ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು ಬಳಿಯ ತೊಮಿಯರ್ ಪಾಳ್ಯ ಗ್ರಾಮದ ಅಂತೋಣಿಸಾಮಿ, ಪೀಟರ್ ಮತ್ತು ಕುಮಾರ್ ಎಂಬ ಮೂವರು ಕೊನೆಯುಸಿರೆಳೆದಿದ್ದಾರೆ. ಈ ಪೈಕಿ ಮೃತ ಅಂತೋಣಿಸಾಮಿ ಅವರ ಪತ್ನಿ ಲೂರ್ದಾಮೇರಿ ಅವರು ನೀಡಿದ ದೂರಿನ ಆಧಾರದಲ್ಲಿ ಹನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ದಕ್ಷಿಣ ವಲಯ ಐಜಿ ಬೋರಲಿಂಗೇಗೌಡ, ಚಾಮರಾಜನಗರ ಎಸ್ಪಿ ಮುತ್ತುರಾಜು ಸಮ್ಮುಖದಲ್ಲಿ ಅರಣ್ಯ ಅಧಿಕಾರಿಗಳು ಹನೂರು ವಿಭಾಗ ಎಂದು ಆರೋಪಿಗಳ ಹೆಸರನ್ನು ಉಲ್ಲೇಖಿಸಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ನಿರ್ದಿಷ್ಟ ಹೆಸರಿನ ಬದಲಾಗಿದೆ ಅರಣ್ಯ ಅಧಿಕಾರಿಗಳು ಎಂದು ಎಫ್ಐಆರ್ನಲ್ಲಿ ನಮೂದಿಸಲಾಗಿದೆ. ಬಿಎನ್ಎಸ್ ಕಾಯ್ದೆಯ ಸೆಕ್ಷನ್ 103(1) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಗಳು ವಿವರಿಸಿವೆ.
ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಮೂವರು ಬಲಿಯಾದ ಘಟನೆ ಶನಿವಾರ (ಆ.15) ಮುಂಜಾನೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮ ಅರಣ್ಯ ವ್ಯಾಪ್ತಿಯ ಶಾಗ್ಯ ಗ್ರಾಮದ ಸಮೀಪದ ಮರಿಯ ಮಂಗಲ ಬೀಟ್ನಲ್ಲಿ ನಡೆದಿದೆ.
ಅರಣ್ಯ ಸಿಬ್ಬಂದಿಯ ಗಂಡೇಟಿಗೆ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಮೃತರು ಅರಣ್ಯದಲ್ಲಿ ಬೇಟೆಗೆ ಬಂದಿದ್ದರು. ಈ ಬಗ್ಗೆ ಮಾಹಿತಿ ಗೊತ್ತಾಗಿ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಹೋದಾಗ ಮೃತರು ನಾಡ ಬಂದೂಕಿನಿಂದ ಅರಣ್ಯ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸಿಬ್ಬಂದಿ ಕೂಡ ಆತ್ಮ ರಕ್ಷಣೆಗೆ ಗುಂಡು ಹಾರಿಸಿದ್ದು, ಇದರಿಂದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ದರೂ, ಅಷ್ಟರಲ್ಲೇ ಸಾವನ್ನಪ್ಪಿದ್ದರು ಎಂದು ಅಧಿಕಾರಿಗಳು ಹೇಳಿಕೊಂಡಿದ್ದಾರೆ.
ಆದರೆ, ಮೃತರ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರು, ಅಧಿಕಾರಿಗಳ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ. ಇದು ನಕಲಿ ಎನ್ಕೌಂಟರ್ ಎಂದು ಆರೋಪಿಸಿದ್ದಾರೆ. ಮೃತರು ಕಾಡಿಗೆ ಹಸು ಹುಡುಕಲು ಹೋಗಿದ್ದರು. ಈ ವೇಳೆ ಅರಣ್ಯ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆತ್ಮ ರಕ್ಷಣೆಗೆ ಗುಂಡು ಹಾರಿಸುವುದಾದರೆ ಕಾಲಿಗೆ ಹಾರಿಸಬೇಕಿತ್ತು. ಎದೆ, ತಲೆ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗುಂಡಿಕ್ಕಿದ್ದಾರೆ ಎಂದು ತಿಳಿಸಿದ್ದಾರೆ.


