ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ ಬೃಹತ್ ‘ಸಂಸತ್ ಚಲೋ‘ ಮೆರವಣಿಗೆ ಸೋಮವಾರ ಆರಂಭವಾಗಿದೆ. ಸಂಸತ್ತಿನ ಮಳೆಗಾಲದ ಅಧಿವೇಶನದ ಮೊದಲ ದಿನವೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಮತ್ತೊಂದೆಡೆ, ಜಂತರ್ ಮಂತರ್ನಲ್ಲಿ ಸಿಜೆಪಿ ಹಾಗೂ ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ನೇತೃತ್ವದಲ್ಲಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವು ಇಂದು 22ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾ ಮೈದಾನದಲ್ಲಿ ರಾಜಕೀಯ ನಾಯಕರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದಾರೆ.
ಸಂಸತ್ತಿನ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ಸಿಜೆಪಿ ಸಂಸತ್ ಮುತ್ತಿಗೆಗೆ ಕರೆ ನೀಡಿರುವ ಕಾರಣ, ದೆಹಲಿ ಪೊಲೀಸರು ರಾಜಧಾನಿಯಾದ್ಯಂತ ಅತ್ಯಂತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ.
ಇದೇ ವೇಳೆ ದೆಹಲಿ ಪೊಲೀಸರು ಯುಕವನ ಮೇಲೆ ಲಾಠಿ ಪ್ರಹಾರ ನಡೆಸುತ್ತಿದ್ದರೂ, ಆ ಯುವಕ ಕದಲದೆ ಹೊಡೆಯಿರಿ ಸರ್, ಹೊಡೆಯಿರಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಭದ್ರತೆ ಮತ್ತು ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಆದರೂ, ಸಾವಿರಾರು ಜನರು ಜಂತರ್ ಮಂತರ್ಗೆ ಧಾವಿಸಿದ್ದಾರೆ. ಸಂಸತ್ತಿನ ಬೀದಿಯ ಬಳಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಆದರೂ, ಬಗ್ಗದ ಪ್ರತಿಭಟನಾಕಾರರು ಬೃಹತ್ ಪ್ರತಿಭಟನೆ ಮುಂದುವರೆಸಿದ್ದಾರೆ.

ಪ್ರತಿಭಟನಾಕಾರರು ಸಂಸತ್ತಿನ ಕಡೆಗೆ ಮುನ್ನುಗ್ಗುವುದನ್ನು ತಡೆಯಲು ಭದ್ರತಾ ಕಾರಣ ನೀಡಿ ದೆಹಲಿ ಮೆಟ್ರೋ ರೈಲು ನಿಗಮ (DMRC) ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಹಠಾತ್ ಮುಚ್ಚಿದೆ.
- ರಾಜೀವ್ ಚೌಕ್
- ಜನಪಥ್
- ಪಟೇಲ್ ಚೌಕ್
- ಸೆಂಟ್ರಲ್ ಸೆಕ್ರೆಟರಿಯೇಟ್
- ಸೇವಾ ತೀರ್ಥ
ಈ ಐದು ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಮುಂದಿನ ಸೂಚನೆವರೆಗೆ ಸಾರ್ವಜನಿಕರ ಸಂಚಾರಕ್ಕೆ ಮುಚ್ಚಲಾಗಿದೆ ಎಂದು ಡಿಎಮ್ಆರ್ಸಿ ತನ್ನ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪ್ರಕಟಿಸಿದೆ.
ಸಂಸತ್ ಭವನದ ಕಡೆಗೆ ಮೆರವಣಿಗೆ ನಡೆಸಲು ಸಿಜೆಪಿಗೆ ಯಾವುದೇ ಅಧಿಕೃತ ಅನುಮತಿ ನೀಡಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹೊಸದಿಲ್ಲಿ ಜಿಲ್ಲೆಯಾದ್ಯಂತ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) ಸೆಕ್ಷನ್ 163 ರ ಅಡಿಯಲ್ಲಿ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ದೆಹಲಿ ಪೊಲೀಸ್ ಉಪ ಆಯುಕ್ತರ (DCP) ಮಾಹಿತಿ ಪ್ರಕಾರ, ಪೂರ್ವಾನುಮತಿ ಪಡೆದಿರುವ ಜಂತರ್ ಮಂತರ್ನ ನಿಗದಿತ ಸ್ಥಳವನ್ನು ಹೊರತುಪಡಿಸಿ, ಇತರೆಡೆ ಐದು ಅಥವಾ ಅದಕ್ಕಿಂತ ಹೆಚ್ಚು ಮಂದಿ ಸೇರುವುದು, ಮೆರವಣಿಗೆ ಮಾಡುವುದು ಹಾಗೂ ಧರಣಿ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 223 ರ ಅಡಿಯಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.
ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರೂ ಹೋರಾಟದ ಪಟ್ಟಿನಿಂದ ಹಿಂದೆ ಸರಿಯದ ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್, ಸರ್ಕಾರಕ್ಕೆ ಎರಡು ಪ್ರಮುಖ ಷರತ್ತುಗಳನ್ನು ವಿಧಿಸಿದ್ದಾರೆ.
ಹೊಣೆಗಾರಿಕೆ ಒಪ್ಪಿಕೊಳ್ಳಬೇಕು. ಇಲ್ಲವೇ, ಈ ಮುಂಗಾರು ಅಧಿವೇಶನದಲ್ಲೇ ಶಿಕ್ಷಣ ಕ್ಷೇತ್ರದ ದುಸ್ಥಿತಿ ಮತ್ತು ಹೊಣೆಗಾರಿಕೆ ಕುರಿತು ಪೂರ್ಣ ಪ್ರಮಾಣದ ಚರ್ಚೆ ನಡೆಸುವುದಾಗಿ ಸಂಸದರು ಭರವಸೆ ನೀಡಬೇಕು. ಈ ಎರಡರಲ್ಲಿ ಯಾವುದಾದರೂ ಒಂದನ್ನು ಈಡೇರಿಸಿದರೆ ಮಾತ್ರ ನಾವು ಉಪವಾಸ ಸತ್ಯಾಗ್ರಹವನ್ನು ಹಿಂಪಡೆಯುತ್ತೇವೆ. ಎಂದಿದ್ದಾರೆ.


