ಸಿಎಎ ಹೋರಾಟದ ಸಂದರ್ಭದಲ್ಲಿ ಡಿಸೆಂಬರ್ನಲ್ಲಿ ರಾಜ್ಯದಲ್ಲಿ ನಡೆದ ದೊಡ್ಡ ಪ್ರಮಾಣದ ಹಿಂಸಾಚಾರದ ಕುರಿತು ಪೊಲೀಸ್ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಉತ್ತರ ಪ್ರದೇಶ ಸರ್ಕಾರವನ್ನು ಅಲಹಾಬಾದ್ ಹೈಕೋರ್ಟ್ ಕೇಳಿದೆ.
ಕಳೆದ ತಿಂಗಳು ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆ ಮತ್ತು ರಾಜ್ಯದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ಬಗ್ಗೆ ದಾಖಲಾದ ಏಳು ಅರ್ಜಿಗಳನ್ನು ಉತ್ತರ ಪ್ರದೇಶ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು.
ಕಳೆದ ತಿಂಗಳು ಉತ್ತರ ಪ್ರದೇಶದ ಅನೇಕ ಜಿಲ್ಲೆಗಳಲ್ಲಿ ಸಿಎಎ, ಎನ್ಆರ್ಸಿ ವಿರೋಧಿ ಹೋರಾಟದ ಸಂದರ್ಭದಲ್ಲಿ ಹಿಂಸಾತ್ಮಕ ಘಟನೆಗಳಲ್ಲಿ 20 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಈ ಸಾವುಗಳಲ್ಲಿ ಹೆಚ್ಚಿನವು ಗುಂಡೇಟಿನಿಂದ ಸಂಭವಿಸಿವೆ. ಆದರೆ ಪೊಲೀಸರು ಕೇವಲ ಒಂದು ಬಾರಿ ಮಾತ್ರ ಗೋಲಿಬಾರ್ ಮಾಡಿದ್ದಾಗಿ ಹೇಳಿಕೆ ನೀಡಿದ್ದಾರೆ.
“ಪ್ರತಿಭಟನಾಕಾರರ ಮೇಲಿನ ದೌರ್ಜನ್ಯದ ಬಗ್ಗೆ ಪೊಲೀಸರು ಅಥವಾ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಷ್ಟು ದೂರುಗಳು ದಾಖಲಾಗಿವೆ ಎಂದು ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ ಎಂದು ಅರ್ಜಿದಾರರ ಪರ ವಕೀಲರಾದ ಮೆಹಮೂದ್ ಪ್ರಚಾರವರು ತಿಳಿಸಿದ್ದಾರೆ.
ಅಲ್ಲದೇ ನ್ಯಾಯಾಲಯ, ಪ್ರತಿಭಟನೆ ವೇಳೆ ಮೃತಪಟ್ಟವರ ಶವಪರೀಕ್ಷೆ ವರದಿಗಳನ್ನು ಅವರ ಸಂಬಂಧಿಕರಿಗೆ ನೀಡಲಾಗಿದೆಯೇ ಎಂದು ಸರ್ಕಾರವನ್ನು ಕೇಳಿದೆ. ಫೆಬ್ರವರಿ 17 ರಂದು ಪ್ರಕರಣವನ್ನು ಮತ್ತೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರತಿಭಟನಾಕಾರರ ಮೇಲೆ “ದಮನ” ಮಾಡುವ ಬಗ್ಗೆ ಎಚ್ಚರಿಕೆ ನೀಡಿದ್ದರು ಮತ್ತು ಪ್ರತಿಭಟನೆಯ ಸಮಯದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಲು ಕಾರಣರಾದವರು ಅದನ್ನು ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಆದೇಶಿಸಿತ್ತು.