ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಎನ್ನಲಾದ ಆರೋಪಿಗಳನ್ನು ಬಂಧಿಸಲು ಮತ್ತು ಶಾಲೆಯ ಮೂಲಸೌಕರ್ಯ ಸುಧಾರಿಸಲು ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 48 ಗಂಟೆಗಳ ಗಡುವನ್ನು ನೀಡಿದ್ದಾರೆ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜಂತರ್ ಮಂತರ್ ರೀತಿಯ ಹೋರಾಟ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ.
ಜೈಪುರ ಜಿಲ್ಲೆಯ ಬಾಗ್ರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನ್ವರಪುರದಲ್ಲಿರುವ ರಾಂಪುರ ಸರ್ಕಾರಿ ಶಾಲೆಯು ಕಳೆದ ಹಲವು ವರ್ಷಗಳಿಂದ ಸೂಕ್ತ ಕಟ್ಟಡವಿಲ್ಲದೆ, ದನದ ಕೊಟ್ಟಿಗೆಯಲ್ಲಿ ನಡೆಯುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಶಾಲೆಯ ವಾಸ್ತವ ಸ್ಥಿತಿಯನ್ನು ಸಾರ್ವಜನಿಕರಿಗೆ ತೋರಿಸಲು ಶುಕ್ರವಾರ (ಆ.21) ಸಿಜೆಪಿ ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ವಿಡಿಯೋ ಚಿತ್ರೀಕರಣ ನಡೆಸುತ್ತಿತ್ತು.
ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಎನ್ನಲಾದ ಗುಂಪೊಂದು, ಸಿಜೆಪಿ ಸ್ವಯಂಸೇವಕರ ಮೇಲೆ ಏಕಾಏಕಿ ಮಾರಣಾಂತಿಕ ದಾಳಿ ನಡೆಸಿದೆ. ಮನಸೋಇಚ್ಛೆ ಥಳಿಸಿ, ಅವರ ವಾಹನಗಳ ಗಾಜುಗಳನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅಭಿಜೀತ್ ದೀಪ್ಕೆ, ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ನೇತೃತ್ವದ ಸರ್ಕಾರ ಮತ್ತು ರಾಜಸ್ಥಾನ ಪೊಲೀಸರ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ.
ಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಆಸ್ತಿ ಪಾಸ್ತಿ ನಷ್ಟ ಉಂಟುಮಾಡಿದ ಎಲ್ಲ ಆರೋಪಿಗಳನ್ನು 48 ಗಂಟೆಗಳ ಒಳಗೆ ಗುರುತಿಸಿ ಬಂಧಿಸಬೇಕು. ದನದ ಕೊಟ್ಟಿಗೆಯಲ್ಲಿ ನಡೆಯುತ್ತಿರುವ ರಾಂಪುರ ಸರ್ಕಾರಿ ಶಾಲೆಗೆ ತಕ್ಷಣವೇ ಪರ್ಯಾಯ ಸುಸಜ್ಜಿತ ಕಟ್ಟಡದ ವ್ಯವಸ್ಥೆ ಕಲ್ಪಿಸಬೇಕು ಮತ್ತು ಶಾಲಾ ದುರಸ್ತಿ ಕಾರ್ಯವನ್ನು ಆರಂಭಿಸಬೇಕು ಮತ್ತು ಸರ್ಕಾರಿ ಶಾಲೆಗಳ ಅವ್ಯವಸ್ಥೆಗಳು ಬಯಲಾಗದಂತೆ ತಡೆಯಲು, ಶಾಲೆಯ ಆವರಣದೊಳಗೆ ಸಾರ್ವಜನಿಕರು ಮತ್ತು ಮಾಧ್ಯಮಗಳು ವಿಡಿಯೋ ಮಾಡುವುದನ್ನು ನಿಷೇಧಿಸಿ ಇತ್ತೀಚೆಗೆ ಸರ್ಕಾರ ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ದೀಪ್ಕೆ ಒತ್ತಾಯಿಸಿದ್ದಾರೆ.
ರಾಜಸ್ಥಾನ ಸರ್ಕಾರವು ಈ 48 ಗಂಟೆಗಳ ಗಡುವಿನೊಳಗೆ ಸೂಕ್ತ ಕಾನೂನು ಕ್ರಮ ಜರುಗಿಸದಿದ್ದರೆ, ತಾವು ತಕ್ಷಣವೇ ಜೈಪುರಕ್ಕೆ ಭೇಟಿ ನೀಡುವುದಾಗಿ ದೀಪ್ಕೆ ಘೋಷಿಸಿದ್ದಾರೆ. ಅಲ್ಲದೆ, ದೆಹಲಿಯ ಜಂತರ್ ಮಂತರ್ ಮಾದರಿಯಲ್ಲೇ ಜೈಪುರದಲ್ಲಿ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಬೃಹತ್ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.


