ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ (ಆ.4) ಪೊಲೀಸರಿಗೆ ನಿರ್ದೇಶನ ನೀಡಿದೆ.
ತಂಜಾವೂರಿನಲ್ಲಿ ಸೋಮವಾರ (ಆ.3) ನಡೆದ ಕಾವೇರಿ ಪ್ರತಿಭಟನೆಯಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಉದಯನಿಧಿ ವಿರುದ್ದ ಹಲವು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಉದಯನಿಧಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮೇಲಿನಂತೆ ಆದೇಶಿಸಿದೆ.
ಉದಯನಿಧಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಕೆ. ಇಳಂಥಿರೆಯನ್ ಅವರು, ವಿಚಾರಣೆಗೆ ಪೊಲೀಸರೊಂದಿಗೆ ಸಂಪೂರ್ಣವಾಗಿ ಸಹಕರಿಸುವಂತೆ ಅವರಿಗೆ ಸೂಚಿಸಿದ್ದಾರೆ.
ಈಗಾಗಲೇ ಉದಯನಿಧಿ ಅವರನ್ನು ಪೊಲೀಸರು ಬಂಧಿಸಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಿಂಧುವಾಗುವುದಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು. ಆದಾಗ್ಯೂ, ಪ್ರಕರಣದ ಸತ್ಯಾಸತ್ಯತೆ ಮತ್ತು ಸಂದರ್ಭಗಳನ್ನು ಪರಿಗಣಿಸಿ ನ್ಯಾಯಾಲಯವು ಜಾಮೀನು ನೀಡಬಹುದು ಎಂದು ತಿಳಿಸಿದ್ದಾರೆ.
ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು ಉದಯನಿಧಿ ಸ್ಟಾಲಿನ್ ಅವರನ್ನು ಈಗಾಗಲೇ ಬಂಧಿಸಲಾಗಿದ್ದು, ವಿಚಾರಣೆಗಾಗಿ ತಂಜಾವೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸರ್ಕಾರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಬಯಸುವುದಿಲ್ಲ. ವಿಚಾರಣೆಯ ನಂತರ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಇದೇ ವೇಳೆ, ವಿಚಾರಣೆಗೆ ಪೊಲೀಸರೊಂದಿಗೆ ಸಹಕರಿಸುವಂತೆ ಉದಯನಿಧಿ ಅವರಿಗೆ ನಿರ್ದೇಶನ ನೀಡುವಂತೆ ಅವರು ನ್ಯಾಯಾಲಯವನ್ನು ಕೋರಿದ್ದಾರೆ.
ಮಂಗಳವಾರ (ಆ.4) ಬೆಳಿಗ್ಗೆ ಸುಮಾರು 11 ಗಂಟೆಗೆ ತಂಜಾವೂರು ಮತ್ತು ನೀಲಂಕರೈ ಪೊಲೀಸರ ಜಂಟಿ ತಂಡವು ಉದಯನಿಧಿ ಅವರನ್ನು ನೀಲಂಕರೈನ ಈಸ್ಟ್ ಕೋಸ್ಟ್ ರೋಡ್ನಲ್ಲಿರುವ ಅವರ ನಿವಾಸದಿಂದ ವಿಚಾರಣೆಗಾಗಿ ಬಂಧಿಸಿದೆ. ಉದಯನಿಧಿ ಅವರ ಬಂಧನ ಡಿಎಂಕೆ ಕಾರ್ಯಕರ್ತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಉದಯನಿಧಿ ಅವರ ಬಂಧನ ವಿರೋಧಿಸಿ ಡಿಎಂಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ, ಇತ್ತ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕಾರ್ಯಕರ್ತರು ಪ್ರತಿ ಪ್ರತಿಭಟನೆ ನಡೆಸಿದ್ದರಿಂದ ತಂಜಾವೂರಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಪೊಲೀಸ್ ಮೂಲಗಳ ಪ್ರಕಾರ, ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡಿನಾದ್ಯಂತ ಉದಯನಿಧಿ ವಿರುದ್ಧ ಇದುವರೆಗೆ ಆರು ಎಫ್ಐಆರ್ಗಳು ದಾಖಲಾಗಿವೆ. ಟಿವಿಕೆ ಪಕ್ಷದ ಮಹಿಳಾ ಘಟಕದ ಸಂಘಟಕಿ ನೀಡಿದ ದೂರಿನ ಆಧಾರದ ಮೇಲೆ ತಂಜಾವೂರಿನಲ್ಲಿ ಪ್ರಕರಣ ದಾಖಲಾಗಿದ್ದು, ಅವರ ಹೇಳಿಕೆಗಳು ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಮತ್ತು ಅವಹೇಳನಕಾರಿಯಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


