ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ಪೀಠವು, ಎಸ್ಐಆರ್ ಅಭಿಯಾನಕ್ಕೆ ಸಂಬಂಧಿಸಿದ ಇತರ ಪ್ರಕರಣಗಳೂ ಸಹ ಮುಂದಿನ ವಾರ ಪಟ್ಟಿಯಲ್ಲಿರುವುದರಿಂದ ಈ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ತಿಳಿಸಿದೆ.
ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ಪ್ರಶಾಂತ್ ಭೂಷಣ್, ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗಿರುವ 47 ಲಕ್ಷ ಜನರಲ್ಲಿ, ಚುನಾವಣಾ ಆಯೋಗವು 33 ಲಕ್ಷ ಜನರಿಗೆ ನೋಟಿಸ್ ಜಾರಿ ಮಾಡಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.
“ಅವರು ಏನು ಮಾಡಿದ್ದಾರೆಂದರೆ, ಯಾರಿಗೆ ನೋಟಿಸ್ ನೀಡಲಾಗಿದೆ ಅಥವಾ ಯಾವ ಆಧಾರದ ಮೇಲೆ ಅವರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ವಿವರಗಳನ್ನು ಬಹಿರಂಗಪಡಿಸಿಲ್ಲ. ಯಾವ ವ್ಯಕ್ತಿಗಳಿಗೆ ನೋಟಿಸ್ ನೀಡಲಾಗಿದೆ ಎಂಬುದನ್ನು ತಿಳಿಸಿಲ್ಲ. ತಾರ್ಕಿಕ ವ್ಯತ್ಯಾಸಗಳು ಯಾವುವು ಮತ್ತು ಅವುಗಳನ್ನು ಹೇಗೆ ತಪ್ಪಾಗಿ ಮ್ಯಾಪ್ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ” ಎಂದು ಭೂಷಣ್ ವಾದಿಸಿದರು.
ಆಗಸ್ಟ್ 31 ರಂದು ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಒಟ್ಟು 1.45 ಕೋಟಿ ಮತದಾರರ ಪಟ್ಟಿಯಿಂದ 47 ಲಕ್ಷ ಮತದಾರರನ್ನು ಕೈಬಿಡಲಾಗಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್ಐಆರ್) ಭಾಗವಾಗಿ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಿಂದ ದೆಹಲಿಯ ಪ್ರತಿ ಮೂವರು ಮತದಾರರಲ್ಲಿ ಒಬ್ಬರನ್ನು ತೆಗೆದುಹಾಕಲಾಗಿದೆ.
ಎಸ್ಐಆರ್ ಪ್ರಕ್ರಿಯೆಯ ಸಮಯದಲ್ಲಿ 43.32 ಲಕ್ಷಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಅಥವಾ ಗೈರುಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. 2.82 ಲಕ್ಷಕ್ಕೂ ಹೆಚ್ಚು ಮತದಾರರು ಮೃತಪಟ್ಟಿದ್ದಾರೆ ಎಂದು ಪತ್ತೆಯಾಗಿದೆ. 1.41 ಲಕ್ಷಕ್ಕೂ ಅಧಿಕ ಮತದಾರರು ಅನೇಕ ಕಡೆಗಳಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿತ್ತು.


