ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್ಸ್ಟೇಬಲ್ ಅಭಿಷೇಕ್ ಯಾದವ್ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ ಸಿಬ್ಬಂದಿ ಆತನಿಗೆ ತೀವ್ರವಾಗಿ ಥಳಿಸಿರುವ ಬಗ್ಗೆ ವರದಿಯಾಗಿದೆ.
ಬಾಲಕಿಯ ಮೃತದೇಹ ನದಿಯೊಂದರ ಬಳಿ ಪತ್ತೆಯಾಗಿದ್ದು, ಕಾನ್ಸ್ಟೇಬಲ್ ಅಭಿಷೇಕ್ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರ ಆಕ್ರೋಶಗೊಂಡಿದ್ದ ಆಸ್ಪತ್ರೆಯ ಸಿಬ್ಬಂದಿ, ಅಭಿಷೇಕ್ನನ್ನು ಗುರುವಾರ (ಜು.30) ವೈದ್ಯಕೀಯ ತಪಾಸಣೆಗೆ ಕರೆ ತಂದಾಗ ಹಲ್ಲೆ ನಡೆಸಿದ್ದಾರೆ.
ಇಂಡಿಯನ್ ಎಕ್ಸ್ಪ್ರೆಸ್ ವರದಿಯ ಪ್ರಕಾರ, 2018ರ ಬ್ಯಾಚ್ನ ಕಾನ್ಸ್ಟೇಬಲ್ ಅಭಿಷೇಕ್ ಯಾದವ್ನನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅದಕ್ಕೂ ಮುನ್ನ ಪೊಲೀಸರು ಆತನ ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ. ಈ ವೇಳೆ ಆಸ್ಪತ್ರೆಯ ವೈದ್ಯರು ಮತ್ತು ದಾದಿಯರು ಆತನ ಮೇಲೆ ಹಲ್ಲೆ ನಡೆಸಿದ್ದರಿಂದ, ವೈದ್ಯಕೀಯ ತಪಾಸಣೆಯನ್ನು ಪೂರ್ಣಗೊಳಿಸಲು ಪೊಲೀಸರು ಹೆಚ್ಚುವರಿ ಭದ್ರತಾ ಪಡೆಯನ್ನು ಕರೆಸಿದ್ದಾರೆ.
ಅಭಿಷೇಕ್ ಹತ್ಯೆ ಮಾಡಿದ್ದಾನೆ ಎನ್ನಲಾದ ಬಾಲಕಿ ಬುಧವಾರ (ಜು.29) ಮಧ್ಯಾಹ್ನ ಆಸ್ಪತ್ರೆಯಲ್ಲಿದ್ದ ತನ್ನ ಅನಾರೋಗ್ಯ ಪೀಡಿತ ತನ್ನ ಅಕ್ಕನಿಗೆ ಊಟ ಕೊಟ್ಟು ಮನೆಗೆ ಹಿಂದಿರುಗುತ್ತಿದ್ದಳು. ಈ ವೇಳೆ ಕಾನ್ಸ್ಟೇಬಲ್ ಅಭಿಷೇಕ್ ಆಕೆಯನ್ನು ಬೈಕ್ನಲ್ಲಿ ಅಪಹರಿಸಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳದ ಸಿಸಿಟಿವಿ ವಿಡಿಯೋಗಳನ್ನು ಪರಿಶೀಲಿಸಿದಾಗ ಪೊಲೀಸ್ ಸಮಸ್ತ್ರದಲ್ಲಿದ್ದ ವ್ಯಕ್ತಿಯೊಬ್ಬ ಬಾಲಕಿಯನ್ನು ಹಿಂಬಾಲಿಸುತ್ತಿರುವುದು ಪತ್ತೆಯಾಗಿದೆ. ಕೊನೆಗೆ ವಿಡಿಯೋದಲ್ಲಿ ಕಾಣಿಸಿಕೊಂಡ ಬೈಕ್ ಅಭಿಷೇಕ್ ಯಾದವ್ಗೆ ಸೇರಿದ್ದು ಎಂದು ಗೊತ್ತಾಗಿದೆ. ವಿಚಾರಣೆ ವೇಳೆ ಆತನೇ ಪೊಲೀಸರನ್ನು ಬಾಲಕಿಯ ಮೃತದೇಹವಿದ್ದ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ವರದಿಯಾಗಿದೆ.
ಗೋರಖ್ಪುರದ ಹಿರಿಯ ಪೊಲೀಸ್ ಅಧೀಕ್ಷಕರಾದ (ಎಸ್ಎಸ್ಪಿ) ಕೌಸ್ತುಭ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿ, ಆರೋಪಿ ಅಭಿಷೇಕ್ನನ್ನು ಸೇವೆಯಿಂದ ವಜಾಗೊಳಿಸುವ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
“ಇಂತಹ ಭೀಕರ ಕೃತ್ಯದಲ್ಲಿ ಭಾಗಿಯಾದ ನಂತರ ಆತ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಅರ್ಹನಲ್ಲ. ಆತ ಒಬ್ಬ ಹ್ಯಾಬಿಚುಯಲ್ ಅಪರಾಧಿಯಾಗಿದ್ದು, ಕಳೆದ ವರ್ಷ ಜನವರಿಯಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿದ್ದ. ಬಳಿಕ ಆತನನ್ನು ಅಮಾನತುಗೊಳಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಸೆಪ್ಟೆಂಬರ್ನಲ್ಲಿ ಆತನ ಅಮಾನತು ಆದೇಶವನ್ನು ರದ್ದುಗೊಳಿಸಲಾಗಿತ್ತು. ನಂತರ ಡಯಲ್ 112 ವಿಭಾಗದಲ್ಲಿ ಕರ್ತವ್ಯದಲ್ಲಿದ್ದ” ಎಂದು ಎಸ್ಎಸ್ಪಿ ವಿವರಿಸಿದ್ದಾರೆ.
ಗೋರಖ್ಪುರ ಎಸ್ಎಸ್ಪಿ ಅವರು ನೀಡಿರುವ ಮಾಹಿತಿ ಪ್ರಕಾರ, ಆರೋಪಿಯನ್ನು ಪತ್ತೆಹಚ್ಚಲು ತನಿಖಾಧಿಕಾರಿಗಳು 200ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಕಾನ್ಸ್ಟೇಬಲ್ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ (ಎನ್ಎಸ್ಎ) ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಎನ್ಡಿಟಿವಿ ವರದಿ ಮಾಡಿದೆ. ಹಿಂದಿನ ದೌರ್ಜನ್ಯದ ಆರೋಪದ ನಂತರ ಆತನನ್ನು ಜೈಲಿಗೆ ಅಟ್ಟಲಾಗಿತ್ತು ಮತ್ತು ಕರ್ತವ್ಯದಿಂದ ಅಮಾನತುಗೊಳಿಸಲಾಗಿತ್ತು. ಆದರೆ, ನಂತರ ಅಮಾನತು ಆದೇಶವನ್ನು ಹಿಂಪಡೆಯಲಾಗಿತ್ತು ಎಂದು ವರದಿ ತಿಳಿಸಿದೆ.
ಬುಧವಾರ ಬಾಲಕಿ ನಾಪತ್ತೆಯಾದ ಬಳಿಕ, ಆಕೆಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ಕೈಗೊಂಡು ಆರೋಪಿ ಅಭಿಷೇಕ್ ಯಾದವ್ನನ್ನು ಬಂಧಿಸಿದ್ದಾರೆ. ಆತನ ಮಾಹಿತಿ ಮೇರೆಗೆ ಬಾಲಕಿಯ ಶವ ಪತ್ತೆ ಹಚ್ಚಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.


