೆಸರಿನ ಈ ವಿಶೇಷ ಲೋಕ ಅದಾಲತ್ ಆಗಸ್ಟ್ 21ರಿಂದ 23ರವರೆಗೆ ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆಯಲಿದೆ.

ಮೂರು ವಿವಾದಗಳನ್ನು ‘ಸುಪ್ರೀಂ ಕೋರ್ಟ್ ಆಕ್ಷನ್ ಫಾರ್ ಮೀಡಿಯೇಟೆಡ್ ಅಡ್ಜುಡಿಕೇಶನ್ ಆಂಡ್ ಡಿಸ್ಪ್ಯೂಟ್ಸ್ ಹಾರ್ಮೋನೈಸೇಶನ್ ಅಕ್ರಾಸ್ ನೇಷನ್-ಸಮಾಧಾನ್ ಸಮಾರೋಹ್ 2026’ ಅಡಿಯಲ್ಲಿ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ (ಆಡಳಿತಾತ್ಮಕ ವಿಭಾಗ) ಸಂಬಂಧಪಟ್ಟ ಪಕ್ಷಗಾರರಿಗೆ ಪತ್ರ ಬರೆದಿದೆ ಎಂದು livelaw.in ವರದಿ ಮಾಡಿದೆ.

ಈ “ಸಮಾಧಾನ್ ಸಮಾರೋಹ್”ವು ಮುಕ್ತ ಸಂವಾದ ಮತ್ತು ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಲು ನೆರವಾಗುವ ಒಂದು ವೇದಿಕೆಯಾಗಿದೆ. ಆದರೆ, ಯಾವುದೇ ಅಂತಿಮ ನಿರ್ಧಾರ ಅಥವಾ ರಾಜಿ ಸಂಧಾನವು ಸಂಪೂರ್ಣವಾಗಿ ಇದರಲ್ಲಿ ಭಾಗಿಯಾಗಿರುವ ಪಕ್ಷಗಾರರ ಪರಸ್ಪರ ಒಪ್ಪಿಗೆಯನ್ನು ಅವಲಂಬಿಸಿರುತ್ತದೆ.

ವರದಿಗಳ ಪ್ರಕಾರ, ಉಭಯ ಪಕ್ಷಗಳೂ (ಹಿಂದೂ-ಮುಸ್ಲಿಂ) ಮಧ್ಯಸ್ಥಿಕೆಯ ಮೂಲಕ ರಾಜಿ ಸಂಧಾನ ಮಾಡಿಕೊಳ್ಳುವುದನ್ನು ವಿರೋಧಿಸಿದ್ದು, ಈ ವಿಷಯವನ್ನು ಕಾನೂನು ಅರ್ಹತೆಯ ಆಧಾರದ ಮೇಲೆ ನ್ಯಾಯಾಲಯದ ಹೋರಾಟದ ಮೂಲಕವೇ ಬಗೆಹರಿಸಿಕೊಳ್ಳಲು ನಿರ್ಧರಿಸಿದ್ದಾರೆ.

ಜ್ಞಾನವಾಪಿ ವಿವಾದದ ಮುಸ್ಲಿಂ ಪಕ್ಷಗಾರರಾದ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪವನ್ನು ತಿರಸ್ಕರಿಸಿರುವುದಾಗಿ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

“ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಲಕ್ಷಾಂತರ ಪ್ರಕರಣಗಳ ಹೊರೆಯನ್ನು ಕಡಿಮೆ ಮಾಡಲು, ಗೌರವಾನ್ವಿತ ಸುಪ್ರೀಂ ಕೋರ್ಟ್ ಪರಸ್ಪರ ಒಪ್ಪಿಗೆಯ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲು ‘ಸಮಾಧಾನ್ ಸಮಾರೋಹ್‌’ ಅನ್ನು ಪ್ರಾರಂಭಿಸಿದೆ. ಇದರಲ್ಲಿ, ಜಿಲ್ಲಾ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಟ್ಟದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪರಸ್ಪರ ಒಪ್ಪಿಗೆಯ ಆಧಾರದ ಮೇಲೆ ವಿಶೇಷ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಬೇಕಾಗಿದೆ. ಜ್ಞಾನವಾಪಿ ಮಸೀದಿಯಂತಹ ಅತ್ಯಂತ ಸೂಕ್ಷ್ಮ ಪ್ರಕರಣಗಳನ್ನೂ ಇದರಲ್ಲಿ ಸೇರಿಸಲಾಗಿದೆ. ಜ್ಞಾನವಾಪಿ ಮಸೀದಿ ಪ್ರಕರಣವು ಸುದ್ದಿಯಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗಿರುವುದರಿಂದ ಸಾಮಾನ್ಯ ಮುಸ್ಲಿಮರಲ್ಲಿ ಚರ್ಚೆಯ ವಿಷಯವಾಗಿದೆ. ಈ ಆಹ್ವಾನವು ಕಡ್ಡಾಯವಾಗಿ ಪಾಲಿಸಬೇಕಾದದ್ದಲ್ಲ ಎಂಬುದನ್ನು ಇಲ್ಲಿ ಉಲ್ಲೇಖಿಸುವುದು ಮುಖ್ಯವಾಗಿದೆ, ಆದ್ದರಿಂದ ಅಂಜುಮನ್ ಇಂತೇಜಾಮಿಯಾ ಮಸೀದಿಯು ಈ ಸಮಾಧಾನ ಸಮಾರೋಹದಲ್ಲಿ ಯಾವುದೇ ಮಟ್ಟದಲ್ಲೂ ಭಾಗವಹಿಸದಿರಲು ನಿರ್ಧರಿಸಿದೆ” ಎಂದು ಜ್ಞಾನವಾಪಿ ಪಕ್ಷಗಾರರು ಹೇಳಿರುವುದಾಗಿ livelaw.in ವರದಿ ಮಾಡಿದೆ.

ವಿವಾದಗಳ ಬಗ್ಗೆ

ಸಂಭಾಲ್ ಮಸೀದಿ

ಅಲಹಾಬಾದ್ ಹೈಕೋರ್ಟ್‌ನ 2025 ಮೇ 19ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿಗೆ ಸಂಬಂಧಿಸಿದ ಸಿವಿಲ್ ದಾವೆಗೆ ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991ರ ಅಡಿಯಲ್ಲಿ ಯಾವುದೇ ತಡೆಯಿಲ್ಲ ಮತ್ತು ಈ ದಾವೆಯ ವಿಚಾರಣೆಯನ್ನು ಮುಂದುವರಿಸಬಹುದು ಎಂದು ಆದೇಶಿಸಿತ್ತು.

ಮಸೀದಿಯನ್ನು 1526ರಲ್ಲಿ ಕಲ್ಕಿ ದೇವರಿಗೆ ಸಮರ್ಪಿತವಾಗಿದ್ದ ದೇವಸ್ಥಾನವನ್ನು ಭಾಗಶಃ ಧ್ವಂಸಗೊಳಿಸಿ ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿ ಎಂಟು ಜನ ಹಿಂದೂ ವಾದಿಗಳು ಈ ದಾವೆಯನ್ನು ಹೂಡಿದ್ದಾರೆ. ಅವರು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ನಿವೇಶನಗಳು ಹಾಗೂ ಅವಶೇಷಗಳ ಕಾಯ್ದೆ, 1958ರ ಅಡಿಯಲ್ಲಿ ಸಂರಕ್ಷಿತ ಸ್ಮಾರಕವಾಗಿರುವ ಈ ಸ್ಥಳಕ್ಕೆ ಪ್ರವೇಶಾವಕಾಶವನ್ನು ಕೋರಿದ್ದಾರೆ.

ವಿಚಾರಣಾ ನ್ಯಾಯಾಲಯ ಮಸೀದಿಯ ಆವರಣದ ಸ್ಥಳೀಯ ತನಿಖೆ ನಡೆಸಲು ಅಡ್ವೊಕೇಟ್ ಕಮಿಷನರ್ ಒಬ್ಬರನ್ನು ನೇಮಿಸಿತ್ತು, ಇದು ನವೆಂಬರ್ 2024ರಲ್ಲಿ ಕೋಮು ಹಿಂಸಾಚಾರಕ್ಕೆ ಕಾರಣವಾಗಿತ್ತು. ಸಮೀಕ್ಷೆಯ ಆದೇಶವನ್ನು ವಿರೋಧಿಸಿ ಮಸೀದಿ ಸಮಿತಿಯು ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ಬಾಕಿ ಇರುವಾಗ, ಸುಪ್ರೀಂ ಕೋರ್ಟ್ ನಂತರ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಿತ್ತು. ಪ್ರಸ್ತುತ, ಮಸೀದಿಯ ವಿರುದ್ಧ ಹಿಂದೂ ವಾದಿಗಳು ಹೂಡಿರುವ ದಾವೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶ ಜಾರಿಯಲ್ಲಿದೆ.

ಜ್ಞಾನವಾಪಿ ಮಸೀದಿ

ಜ್ಞಾನವಾಪಿ ಪ್ರಕರಣದಲ್ಲಿ, ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯ್ದೆ 1991ರ ಅಡಿಯಲ್ಲಿ ಜ್ಞಾನವಾಪಿ ವಿವಾದಕ್ಕೆ ಸಂಬಂಧಿಸಿದ ಸಿವಿಲ್ ದಾವೆಗಳ ವಿಚಾರಣೆಗೆ ಯಾವುದೇ ತಡೆಯಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಆಗಸ್ಟ್ 15, 1947ರಂದು ಇದ್ದಂತೆ ಈ ಸಂಕೀರ್ಣದ ಧಾರ್ಮಿಕ ಸ್ವರೂಪವನ್ನು ವಾರಣಾಸಿ ಸಿವಿಲ್ ನ್ಯಾಯಾಲಯವು ನಿರ್ಧರಿಸಬೇಕಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವಿಚಾರಣಾ ನ್ಯಾಯಾಲಯ ಪ್ರಸ್ತುತ ಮಾಲೀಕತ್ವ, ಧಾರ್ಮಿಕ ಸ್ವರೂಪ ಮತ್ತು ಪೂಜಾ ಹಕ್ಕುಗಳಿಗೆ ಸಂಬಂಧಿಸಿದ ದಾವೆಯ ವಿಚಾರಣೆಯನ್ನು ನಡೆಸುತ್ತಿದೆ.

ಹೈಕೋರ್ಟ್ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಜ್ಞಾನವಾಪಿ ಸಂಕೀರ್ಣದ ಸಮೀಕ್ಷೆಯನ್ನು ಮುಂದುವರಿಸಲು ಅನುಮತಿ ನೀಡಿತ್ತು. ಮಸೀದಿ ನಿರ್ಮಾಣಕ್ಕೂ ಮುನ್ನ ಆ ಸ್ಥಳದಲ್ಲಿ ದೇವಸ್ಥಾನವಿತ್ತು ಎಂದು ಎಎಸ್‌ಐ ವರದಿ ತಿಳಿಸಿತ್ತು. ನಂತರ ವಿಚಾರಣಾ ನ್ಯಾಯಾಲಯವು ವ್ಯಾಸ್ ತೆಹಖಾನಾದಲ್ಲಿ (ಜ್ಞಾನವಾಪಿ ಮಸೀದಿಯ ದಕ್ಷಿಣದ ನೆಲಮಾಳಿಗೆ) ಪೂಜೆ ಸಲ್ಲಿಸಲು ಅನುಮತಿ ನೀಡಿತ್ತು.

ನಂತರ, ಸುಪ್ರೀಂ ಕೋರ್ಟ್ ಮಸೀದಿಯಲ್ಲಿ ನಮಾಝ್ ಮತ್ತು ನೆಲಮಾಳಿಗೆಯಲ್ಲಿ ಪೂಜೆ ನಡೆಸುವುದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿತ್ತು.

ಶ್ರೀ ಕೃಷ್ಣ ಜನ್ಮಭೂಮಿ – ಶಾಹಿ ಇದ್ಗಾ

ಕೃಷ್ಣ ಜನ್ಮಭೂಮಿ ಶಾಹಿ ಇದ್ಗಾ ಮಸೀದಿ ವಿವಾದದಲ್ಲಿ, ಭಗವಾನ್ ಕೃಷ್ಣನ ಜನ್ಮಸ್ಥಳವಾಗಿದ್ದ ದೇವಸ್ಥಾನವನ್ನು ಮೊಘಲ್ ಚಕ್ರವರ್ತಿ ಔರಂಗಜೇಬನು ಧ್ವಂಸಗೊಳಿಸಿ ಈ ಶಾಹಿ ಇದ್ಗಾ ಮಸೀದಿಯನ್ನು ನಿರ್ಮಿಸಿದ್ದಾನೆ ಎಂದು ಪ್ರತಿಪಾದಿಸಿರುವ ವಾದಿಗಳು, ಮಸೀದಿಯನ್ನು ಅಲ್ಲಿಂದ ತೆರವುಗೊಳಿಸುವಂತೆ ಕೋರಿದ್ದಾರೆ. ವಾದಿಗಳು ಆ ಸ್ಥಳದಲ್ಲಿ ಮಸೀದಿ ಮುಂದುವರಿಯಲು ಅನುಮತಿ ನೀಡಿದ್ದ 1968ರ ರಾಜಿ ತೀರ್ಪನ್ನು ಪ್ರಶ್ನಿಸಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಒಟ್ಟು 18 ದಾವೆಗಳಿದ್ದು, ಅಲಹಾಬಾದ್ ಹೈಕೋರ್ಟ್ ಅವುಗಳನ್ನು ತನ್ನ ವ್ಯಾಪ್ತಿಗೆ ವರ್ಗಾಯಿಸಿಕೊಂಡಿದೆ. ಇವುಗಳಲ್ಲಿ ಒಂದು ದಾವೆಯನ್ನು ದೇವರ ಹೆಸರಿನಲ್ಲಿ ‘ಭಗವಾನ್ ಶ್ರೀಕೃಷ್ಣ ವಿರಾಜಮಾನ್’ ಪರವಾಗಿ ಆಪ್ತ ಸ್ನೇಹಿತನ ಮೂಲಕ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...