ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಭಾರತೀಯ ಸೇನೆ ತೀವ್ರವಾಗಿ ಪರಿಗಣಿಸಿದೆ. ದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಗ್ನಿವೀರ ಯೋಧ ಶಿವಕುಮಾರ್ ತಳವಾರ ಅವರ ಕುಟುಂಬಕ್ಕೆ ತಕ್ಷಣವೇ ಸೂಕ್ತ ಪೊಲೀಸ್ ರಕ್ಷಣೆ ಒದಗಿಸುವಂತೆ ಕೋರಿ ಭಾರತೀಯ ಸೇನೆಯು ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವರು, ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (SP) ಅಧಿಕೃತ ಪತ್ರ ಬರೆದಿದೆ.
ಘಟನೆಯ ಹಿನ್ನೆಲೆ ಏನು?
ಆಗಸ್ಟ್ 1 ರಂದು ಶಾಖಾಪುರ ಗ್ರಾಮದಲ್ಲಿ ಮೃತರೊಬ್ಬರ ಅಂತ್ಯಕ್ರಿಯೆಗೆ ಗುಂಡಿ (ಕುಣಿ) ಅಗೆಯುವ ವಿಷಯಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿತ್ತು. ಈ ವೇಳೆ ಅಗ್ನಿವೀರ ಶಿವಕುಮಾರ್ ತಳವಾರ ಅವರ ತಾಯಿ, ಮಾವ ಹಾಗೂ ದಲಿತ ಸಮುದಾಯದ ಇತರ ಕೆಲವರ ಮೇಲೆ ಮೇಲ್ವರ್ಗದವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಗಡಿಯಲ್ಲಿ ಕರ್ತವ್ಯದಲ್ಲಿದ್ದ ಯೋಧ ಶಿವಕುಮಾರ್, ಘಟನೆಯಿಂದ ಮನನೊಂದು ಸೆಲ್ಫಿ ವಿಡಿಯೋ ಹಂಚಿಕೊಂಡಿದ್ದರು. “ನಾನು ದೇಶದ ಗಡಿಯಲ್ಲಿ ದೇಶ ಕಾಯುತ್ತಿದ್ದೇನೆ, ಆದರೆ ಹುಟ್ಟೂರಿನಲ್ಲಿ ನನ್ನ ಕುಟುಂಬಕ್ಕೆ ರಕ್ಷಣೆ ಇಲ್ಲದಂತಾಗಿದೆ” ಎಂದು ಭಾವುಕರಾಗಿ ತಮ್ಮ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
17 ಮಂದಿ ವಿರುದ್ಧ ಎಫ್ಐಆರ್ ದಾಖಲಾದರೂ ಬಂಧಿಸಿಲ್ಲ:
ಈ ಕೃತ್ಯಕ್ಕೆ ಸಂಬಂಧಿಸಿದಂತೆ ಸುರಪುರ ಪೊಲೀಸ್ ಠಾಣೆಯಲ್ಲಿ 17 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆದರೆ ಪ್ರಕರಣ ದಾಖಲಾಗಿ ಹಲವು ದಿನಗಳು ಕಳೆದರೂ ಒಬ್ಬೇ ಒಬ್ಬ ಆರೋಪಿಯನ್ನೂ ಪೊಲೀಸರು ಬಂಧಿಸಿಲ್ಲ ಎಂದು ದಲಿತ ಸಂಘಟನೆಗಳು ಕಟುವಾಗಿ ಟೀಕಿಸಿವೆ. ಪೊಲೀಸರ ವಿಳಂಬ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿರುವ ದಲಿತ ಮುಖಂಡರು ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.
ಕಟ್ಟುನಿಟ್ಟಿನ ತನಿಖೆಯ ಭರವಸೆ ನೀಡಿದ ಎಸ್ಪಿ:
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಪೃಥ್ವಿಕ್ ಶಂಕರ್, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಆದರೆ, ಘಟನೆಯ ಸಂದರ್ಭದಲ್ಲಿ ಸ್ಥಳದಲ್ಲೇ ಇರದ ಕೆಲವರ ಹೆಸರುಗಳನ್ನು ದೂರಿನಲ್ಲಿ ಸೇರಿಸಲಾಗಿದೆ ಎಂಬ ಮಾಹಿತಿ ನಮಗೆ ಲಭ್ಯವಾಗಿದೆ. ಈ ಎಲ್ಲಾ ಆಯಾಮಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ತನಿಖೆಯ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಆದರೆ ಸಾಕಷ್ಟು ಪ್ರತಿಭಟನೆಗಳನ್ನು ನಡೆಸಿದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಇದರಿಂದ ನಮಗೆ ಕಾನೂನಿನ ಮೇಲಿದ್ದ ಭರವಸೆಯೇ ಕಡಿಮೆಯಾಗುತ್ತಿದೆ. ಸರ್ಕಾರ ಕೂಡಲೇ ಆರೋಪಿಗಳನ್ನು ಬಂಧಿಸಿ ನಮಗೆ ನ್ಯಾಯ ಒದಗಿಸಬೇಕು ಎಂದು ದಲಿತ ಮುಖಂಡ ಮಲ್ಲಿಕಾರ್ಜುನ ಕ್ರಾಂತಿ ಒತ್ತಾಯಿಸಿದ್ದಾರೆ.


