Homeಅಂಕಣಗಳುಸಂಪಾದಕೀಯ | ಕಂಡದ್ದು ಕಂಡಹಾಗೆಸ್ವಾಮಿ ಅಗ್ನಿವೇಶ್ ಮೇಲಿನ ದಾಳಿಯಿಂದ ಭಾರತೀಯರು ಎಚ್ಚೆತ್ತುಕೊಳ್ಳಲಿ...

ಸ್ವಾಮಿ ಅಗ್ನಿವೇಶ್ ಮೇಲಿನ ದಾಳಿಯಿಂದ ಭಾರತೀಯರು ಎಚ್ಚೆತ್ತುಕೊಳ್ಳಲಿ…

- Advertisement -
- Advertisement -

ಯಾವುದೋ ನೆಪದಲ್ಲಿ ಅಸಹಾಯಕ ಒಬ್ಬಂಟಿಗಳ ಮೇಲೆ ಗುಂಪುಗೂಡಿ ಹಲ್ಲೆ ಮಾಡುವ ಘಟನೆಗಳು ನಿತ್ಯದ ಸುದ್ದಿಯಾಗಿಬಿಟ್ಟಿವೆ. ದನದ ಹೆಸರಿನಲ್ಲಿ ಮುಸ್ಲಿಮರು ಮತ್ತು ದಲಿತರನ್ನು, ಮಕ್ಕಳ ಕಳ್ಳರ ಹೆಸರಿನಲ್ಲಿ ಯಾವುದೋ ದಾರಿಹೋಕರನ್ನು ಬಡಿದು ಕೊಲ್ಲುವ ಸುದ್ದಿಗಳು ಮಾಮೂಲಿಯಾಗಿಬಿಟ್ಟಿದೆ. ಬಿಜೆಪಿ ಮಂತ್ರಿಗಳು ಶಾಸಕರೇ ಇಂಥ ಗುಂಪು ಹತ್ಯಾಕೋರರಿಗೆ ಬಹಿರಂಗವಾಗಿ ಹಾರಹಾಕಿ ಸನ್ಮಾನ ಮಾಡುತ್ತಿದ್ದು, ಈ ಗುಂಪುಹತ್ಯೆಗಳಿಗೂ ಬಿಜೆಪಿ ಸರ್ಕಾರಗಳಿಗೂ ಇರುವ ಸಂಬಂಧವನ್ನು ಬಿಚ್ಚಿಡುತ್ತಿವೆ.
ಆದರೆ ಹಿಂದೂ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವ ಇದೇ ಬಿಜೆಪಿಗೆ ಸೇರಿದ ಪುಂಡರ ಗುಂಪುಗಳು ಕಾವಿಧಾರಿ ಧಾರ್ಮಿಕ ಸಂತ ಸ್ವಾಮಿ ಅಗ್ನಿವೇಶ್ ಅವರ ಮೇಲೆ ಹಲ್ಲೆ ಮಾಡಿದ್ದರ ಹಿನ್ನೆಲೆಯಾದರೂ ಏನು? ಅವರ ಮೇಲೆ ಕಳೆದ ಒಂದು ತಿಂಗಳಲ್ಲಿ ಎರಡು ಬಾರಿ ಹಲ್ಲೆ ಮಾಡಲಾಗಿದೆ, ಜುಲೈ 17ರಂದು ಜಾರ್ಖಂಡ್‍ನಲ್ಲಿ ಹಾಗೂ ಆಗಸ್ಟ್ 17ರಂದು ನವದೆಹಲಿಯಲ್ಲಿ, ಅದೂ ವಾಜಪೇಯಿಯವರ ಅಂತಿಮ ದರ್ಶನಕ್ಕೆಂದು ತೆರಳಿದ್ದ ವೇಳೆಯಲ್ಲಿ. ಅಂತ್ಯಸಂಸ್ಕಾರಕ್ಕೆ ತಮ್ಮ ವಿರೋಧಿಗಳೇ ಬಂದರೂ ಅವರನ್ನು ಗೌರವದಿಂದ ಕಾಣುವುದು ನಮ್ಮ ಸಂಸ್ಕøತಿ. ಹೀಗಿರುವಾಗ ಅಂಥಾ ಸಂದರ್ಭದಲ್ಲಿ ಧಾರ್ಮಿಕ ಗುರುವೊಬ್ಬರ ಮೇಲೆ ದಾಳಿ ಮಾಡಿಸಬೇಕೆಂದರೆ ಬಲವಾದ ಕಾರಣಗಳಿರಲೇ ಬೇಕಲ್ಲವೆ?
ಸ್ವಾಮಿ ಅಗ್ನಿವೇಶ್ ಅವರೇ ಮಾಧ್ಯಮಗಳಿಗೆ ಪತ್ರ ಬರೆದು ಈ ವಿದ್ಯಮಾನವನ್ನು ವಿವರಿಸಿದ್ದಾರೆ.
“ಪಾಕೂರಿನಲ್ಲಿ ನನ್ನ ಮೇಲೆ ಹಲ್ಲೆಯಾದ ಒಂದು ತಿಂಗಳ ನಂತರ, ಕಳೆದ ಶುಕ್ರವಾರ ನಾನು ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹೋಗಿದ್ದಾಗ, ದೆಹಲಿಯ ಬಿಜೆಪಿ ಮುಖ್ಯ ಕಛೇರಿಯ ಮುಂದೆ ಪಕ್ಷದ ಕಾರ್ಯಕರ್ತರ ಒಂದು ಗುಂಪನ್ನು ನನ್ನ ಮೇಲೆ ಛೂ ಬಿಡಲಾಯಿತು. ನಾನು ಕಛೇರಿಯ ಭವನದತ್ತ ನಡೆದು ಹೋಗುತ್ತಿದ್ದಾಗ ನನ್ನನ್ನು ಸುತ್ತುವರೆದು ನನ್ನ ಶಾಲು ಮತ್ತು ಪೇಟವನ್ನು ಎಳೆದು ಹಾಕಿದರು. ನನ್ನನ್ನು ಒಬ್ಬ ದೇಶದ್ರೋಹಿ ಎಂದು ನಿಂದಿಸುತ್ತಾ ಹಲ್ಲೆ ಮಾಡಿದರು. ಅವರು ವಾಸ್ತವದಲ್ಲಿ ವಾಜಪೇಯಿಯವರ ನೆನಪು ಮತ್ತು ಪರಂಪರೆಗೆ ಅವಮಾನ ಮಾಡಿದ್ದರು.
ಜುಲೈ 17ರಂದು ಪಾಕೂರಿನಲ್ಲಿ ನನ್ನ ಮೇಲೆ ಹಲ್ಲೆಯಾದ ತಕ್ಷಣ, ಜಾರ್ಖಂಡ್‍ನ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿರುವ ಸಿ.ಪಿ.ಸಿಂಗ್ ಅದನ್ನು ಸಮರ್ಥಿಸಿಕೊಳ್ಳುತ್ತಾ ನನ್ನನ್ನು ವಿದೇಶಿ ದುಡ್ಡಿನಿಂದ ಬದುಕುತ್ತಿರುವ ಒಬ್ಬ ‘ಕಪಟ ಸನ್ಯಾಸಿ’ ಎಂದು ಜರೆದಿದ್ದರು. ನನ್ನ ಮೇಲೆ ಹಲ್ಲೆಮಾಡಿದವರ ಜತೆ ತಾವೂ ಶಾಮೀಲಾಗಿದ್ದೇವೆ ಎಂಬುದನ್ನು ತೀರಾ ಎಡವಟ್ಟಾಗಿ ಸಾರ್ವಜನಿಕವಾಗಿ ಒಪ್ಪಿಕೊಂಡ ರೀತಿ ಇದು. ಅವರು ಹೀಗೆ ಒಪ್ಪಿಕೊಳ್ಳದಿದ್ದರೂ, ರಾಜಕಾರಣಿಗಳ ಬೆಂಬಲವಿಲ್ಲದೆ ನಾಗರಿಕನೊಬ್ಬನ ಮೇಲೆ ಹೀಗೆ ಹಾಡಹಗಲೇ ಪೂರ್ವನಿಯೋಜಿತ ಹಿಂಸೆ ನಡೆಯಲು ಸಾಧ್ಯವಿಲ್ಲ ಎನ್ನುವುದು ಸ್ವಯಂವೇದ್ಯ. ಈ ಹಿಂಸೆ ಸ್ವಯಂಪ್ರೇರಿತವಾಗಿ ನಡೆಯಿತು ಎಂಬುದು ಅಪ್ಪಟ ಸುಳ್ಳು. ಪ್ರೀತಿ ಮಾತ್ರ ತನ್ನಿಂದತಾನೆ ಮೂಡಬಲ್ಲದು. ಅದಕ್ಕೆ ನೋಡಿ, ‘ಮೊದಲ ನೋಟದ ಪ್ರೇಮ’ ಎಂಬ ಸೊಗಸಾದ ಪರಿಕಲ್ಪನೆ ಇದೆ. ಮೊದಲ ನೋಟದಲ್ಲಿ ಎಂದಿಗೂ ದ್ವೇಷ ಮೂಡಿಬರಲು ಸಾಧ್ಯವಿಲ್ಲ. ಹಿಂಸೆಯು ನಿಸರ್ಗಕ್ಕೆ ವಿರುದ್ಧವಾದುದು. ವೈಚಾರಿಕತೆ, ಕರುಣೆ ಮತ್ತು ಇನ್ನೊಬ್ಬರನ್ನು ಗೌರವಿಸುವ ಮಾನವೀಯತೆಯನ್ನು ತುಳಿದು ಹತ್ತಿಕ್ಕಿದ ನಂತರವೇ ಹಿಂಸೆ ಶುರುವಾಗುತ್ತದೆ. ನಿಶಸ್ತ್ರರಾದ ಮನುಷ್ಯರ ಮೇಲೆ ನಡೆಯುವ ಹಿಂಸೆಯನ್ನು ಮಾನವೀಯತೆಯ ವಿರುದ್ಧದ ಹಿಂಸಾಚಾರ ಎಂದೇ ನಾವು ಭಾವಿಸಬೇಕಾಗುತ್ತದೆ….
ಪಾಕೂರ್ ದಾಳಿ ನಡೆದು ಒಂದು ತಿಂಗಳಾದರೂ ಎಫ್‍ಐಆರ್‍ನಲ್ಲಿ ಉಲ್ಲೇಖಿಸಿರುವ ಎಂಟು ಮಂದಿಯ ಪೈಕಿ ಯಾರೊಬ್ಬರನ್ನೂ ಈವರೆಗೆ ಬಂಧಿಸಿಲ್ಲ.”
ನೆನಪಿಡಿ, ಈ ದಾಳಿ ನಡೆದದ್ದು ಹಾಡಹಗಲಿನಲ್ಲಿ. ಹಲ್ಲೆಯ ಘಟನಾವಳಿಯ ವಿಡಿಯೋಗಳು ಸಾಮಾಜಿಕ ಜಾಲತಾಣದ ತುಂಬಾ ಹರಿದಾಡುತ್ತಿವೆ. ಮೇಲಾಗಿ ಹಲ್ಲೆ ಮಾಡಿದವರನ್ನು ಗುರುತಿಸಿ, ಅವರ ಹೆಸರುಗಳನ್ನೂ ಪೊಲೀಸ್ ದೂರಿನಲ್ಲಿ ನಮೂದಿಸಲಾಗಿದೆ. ಸರ್ಕಾರವೇ ಮುಂದೆ ನಿಂತು ಈ ದಾಳಿ ನಡೆಸಿದೆ ಎಂದು ನಂಬಲು ಇಷ್ಟು ಸಾಕು.
ಸ್ವಾಮಿ ಅಗ್ನಿವೇಶ್‍ರನ್ನು ‘ಹಿಂದೂ ವಿರೋಧಿ’ ಎಂದು ಬ್ರಾಂಡ್ ಮಾಡುವ ಕೆಲಸ ಎಗ್ಗಿಲ್ಲದೆ ಸಾಗಿದೆ. ಹಾಗಿದ್ದರೆ ಅಗ್ನಿವೇಶ್ ಅವರು ಬಯಸುವ ಹಿಂದೂ ಧರ್ಮಕ್ಕೂ ಆರೆಸ್ಸೆಸ್-ಬಿಜೆಪಿಗಳು ಬಯಸುತ್ತಿರುವ ಹಿಂದೂ ಧರ್ಮಕ್ಕೂ ಏನು ವ್ಯತ್ಯಾಸ?
ಅಗ್ನಿವೇಶ್ ಬರೆಯುತ್ತಾರೆ: “ಸಾಮಾಜಿಕ ನ್ಯಾಯಕ್ಕಾಗಿ ಬದುಕು ಮುಡಿಪಿಟ್ಟಿರುವ ನಾನು ಆರ್‍ಎಸ್‍ಎಸ್ ಪಾಲಿಗೆ ಬಹುಕಾಲದಿಂದ ಕಣ್ಣುಬೇನೆಯಾಗಿದ್ದೇನೆ. ನ್ಯಾಯಕ್ಕಾಗಿ ದನಿಯೆತ್ತುವ ಆದರ್ಶವು ಆರ್‍ಎಸ್‍ಎಸ್‍ಗೆ ಸದಾ ಇರಿಸುಮುರಿಸು ಉಂಟುಮಾಡುತ್ತದೆ. ಕೆಳಜಾತಿಗಳು ಮತ್ತು ಬುಡಕಟ್ಟು ಜನಾಂಗಗಳನ್ನು ಎರಡನೇ ದರ್ಜೆ ನಾಗರಿಕರು ಎಂದು ಭಾವಿಸುವ ಆರ್‍ಎಸ್‍ಎಸ್‍ನ ಜಾತಿವಾದೀ ಸಿದ್ಧಾಂತವು ಸಾಮಾಜಿಕ ನ್ಯಾಯದ ವಿರುದ್ಧ ಇದೆ. ನ್ಯಾಯದ ಪರಿಕಲ್ಪನೆಯ ಹಿಂದೆ ಸಮಾನತೆಯ ತತ್ವವು ಯಾವಾಗಲೂ ಅಡಕವಾಗಿರುತ್ತದೆ. ತನ್ನ ಹುಟ್ಟಿನಿಂದಲೂ ಜರ್ಮನಿಯ ಹಿಟ್ಲರ್‍ನಿಂದ ಎರವಲು ಪಡೆದ ಸಾಂಸ್ಕೃತಿಕ ರಾಷ್ಟ್ರೀಯತೆಯ ಸಿದ್ಧಾಂತವನ್ನು ಪ್ರತಿಪಾದಿಸುವ ಆರ್‍ಎಸ್‍ಎಸ್ ಸಿದ್ಧಾಂತವು ಅಸಮಾನತೆಯನ್ನೇ ಎತ್ತಿ ಹಿಡಿಯುತ್ತದೆ. ಈ ತತ್ವ ಭಾರತದ ನೆಲಕ್ಕೆ ಒಗ್ಗುವುದಿಲ್ಲ. ಭಾರತದಲ್ಲಿ ಈ ಹಿಂದೆ ಚಾಲ್ತಿಯಲ್ಲಿದ್ದ ಊಳಿಗಮಾನ್ಯ ಪದ್ಧತಿಗೆ ಭಾರತ ಜೋತು ಬೀಳಬೇಕು ಎಂದು ಆರ್‍ಎಸ್‍ಎಸ್ ಬಯಸುತ್ತದೆ. ಮೇಲ್ಜಾತಿಗಳಿಗೆ ಅರ್ಹವೂ ಮತ್ತು ನ್ಯಾಯಸಮ್ಮತವೂ ಅಲ್ಲದ ಅನುಕೂಲ ಮಾಡಿಕೊಡಲು ಸಮಾಜದ ಇತರೆಲ್ಲ ಸಮುದಾಯಗಳನ್ನು ಹೀಗಳೆಯುತ್ತದೆ. ವೈದಿಕ ಪರಂಪರೆ ಮತ್ತು ಭಾರತದ ಮೂಲ ಅಧ್ಯಾತ್ಮಕ್ಕೆ ಆರ್‍ಎಸ್‍ಎಸ್ ಒಂದು ದುಷ್ಟ ವಿಪತ್ತು ಎಂಬ ವಿಚಾರದಲ್ಲಿ ನನಗೆ ಎಂದಿಗೂ ಗೊಂದಲ ಇರಲಿಲ್ಲ. ಆರ್‍ಎಸ್‍ಎಸ್ ಕುರಿತಂತೆ ಇರುವ ನನ್ನ ತಕರಾರು ಅಧ್ಯಾತ್ಮಿಕವಾದುದು.
ನಾನು ಪ್ರತಿಪಾದಿಸುವ ಅಧ್ಯಾತ್ಮ ಚಿಂತನೆಯು ಭಾರತೀಯ ಸಮಾಜದಲ್ಲಿನ ಮೂಢನಂಬಿಕೆ, ಜಾತಿಪದ್ಧತಿ, ಜೀತಗಾರಿಕೆ, ಬಡವರು ಮತ್ತು ನಿರ್ಗತಿಕರ ಶೋಷಣೆಗಳನ್ನು ತೊಲಗಿಸಬೇಕು ಎಂದು ಕರೆ ನೀಡುತ್ತದೆ. ದಲಿತರು ಮತ್ತು ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡಬೇಕು ಎಂದು ಹೇಳುತ್ತದೆ. ಜೀತ ಪದ್ದತಿಯಲ್ಲಿ ಬಂಧಿತರಾದವರ ವಿಮೋಚನೆಗಾಗಿ ಮತ್ತು ಪುನರ್‍ವಸತಿಗಾಗಿ ಅದು ಧ್ವನಿ ಎತ್ತುತ್ತದೆ. ಸಾರ್ವಜನಿಕ ಜೀವನದಲ್ಲಿ ವೈದಿಕ ಅಧ್ಯಾತ್ಮದ ಬೆಳಕು ಮೂಡಬೇಕು ಎಂದು ಆಶಿಸುತ್ತದೆ. ನಮ್ಮ ಇಂಥ ಕೆಲಸಗಳಿಗಾಗಿಯೇ ನಾನು ಮತ್ತು ನನ್ನ ಸಹಚರ ಸ್ವಾಮಿ ಇಂದ್ರವೇಶ್ ಅವರು ಮಾಕ್ರ್ಸ್‍ವಾದಿಗಳು, ಮಾವೋವಾದಿಗಳು, ಅಲ್ಪಸಂಖ್ಯಾತರ ನಿಷ್ಠರು, ಡೊಂಗಿಸ್ವಾಮಿಗಳು, ಯಾವುದೋ ವಿದೇಶಿ ಶಕ್ತಿಗಳ ಏಜೆಂಟರು ಎಂಬ ಹಣೆಪಟ್ಟಿ ಹೊತ್ತುಕೊಂಡೆವು.
ಪ್ರಸ್ತುತ ಸಮಾಜದಲ್ಲಿ ಅಧ್ಯಾತ್ಮದ ಜ್ಞಾನ ಮತ್ತು ಸಾಮಾಜಿಕ ಕ್ರಿಯೆಗಳ ನಡುವೆ ದೊಡ್ಡ ಕಂದಕ ಏರ್ಪಟ್ಟಿದೆ. ಹೀಗಾಗಿ ಅಧ್ಮಾತ್ಮದ ಜ್ಞಾನ ಇರುವವರು ಸಾಮಾಜಿಕ ಹೊಣೆಗಾರಿಕೆಗಳಿಗೆ ವಿಮುಖರಾಗಿ ಪರ್ವತ ಶಿಖರಗಳ ಮೇಲೆ ಅಥವಾ ಕಾಡಿನಲ್ಲಿ ಏಕಾಂಗಿಯಾಗಿ ನೆಲೆಸಬೇಕು ಎಂಬ ತಪ್ಪುಕಲ್ಪನೆ ಜನಜನಿತವಾಗಿದೆ.
ಇದರ ಜೊತೆಜೊತೆಗೆ ಅವತಾರಗಳ ಪರಿಕಲ್ಪನೆಯೂ ನಮ್ಮ ಧರ್ಮದಲ್ಲಿ ಇದೆ. ಕಾಲಕಾಲಕ್ಕೆ ಅಧರ್ಮದಿಂದ ನಮ್ಮನ್ನು ಧರ್ಮದ ಮಾರ್ಗಕ್ಕೆ ನಡೆಸಲು ದೇವರು ಭೂಮಿಗೆ ಬರುತ್ತಾನೆ ಎನ್ನುವ ನಂಬಿಕೆ ಅವತಾರದ ಪರಿಕಲ್ಪನೆಯ ಮುಖ್ಯ ಅಂಶ. ಹೀಗಾಗಿಯೇ ಅಧ್ಯಾತ್ಮ ಮತ್ತು ಸಾಮಾಜಿಕ ವಾಸ್ತವಗಳು ಪರಸ್ಪರ ಬೆಸೆದುಕೊಂಡಿವೆ ಮತ್ತು ಇವೆರೆಡೂ ಒಂದಕ್ಕೊಂದು ವಿರುದ್ಧವಾದ ಪರಿಕಲ್ಪನೆಗಳೇನಲ್ಲ ಎಂಬುದು ನಮಗೆಲ್ಲ ತಿಳಿದಿರುವ ಸಂಗತಿಯೇ. ಆದರೆ ಧಾರ್ಮಿಕ ಲೋಕದÀಲ್ಲಿ ಮೇಲ್ಚಾತಿ ಮತ್ತು ಮೇಲ್‍ವರ್ಗಗಳ ಪ್ರಾಬಲ್ಯ ಇರುವುದರಿಂದ ತಮಗೆ ಅನುಕೂಲಕರವಾಗಿರುವ ಯಥಾಸ್ಥಿತಿವಾದಿ ಧಾರ್ಮಿಕತೆಯನ್ನು ಜನತೆಯ ಮೇಲೆ ಹೇರುತ್ತಿದ್ದಾರೆ. ಇದರಿಂದಾಗಿಯೇ ನಮ್ಮ ಅಧ್ಯಾತ್ಮ ದೃಷ್ಟಿಕೋನದಲ್ಲಿ ಭಿನ್ನಮತಗಳು ತಲೆದೋರಿವೆ.
ಉದಾಹರಣೆಗೆ ವೈದಿಕ ಪರಿಕಲ್ಪನೆಯಾದ ‘ವಸುಧೈವ ಕುಟುಂಬಕಂ’ ತೆಗೆದುಕೊಳ್ಳಿ. ಇದು ಭಾರತದ ಅಧ್ಯಾತ್ಮ ದೃಷ್ಟಿಕೋನವನ್ನು ಸಮಗ್ರವಾಗಿ ಹಿಡಿದಿಡುತ್ತದೆ. ಇದನ್ನು ನಮ್ಮ ಆಧ್ಯಾತ್ಮದ ತಿರುಳು ಎಂದರೂ ಸರಿ. ಬ್ರಹ್ಮ ಒಬ್ಬನೇ ಸತ್ಯ ಮತ್ತು ಜಗತ್ತಿನಲ್ಲಿರುವ ಎಲ್ಲ ಜೀವಗಳು ಆ ಸತ್ಯದ ವಿವಿಧ ಅಭಿವ್ಯಕ್ತಿಗಳು ಎನ್ನುವುದನ್ನು ಈ ಪರಿಕಲ್ಪನೆ ಸಾರಿ ಹೇಳುತ್ತದೆ. ಹೀಗಿರುವಾಗ ಸಾಮಾಜಿಕ, ಆರ್ಥಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿರುವ ತಾರತಮ್ಯ ಮತ್ತು ದಮನವನ್ನು ಸಮರ್ಥಿಸಿಕೊಳ್ಳುವುದಾದರೂ ಹೇಗೆ ಸಾಧ್ಯ?
ಆದ್ದರಿಂದ ಕಟ್ಟಳೆಗಳಿಂದ ಕೂಡಿದ ಧಾರ್ಮಿಕತೆಗೂ ಮತ್ತು ಅಧ್ಯಾತ್ಮ ಚಿಂತನೆಗೂ ನಡುವೆ ಒಂದು ಧಾರ್ಮಿಕ ನಿಯಂತ್ರಣ ರೇಖೆ ಎಳೆಯುವ ಅನಿವಾರ್ಯತೆ ಉಂಟಾಗುತ್ತದೆ. ವೇದದ ಪಠ್ಯಗಳನ್ನು ಸರಿಯಾಗಿ ಗ್ರಹಿಸಿ, ಅದರ ಆಶಯಗಳನ್ನು ಅರಿತುಕೊಂಡವರು ಪ್ರೀತಿ, ನ್ಯಾಯ, ಸತ್ಯ ಮತ್ತು ಕರುಣೆಯೇ ನಮ್ಮ ಆಧ್ಯಾತ್ಮದ ಸಾರ ಎಂದು ವೇದಗಳು ಸಾರಿ ಹೇಳುತ್ತವೆ ಎಂಬುದನ್ನೂ, ಇದೇ ಅಧ್ಮಾತ್ಮದ ಮೂಲ ಎಂಬುದನ್ನೂ ಒಪ್ಪಿಕೊಳ್ಳುತ್ತಾರೆ. ದುರಂತವೆಂದರೆ ಜಾತಿವಾದ, ಮೂಢನಂಬಿಕೆಗಳಿಂದ ತುಂಬಿ ತುಳುಕುತ್ತಿರುವ, ಮಾನವೀಯ ಮೌಲ್ಯಗಳ ಬಗೆಗೆ ಕಿವುಡು ಮತ್ತು ಕುರುಡಾಗಿರುವ ಡಾಂಭಿಕ ಧಾರ್ಮಿಕತೆ ಈ ಸತ್ಯವನ್ನು ಮುಚ್ಚಿಹಾಕಿಬಿಟ್ಟಿದೆ.
ಈ ನೆಲದ ಆದಿವಾಸಿಗಳು ನಡೆಸುತ್ತಿರುವ ಸಂಘರ್ಷಗಳನ್ನು ಬೆಂಬಲಿಸುವ ನನ್ನ ನಿರ್ಧಾರಕ್ಕೆ ಅಧ್ಯಾತ್ಮದ ಹಿನ್ನೆಲೆ ಇದೆ. ಅದು ರಾಜಕಾರಣ ಅಲ್ಲ. ರಾಜಕಾರಣ ಅಧ್ಯಾತ್ಮವಲ್ಲ ಎಂಬ ನನ್ನ ನಿಲುವಿನ ಕಾರಣಕ್ಕಾಗಿ ನಾನು ಈ ಮಾತನ್ನು ಹೇಳುತ್ತಿಲ್ಲ. ರಾಜಕಾರಣಕ್ಕೆ ಅಧ್ಯಾತ್ಮದ ತಳಹದಿ ಇರಬೇಕು ಎಂದು ನಾನು ಪ್ರತಿಪಾದಿಸುತ್ತೇನೆ. ಭಾರತೀಯ ಸಮಾಜದಲ್ಲಿ ಅಧ್ಯಾತ್ಮವನ್ನು ಮತ್ತೆ ಪುನಶ್ಚೇತಗೊಳಿಸಬೇಕೆಂಬುದೇ ನನ್ನ ಉದ್ದೇಶ. ಧರ್ಮಗಳ ಆಧಾರದ ಮೇಲೆ ಕಿತ್ತಾಡುತ್ತಾ ನಾವು ಭಾರತದ ಅಧ್ಯಾತ್ಮಕ್ಕೆ ಅವಮಾನ ಮಾಡುತ್ತಿದ್ದೇವೆ. ಒಂದು ಉನ್ನತ ಸಮಾಜ ಮತ್ತು ಪ್ರಬಲ ರಾಷ್ಟ್ರವನ್ನು ರೂಪಿಸಲು ಧರ್ಮಗಳು ಪ್ರೇರಣೆ ನೀಡಬೇಕು. ಮಹಾತ್ಮಗಾಂಧಿ ಅವರು ಪ್ರತಿಪಾದಿಸಿದ ರಾಮರಾಜ್ಯ ಪರಿಕಲ್ಪನೆಯ ಸಮಾಜದಲ್ಲಿ ಮಾತ್ರ ಹೀಗೆ ನಾಗರಿಕರು ಅಧ್ಯಾತ್ಮದ ಅತ್ಯುನ್ನತ ಸ್ಥಿತಿಯಲ್ಲಿ ಯೋಚಿಸಲು ಸಾಧ್ಯ. ಭಾರತದಲ್ಲಿ ಅನ್ಯಾಯ, ಹಿಂಸೆ, ಅಮಾನವೀಯತೆ, ಜಾತಿ ಆಧರಿತ ತಾರತಮ್ಯ ಇರುವವರೆಗೂ ನಮ್ಮ ನಿಜವಾದ ಸಾಮಥ್ರ್ಯವನ್ನು ನಾವು ಸದ್ಬಳಕೆ ಮಾಡಿಕೊಳ್ಳುವುದು ಸಾಧ್ಯವಿಲ್ಲ.
ಒಂದಾಗಿ ಸಾಗಿದಾಗ ಮಾತ್ರ ನಾವು ಪ್ರಗತಿಹೊಂದಲು ಸಾಧ್ಯ. ಇದಕ್ಕೆ ವ್ಯತಿರಿಕ್ತವೆಂದರೆ, ಒಟ್ಟಾಗಿಯೇ ನಾಶವಾಗುವುದು ಮಾತ್ರ. ಆಯ್ಕೆ ಯಾವುದಾದರೂ ನಮಗೆ ಸಮಾನ ಭವಿಷ್ಯ ಮಾತ್ರ ಇದೆ ಎನ್ನುವುದು ವಾಸ್ತವ ಸಂಗತಿ. ಹೀಗಾಗಿ ನನ್ನ ದೃಷ್ಟಿಕೋನ ಆರ್‍ಎಸ್‍ಎಸ್‍ಗೆ ಕೆಟ್ಟದಾಗಿ ಕಾಣುತ್ತÀ್ತದೆ. ಹಿಟ್ಲರ್ ಕಾಲದಲ್ಲಿ ಕ್ರೂರ ಜರ್ಮನ್ ಅಧಿಕಾರಿಗಳು ಜನರ ಮೇಲೆ ಹೇರಲು ಯತ್ನಿಸಿದ ಸಿದ್ಧಾಂತವನ್ನು ಆರ್‍ಎಸ್‍ಎಸ್ ನಮ್ಮ ದೇಶದಲ್ಲಿ ಇದೀಗ ಸಾಕಾರಗೊಳಿಸಲು ಯತ್ನಿಸುತ್ತಿರುವುದು ವಿಪರ್ಯಾಸ. ಆರ್‍ಎಸ್‍ಎಸ್‍ನ ಈ ಸಿದ್ಧಾಂತಕ್ಕೆ ಹಿಂದೂಧರ್ಮದ ಜೊತೆಗೆ ಏನಾದರೂ ಸಂಬಂಧವಿದೆಯೇ ಎಂಬ ಬಗ್ಗೆಯೇ ನನಗೆ ಅನುಮಾನವಿದೆ. ಹಾಗೆಯೇ ನಾನು ಪ್ರತಿಪಾದಿಸುತ್ತಿರುವ ವಿಚಾರಗಳ ಕಾರಣಕ್ಕಾಗಿಯೇ ನನ್ನ ಮೇಲೆ ಹಲ್ಲೆ ನಡೆಯಿತು ಎಂದು ಆರ್‍ಎಸ್‍ಎಸ್ ಕೂಡ ನಂಬುವುದಿಲ್ಲ ಎಂಬ ಬಗ್ಗೆ ನನಗೆ ಖಾತ್ರಿಯಿದೆ.
ನನ್ನ ಮೇಲೆ ಎರಡನೇ ಬಾರಿ ಹಲ್ಲೆ ನಡೆದಿದೆ. ಈ ಹಲ್ಲೆಗಳು ನನಗೆ ತೀವ್ರ ನೋವನ್ನುಂಟುಮಾಡಿವೆ. ನಾನು ಅನುಭವಿಸಿದ ನೋವು ಮತ್ತು ಹಿಂಸೆಗಳು, ನಮ್ಮ ಸಮಾಜ ಎದುರಿಸುತ್ತಿರುವ ಇಂದಿನ ದುರಂತದ ಬಗ್ಗೆ ಸಹ-ಭಾರತೀಯರನ್ನು ಎಚ್ಚರಿಸುವಂತಾದರೆ ಮಾತ್ರ ನನ್ನ ನೋವು ಶಮನವಾಗುತ್ತದೆ.”
ಆರೆಸ್ಸೆಸ್-ಬಿಜೆಪಿಗಳು ಸತ್ಯ, ನ್ಯಾಯಗಳಿಗೆ ವಿರುದ್ಧವಾಗಿ ಪ್ರತಿಪಾದಿಸುತ್ತಿರುವ ಡೋಂಗಿ ಧರ್ಮದ ಒಳಮರ್ಮವನ್ನು ಅರಿಯದೇ ಹೋದರೆ ಈ ದೇಶಕ್ಕೆ ಭವಿಷ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...