ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಲಿತ ಮಹಿಳೆ ನೇಮಕಾತಿಯ ನಂತರ, ಕೆಲವು ಗ್ರಾಮಸ್ಥರು ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು, ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಗಾಯತ್ರಿ ರಾಮಚಂದ್ರ ಅವರು, ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿಯೊಂದಿಗೆ ಸೋಮವಾರ ಮೂಗಡ್ತಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಬಗೆಹರಿಸಲು ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು.
ಸರ್ಕಾರಿ ನಿಯಮಗಳು ಮತ್ತು ಕಾನೂನಾತ್ಮಕ ಅರ್ಹತಾ ಮಾನದಂಡಗಳಿಗೆ ಅನುಗುಣವಾಗಿಯೇ ಈ ನೇಮಕಾತಿಯನ್ನು ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಅಲ್ಲದೆ, ಅಂಗನವಾಡಿಯಲ್ಲಿ ನೀಡಲಾಗುವ ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯಗಳಿಂದ ಮಕ್ಕಳನ್ನು ವಂಚಿತರನ್ನಾಗಿ ಮಾಡಬಾರದು ಎಂದು ಅವರು ಹೇಳಿದರು.
ಗ್ರಾಮದಲ್ಲಿ ಯಾವುದೇ ರೀತಿಯ ಜಾತಿ ಆಧಾರಿತ ತಾರತಮ್ಯ ಅಥವಾ ವಿರೋಧವಿಲ್ಲ, ಎಲ್ಲ ಸಮುದಾಯದ ಜನರು ಸಾಮರಸ್ಯದಿಂದ ಒಟ್ಟಾಗಿ ಬಾಳುತ್ತಿದ್ದಾರೆ ಎಂದು ಮೂಗಡ್ತಿಯ ಬಲಮುರಿ ಗಣಪತಿ ದೇವಸ್ಥಾನದ ಅಧ್ಯಕ್ಷರೂ ಆಗಿರುವ ಸ್ಥಳೀಯ ಗ್ರಾಮಸ್ಥ ಗುರುರಾಜ್ ಅವರು ಹೇಳಿದರು. ಈ ಸಮಸ್ಯೆಯು ತಪ್ಪು ತಿಳುವಳಿಕೆ ಅಥವಾ ಸಂವಹನದ ಕೊರತೆಯಿಂದ ಉಂಟಾಗಿದೆ ಎಂದು ಅಭಿಪ್ರಾಯಪಟ್ಟ ಅವರು, ಮಕ್ಕಳ ಕಲ್ಯಾಣಕ್ಕಾಗಿ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಹೊಸನಗರ ಸಿಡಿಪಿಒ ಗಾಯಿತ್ರಿ ಮಾತನಾಡಿ, “ಅನಾಮಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಮೂಗುಡ್ತಿ ಅಂಗನವಾಗಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಇಲ್ಲಿ ಯಾವುದೇ ಸಮಸ್ಯೆ ಇಲ್ಲ. ಗ್ರಾಮದ ಎಲ್ಲರೂ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ” ಎಂದರು.


