ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಂಡಿಯಾ ಟುಡೇ ರೌಂಡ್ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಎಲ್ಲಾ ಆರು ಚರಣಗಳನ್ನು ಹಾಡಿರುವುದು ತನ್ನ ಗಮನಕ್ಕೆ ಬಂದಿಲ್ಲ ಎಂದರು. ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ (CWC) 1937ರ ನಿರ್ಣಯದಂತೆ ಪಕ್ಷದ ಸಿದ್ಧಾಂತಕ್ಕೆ ಬದ್ಧವಾಗಿರುವುದಾಗಿ ತಿಳಿಸಿದ ಅವರು, ಭವಿಷ್ಯದಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲೂ ಕೇವಲ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವುದನ್ನು ಮುಂದುವರಿಸುತ್ತೇವೆ ಎಂದು ಪುನರುಚ್ಚರಿಸಿದರು.
ತುಷ್ಟೀಕರಣ ರಾಜಕಾರಣದ ಕುರಿತು ಮಾತನಾಡಿದ ಅವರು, ನಮ್ಮ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ. ಕಾಂಗ್ರೆಸ್ ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದರೆ, ಬಿಜೆಪಿ ನಿಜವಾದ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಗಾಳಿ, ನೀರು, ಬೆಳಕಿಗೆ ಯಾವುದೇ ಧರ್ಮವಿಲ್ಲ. ಎಲ್ಲರೂ ಒಂದೇ ಗಾಳಿಯನ್ನು ಸೇವಿಸಬೇಕು, ಒಂದೇ ನೀರನ್ನು ಕುಡಿಯಬೇಕು. ಹೀಗಿರುವಾಗ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿಯ ಟೀಕೆಗಳಿಗೆ ತಿರುಗೇಟು ನೀಡಿದರು.
ಹಿನ್ನೆಲೆ ಏನು?
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (CWC) 1937ರ ತನ್ನ ಐತಿಹಾಸಿಕ ನಿರ್ಣಯವನ್ನು ಪುನರುಚ್ಚರಿಸಿದ್ದು, ಸಾರ್ವಜನಿಕ ಮತ್ತು ರಾಷ್ಟ್ರೀಯ ಸಮಾರಂಭಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ನುಡಿಗಳನ್ನು ಮಾತ್ರ ಹಾಡಬೇಕು ಎಂದು ತಿಳಿಸಿದೆ.
ವಂದೇ ಮಾತರಂ ಗೀತೆಯ ನಂತರದ ನುಡಿಗಳಲ್ಲಿ ಹಿಂದೂ ದೇವತೆಗಳ ಉಲ್ಲೇಖವಿರುವುದರಿಂದ, ಅದು ಇತರ ಸಮುದಾಯಗಳ ಭಾವನೆಗಳಿಗೆ ಧಕ್ಕೆ ತರಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಆದರೆ, ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಇದು ರಾಷ್ಟ್ರಗೀತೆಗೆ ಮಾಡುತ್ತಿರುವ ಅಪಮಾನ ಹಾಗೂ ಓಲೈಕೆ ರಾಜಕಾರಣ ಎಂದು ಆರೋಪಿಸಿದೆ.


