ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ ಈಗ ರಾಜಕೀಯ ರಂಪಾಟಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿದ್ಯಾರ್ಥಿ ಕೇಂದ್ರಿತ ಈ ಸಂವಾದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರ ಜೊತೆ ವೇದಿಕೆಯಲ್ಲಿದ್ದ ಜನಪ್ರಿಯ ಸ್ಟ್ಯಾಂಡಪ್ ಕಾಮೆಡಿಯನ್ ಪುಲ್ಕಿತ್ ಮಣಿ ಅವರು ಪ್ರಧಾನಿ ಮೋದಿ ಅವರ ಶೈಲಿಯನ್ನು ಅಣಕಿಸಿ ಮಾತನಾಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಸಚಿವ ಕಿರಣ್ ರಿಜಿಜು ಮತ್ತು ಪ್ರಹ್ಲಾದ್ ಜೋಶಿ ಆಕ್ರೋಶ:
ಈ ಕುರಿತು ಎಕ್ಸ್ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು, “ಕಾಂಗ್ರೆಸ್ ಪಕ್ಷವು ಹಾಸ್ಯಗಾರರು ಹಾಗೂ ವಿದೂಷಕರ ಪಕ್ಷವಾಗಿ ಬದಲಾಗಿದೆ” ಎಂದು ಕಟುವಾಗಿ ಟೀಕಿಸಿದ್ದಾರೆ.
ಇನ್ನೊಂದೆಡೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿ, “ರಾಹುಲ್ ಗಾಂಧಿ ಅವರು ಅಕ್ಷರಶಃ ಬೌದ್ಧಿಕವಾಗಿ ದಿವಾಳಿಯಾಗಿದ್ದಾರೆ” ಎಂದು ದೂರಿದ್ದಾರೆ. “ಪ್ರಧಾನಿ ಮೋದಿ ಅವರ ದಿವಂಗತ ತಾಯಿಯವರನ್ನು ಅಣಕಿಸಲು ವಿದ್ಯಾರ್ಥಿಗಳೊಂದಿಗಿನ ಸಂವಾದವನ್ನು ವೇದಿಕೆಯನ್ನಾಗಿ ಬಳಸಿಕೊಂಡಿರುವುದು ಆಘಾತಕಾರಿ. ಇದು ಕಾಂಗ್ರೆಸ್ ನಾಯಕರಲ್ಲಿ ಮೂಲಭೂತ ಮಾನವೀಯ ಸಂವೇದನೆ ಹಾಗೂ ರಾಜಕೀಯ ಸಂಸ್ಕೃತಿಯ ಕೊರತೆ ಎದ್ದು ಕಾಣುತ್ತಿರುವುದಕ್ಕೆ ಸಾಕ್ಷಿ” ಎಂದು ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳ ಪ್ರಮುಖ ಸಮಸ್ಯೆಗಳು ಹಾಗೂ ಶಿಕ್ಷಣ ವ್ಯವಸ್ಥೆಯ ಕುರಿತು ಚರ್ಚಿಸಲು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕಾಮೆಡಿಯನ್ ಪ್ರದರ್ಶನ ಮತ್ತು ಅದಕ್ಕೆ ಬಿಜೆಪಿ ವ್ಯಕ್ತಪಡಿಸಿರುವ ಆಕ್ರೋಶ ಈಗ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.


