Homeಅಂಕಣಗಳುನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

ನಿಮಗೆ ಭೀಮ್ ಆರ್ಮಿ ಗೊತ್ತಿರಬಹುದು; ಭೀಮ್ ಪಾಠಶಾಲಾ?

- Advertisement -
- Advertisement -

ಚಂದ್ರಶೇಖರ್ ಆಜಾದ್ ‘ರಾವಣ್’, ಯಾವುದೇ ಬಾಲಿವುಡ್ ಹೀರೋಗೂ ಕಡಿಮೆಯಿಲ್ಲದಂತೆ ಸಂಚಲನ ಮೂಡಿಸಿರುವ ಹೆಸರುಗಳಲ್ಲೊಂದು. ಈವರೆಗೆ ರಾಮಾಯಣದ ರಾವಣನ ಪೌರಾಣಿಕ ಪಾತ್ರವನ್ನು ಬಿಟ್ಟು ಆ ಹೆಸರಿನ ಇನ್ಯಾವ ವ್ಯಕ್ತಿಯ ಬಗ್ಗೆಯೂ ಗೊತ್ತಿಲ್ಲದವರೂ ಕೂಡಾ, ಕಳೆದ ಕೆಲವು ದಿನಗಳಲ್ಲಿ ಮಾಧ್ಯಮಗಳು ಪದೇ ಪದೇ ಪ್ರಸ್ತಾಪಿಸಿದ ಈ ಹೆಸರಿನ ವ್ಯಕ್ತಿಯ ಬಗ್ಗೆ ಕುತೂಹಲದಿಂದ ಪರಿಶೀಲಿಸುವಂತಾಯಿತು. ವಿವರಗಳನ್ನು ಕೆದಕಿದವರಿಗೆ ಕಂಡಿದ್ದು ಚಂದ್ರಶೇಖರ್ ಅಥವಾ ರಾವಣ್ ಎಂಬ ಪಶ್ಚಿಮ ಉತ್ತರ ಪ್ರದೇಶದ ದಲಿತ ಯುವ ವಕೀಲನೊಬ್ಬನು ಹೊಸ ತಲೆಮಾರನ್ನು ಪ್ರಭಾವಿಸಿದ ರೀತಿ; ವಿಶೇಷವಾಗಿ ಈತ, ವಿನಯ್ ರತನ್‍ಸಿಂಗ್ ಎಂಬ ಮತ್ತೊಬ್ಬ ದಲಿತ ಯುವ ವಕೀಲನೊಂದಿಗೆ ಸೇರಿ ಕಟ್ಟಿದ ‘ಭೀಮ್ ಆರ್ಮಿ’ ತಂಡವು ದಲಿತ ಯುವಕರಲ್ಲಿ ಮಿಲಿಟೆನ್ಸಿಯನ್ನು ಹುಟ್ಟುಹಾಕಿ ಯಾರಿಗೂ ತಲೆಬಾಗಿ ಬದುಕಬೇಡಿ ಎಂಬ ಸಂದೇಶ; ನಂತರ ಆಜಾದ್ ಮೇಲೆ ಸುಳ್ಳು ಕೇಸುಗಳನ್ನು ಜಡಿದು ಜೈಲುಪಾಲು ಮಾಡಿ ಇವೆಲ್ಲವನ್ನೂ ಹತ್ತಿಕ್ಕಲು ಉತ್ತರ ಪ್ರದೇಶದ ಸರ್ಕಾರ ನಡೆಸಿದ ವಿಫಲ ಯತ್ನ ಮತ್ತು ನಂತರ ಅನಿವಾರ್ಯವಾಗಿ ಈ ಸೆಪ್ಟೆಂಬರ್ 13ರ ಮಧ್ಯರಾತ್ರಿ ಚಂದ್ರಶೇಖರ್ ಆಜಾದ್ ರ  ಬಿಡುಗಡೆ!

ಇವೆಲ್ಲವೂ ಕೇವಲ 30ರ ಆಸುಪಾಸಿನಲ್ಲಿರುವ, ದಲಿತರ ಪರವಾದ ಖಚಿತವಾದ ರಾಜಕೀಯ ನಿಲುವುಗಳನ್ನುಳ್ಳ, ಪ್ರಖರ ವಾಗ್ಮಿಯೂ ಹೋರಾಟಗಾರನೂ ಆದ ಈ ಯುವಕನನ್ನು ಭಾರತದ ಬಹುಪಾಲು ದಲಿತ ಮತ್ತು ಚಿಂತನಶೀಲ ಯುವಕರ ಕಣ್ಮಣಿಯಾಗಿಸಿದೆ. ತಮ್ಮ ಸಮುದಾಯವನ್ನು ಸುದೀರ್ಘ ಕಾಲದಿಂದ ಕಾಡುತ್ತಾ ಬಂದಿರುವ ಉತ್ತರ ಪ್ರದೇಶದ ಬಲಾಢ್ಯ ಠಾಕೂರ್ ಸಮುದಾಯದ ರೀತಿಯಂತೆ ಉದ್ದೇಶಪೂರ್ವಕವಾಗಿಯೇ ಮೇಲೆತ್ತಿ ತಿರುಗಿಸಿದ ಮೀಸೆಯನ್ನೂ, ಬಲಗೈಗೆ ಧರಿಸುವ ದಪ್ಪ ಕಡಗವನ್ನೂ ತಮ್ಮ ವಿಶಿಷ್ಟ (ಸಿಗ್ನೇಚರ್) ಶೈಲಿಯಾಗಿಸಿಕೊಂಡಿರುವ ಭೀಮ್ ಆರ್ಮಿಯ ಹೋರಾಟಗಾರರು ಸದ್ಯಕ್ಕೆ ಸಮಾನತೆಯನ್ನು ಕನಸುವ ಯುವಕರ ಫ್ಯಾಶನ್ ಐಕಾನ್‍ಗಳು ಕೂಡಾ ಹೌದು!

ಚಂದ್ರಶೇಖರ್ ಆಜಾದ್ ‘ರಾವಣ್’ ಭೀಮ್ ಆರ್ಮಿಯನ್ನು ಆರಂಭಿಸಿದ್ದು 2015ರ ಜುಲೈನಲ್ಲಿ. ‘ರಾವಣ್’ ಎಂಬುದು ಖಳನಾಯಕರಂತೆ ಬಿಂಬಿಸಲ್ಪಟ್ಟ ಈ ದೇಶದ ಮೂಲನಿವಾಸಿ ಹೋರಾಟಗಾರರ ನಿಜವಾದ ಇತಿಹಾಸವನ್ನು ಎತ್ತಿತೋರುವುದಕ್ಕಾಗಿ ಬೇಕೆಂದೇ ಇಟ್ಟುಕೊಂಡ ಹೆಸರು. ಠಾಕೂರರ ಉಸಿರುಕಟ್ಟಿಸುವ ದಮನ ದಬ್ಬಾಳಿಕೆಗಳ ನಡುವೆ ತಲೆಯೆತ್ತಲು ಹೆಣಗುತ್ತಿದ್ದ ಸಹರಾನ್‍ಪುರದ ದಲಿತ ಸಮುದಾಯದೊಳಕ್ಕೆ ಅಂಬೇಡ್ಕರ್ ಚಿಂತನೆಗಳೊಂದಿಗೆ ಅವರ ತಂಡ ನುಗ್ಗಿತು. ಅತ್ಯಂತ ಸಣ್ಣ ಅವಧಿಯಲ್ಲಿ ಜನಬೆಂಬಲವನ್ನೂ, ಜನಪ್ರಿಯತೆಯನ್ನೂ ಗಳಿಸಿದ ಆಜಾದ್ ರ ಮಿಂಚಿನ ವೇಗವು ದಲಿತ ಸಮುದಾಯದಲ್ಲಿ ಐಕ್ಯತೆಯನ್ನು ತಂದಿತ್ತು. ಇದು ಬಲಾಢ್ಯ ಸಮುದಾಯಗಳ ಫ್ಯೂಡಲ್ ದೊರೆಗಳ ಮತ್ತು ಉತ್ತರ ಪ್ರದೇಶದ ಸರಕಾರಗಳ (ಈಗಿನ ಮತ್ತು ಹಿಂದಿನ) ನಿದ್ದೆ ಕೆಡಿಸಿತ್ತು. ಆದ್ದರಿಂದಲೇ, ಸುಮಾರು 24 ಗಂಭೀರ ದೋಷಾರೋಪಗಳನ್ನು ಅವರ ಮೇಲೆ ಹೊರಿಸಿತು. ಅದು ಸಾಲದೆಂದು ದೇಶದ ಭದ್ರತೆಗೇ ಅಪಾಯವಾಗುವಂತಹ ಕೆಲಸ ಮಾಡಿದ್ದಾನೆಂದು ಆರೋಪಿಸುತ್ತಾ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ಯ ಅತಿ ಗಂಭೀರ ಆರೋಪಗಳನ್ನೂ ಬಳಸಿ 2017ರಲ್ಲಿ ಅವರನ್ನು ಜೈಲಿಗೆ ದಬ್ಬಲಾಯಿತು.

ಆದರೆ, ಈ ಸುದ್ದಿಗಳ ನಡುವೆ ಭೀಮ್ ಆರ್ಮಿಯು ತನ್ನ ಹುಟ್ಟಿನೊಂದಿಗೇನೆ ಆರಂಭಿಸಿದ ‘ಭೀಮ್ ಪಾಠ್‍ಶಾಲಾ’ಗಳ ಯಶಸ್ಸಿನ ಕಥೆ ಸ್ವಲ್ಪ ಮಸುಕಾದಂತಾಗಿದೆ. ಮೊಟ್ಟಮೊದಲ ಭೀಮ್ ಪಾಠ್‍ಶಾಲಾ 2015ರಲ್ಲಿ ಸಹರನ್‍ಪುರದ ಫತೇಪುರ್ ಭಾಡೋ ಗ್ರಾಮದಲ್ಲಿ ಆರಂಭವಾಯಿತು. ಭೀಮ್ ಆರ್ಮಿ (ಈ ಸಂಘಟನೆಯ ಪೂರ್ಣ ಹೆಸರು ‘ಭೀಮ್ ಆರ್ಮಿ ಭಾರತ್ ಏಕ್ತಾ ಮಿಶನ್’)ಯ ಸಂಸ್ಥಾಪಕರಾದ ಆಜಾದ್ ಮತ್ತು ವಿನಯ್ ರತನ್‍ರಿಗೆ ಮತ್ತು ಅವರ ಜೊತೆಗಾರರಿಗೆ ಇಂತಹ ಶಾಲೆಗಳ ಅಗತ್ಯವೇನೆಂಬುದು ನಿಚ್ಚಳವಾಗಿ ತಿಳಿದಿತ್ತು.
‘ಯಾವುದೇ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಮೊದಲ ಹತ್ತು ವರ್ಷಗಳಲ್ಲಿ ಆ ಮಗು ಏನು ಕಲಿಯುತ್ತದೆಂಬುದು ಬಹಳ ಮುಖ್ಯ. ಆದರೆ ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳು ಅಸಹನೀಯವಾದ ಸ್ಥಿತಿಯಲ್ಲಿವೆ. ಬಹುಪಾಲು ದಲಿತ ಸಮುದಾಯ ಖಾಸಗಿ ಶಾಲೆಗಳ ದುಬಾರಿ ಶುಲ್ಕವನ್ನು ಭರಿಸುವ ಸ್ಥಿತಿಯಲ್ಲಿಲ್ಲ; ಒಂದು ವೇಳೆ ಹಾಗೆ ಖಾಸಗಿ ಶಾಲೆಗಳಿಗೆ ಕಳಿಸಿದರೂ ಜಾತಿಯ ಕಾರಣದಿಂದಾಗಿ ಅಲ್ಲಿ ಅವರಿಗೆ ಸಮಾನ ಗೌರವ ಅಥವಾ ಕಲಿಕೆ ಸಿಗುವುದಿಲ್ಲವೆಂಬುದು ಗೊತ್ತೇ ಇದೆ. ಬಾಬಾಸಾಹೇಬರು ಶಿಕ್ಷಣಕ್ಕೆ ಪ್ರಮುಖ ಸ್ಥಾನ ಕೊಟ್ಟಿದ್ದು ಸುಮ್ಮನೇ ಅಲ್ಲ. ಅದಕ್ಕಾಗಿಯೇ ನಮ್ಮ ಸಂಘಟನೆಯ ಮೊದಲ ಮತ್ತು ಆದ್ಯತೆಯ ಕೆಲಸವಾಗಿ ನಾವು ಆರಂಭಿಸಿದ್ದು ಉಚಿತವಾಗಿ ಉತ್ತಮ ಕಲಿಕೆಯನ್ನು ರೂಪಿಸುವ ‘ಭೀಮ್ ಪಾಠ್‍ಶಾಲಾ’ಗಳನ್ನು’ ಎನ್ನುತ್ತಾರೆ ಸಿಂಗ್.

ಈ ಶಾಲೆಗಳಲ್ಲಿ ಮಕ್ಕಳು ಪಠ್ಯ ವಿಷಯಗಳಾದ ಗಣಿತ, ವಿಜ್ಞಾನ, ಇಂಗ್ಲೀಷ್ ಮೊದಲಾದವುಗಳ ಜೊತೆಗೆ, ಇತಿಹಾಸದ ಪುಟಗಳಲ್ಲಿ ಹೂತುಹೋಗಿರುವ ದಲಿತ ಸಮುದಾಯದ ಚರಿತ್ರೆಯನ್ನೂ, ಶೋಷಿತರ ವಿಮೋಚನೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳ ಜೀವನ ಚಿತ್ರಣಗಳನ್ನೂ, ಅಂಬೇಡ್ಕರ್‍ರವರ ಚಿಂತನೆಗಳನ್ನೂ ಕಲಿಯುತ್ತಾರೆ. ಆರಂಭದಲ್ಲಿ ಸಹರನ್‍ಪುರದ ಸುತ್ತಲಿನ ಪ್ರದೇಶದಲ್ಲಷ್ಟೇ ಸಂಜೆಯ ಕೋಚಿಂಗ್ ತರಗತಿಗಳಾಗಿ 2 ಗಂಟೆಗಳ ಕಾಲ ನಡೆಯುತ್ತಿದ್ದ ಈ ಶಾಲೆಗಳು ಬಹಳ ವೇಗವಾಗಿ ಮೀರಟ್, ಮುಜಫ್ಫರ್‍ನಗರ್, ಆಗ್ರಾ ಮೊದಲಾದೆಡೆಗಳಿಗೂ ವ್ಯಾಪಿಸಿದವು. ಇಂದು ಸುಮಾರು 350ರಷ್ಟು ‘ಭೀಮ್ ಪಾಠ್‍ಶಾಲಾ’ಗಳು ಕಾರ್ಯನಿರ್ವಹಿಸುತ್ತಿದ್ದು ಸಾವಿರದ ಸಂಖ್ಯೆಯನ್ನು ಮುಟ್ಟುವ ದಿಕ್ಕಿನಲ್ಲಿ ಮುನ್ನಡೆಯುತ್ತಿವೆ.

ಮೊದಲ ಶಾಲೆ ಫತೇಪುರದಲ್ಲಿ ಆರಂಭವಾಗುತ್ತಿದ್ದಂತೆ ಬುಢಖೇರಾದ ದಲಿತ ಯುವಕರಿಗೆ ತಮ್ಮಲ್ಲೂ ಇಂತಹ ಶಾಲೆ ಬೇಕೆಂದೆನಿಸಿತು. ನಿವೃತ್ತ ಶಿಕ್ಷಕ ಕನ್ವರ್ ಪಾಲ್ ಸಿಂಗ್‍ರವರ ಮನೆಯೆದುರಿನ ಖಾಲಿ ಬಯಲೇ ಶಾಲಾ ಆವರಣವಾದರೆ ಆಗಷ್ಟೇ 10ನೇ ತರಗತಿ ಮುಗಿಸಿದ್ದ 15 ವರ್ಷದ ಸಿಂಗ್‍ರವರ ಕಿರಿಯ ಪುತ್ರಿ ನಿಶಾ ಆ ಭೀಮ್ ಶಾಲೆಯ ಮೊದಲ ಬೋಧಕಿಯಾದಳು. ಮೊದಲ ದಿನ 30 ಇದ್ದ ಮಕ್ಕಳ ಸಂಖ್ಯೆ ಕೇವಲ 2 ವಾರಗಳಲ್ಲಿ 100ರ ಸಂಖ್ಯೆಯನ್ನೂ ದಾಟಿ ಹಿಗ್ಗುತ್ತಾ ಹೋಗಿ ಶಾಲೆಯನ್ನು ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಬೇಕಾದ ಅನಿವಾರ್ಯತೆ ಸೃಷ್ಟಿಸಿತು. ಈಗ ಶಾಲೆಯಲ್ಲಿ 200ಕ್ಕೂ ಹೆಚ್ಚು ಮಕ್ಕಳು 1-4 ಹಾಗೂ 5-9ರವರೆಗಿನ ವಿಭಾಗಗಳಲ್ಲಿ ನಿರಂತರ ಕಲಿಕೆಯಲ್ಲಿದ್ದಾರೆ.

ಇದೇ ಶಾಲೆಯ ಹಿರಿಯ ವಿದ್ಯಾರ್ಥಿನಿ ರಚನಾ, ತನ್ನ ಔಪಚಾರಿಕ ಖಾಸಗಿ ಶಾಲೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತರಗತಿಗೆ ಮೊದಲ ಸ್ಥಾನ ಗಳಿಸಿ ಆಜಾದ್ ರವರಿಂದ ಬಹುಮಾನ ಪಡೆದಿರುವುದನ್ನು ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತಾಳೆ. ರಚನಾ ಕೂಲಿಕಾರ್ಮಿಕರಾದ ತನ್ನ ತಂದೆತಾಯಿಯರ 7 ಮಂದಿ ಮಕ್ಕಳಲ್ಲಿ ಒಬ್ಬಳು. ‘ಭೀಮ್ ಆರ್ಮಿಯೊಂದಿಗೆ ಗುರುತಿಸಿಕೊಂಡಿರುವುದರಿಂದ ನಾವು ದಲಿತ ಹೆಣ್ಣುಮಕ್ಕಳು ಇಂದು ಲೈಂಗಿಕ ದೌರ್ಜನ್ಯಗಳ ಭೀತಿಯಿಲ್ಲದೆ ಸೈಕಲ್ ತುಳಿದುಕೊಂಡು ಶಾಲೆಗೆ ಹೋಗಲು ಸಾಧ್ಯವಾಗುತ್ತಿದೆ. ನಾನು ಜೀವಶಾಸ್ತ್ರ ಕಲಿತು ಮುಂದೆ ವೈದ್ಯೆಯಾಗಬೇಕು, ನೊಂದವರಿಗಾಗಿ ಉಚಿತ ಚಿಕಿತ್ಸಾಲಯಗಳನ್ನು ತೆರೆಯಬೇಕು’ ಎಂಬ ಕನಸು ಕಾಣುವುದು ರಚನಾಗೆ ಈಗ ಸಾಧ್ಯವಾಗಿದೆ. ಆಕೆಯು ಭೀಮಶಾಲೆಯ ಮತ್ತೊಬ್ಬ ಸ್ವಯಂಸೇವಕ ಬೋಧಕಿ!

ಈ ಅನೌಪಚಾರಿಕ ಶಾಲೆಗಳು ದಲಿತ ಸ್ವಾಭಿಮಾನದ, ಅರಿವಿನ ಮತ್ತು ಐಕ್ಯತೆಯ ಪ್ರತೀಕಗಳಾಗಿ ಛಾಪು ಮೂಡಿಸುತ್ತಾ ವಿಸ್ತರಣೆಗೊಳ್ಳುತ್ತಲೇ ಹೋಗುತ್ತಿವೆ.
ಶೋಷಿತರ ಸ್ವಾಭಿಮಾನದ ಚಳವಳಿಗಳಿಗೆ ಶಿಕ್ಷಣವು ಕೇವಲ ಅನ್ನದ ಮಾರ್ಗ ಮಾತ್ರವಲ್ಲ; ಸಮಾಜ ಪರಿವರ್ತನೆಯ ಮಾರ್ಗ. ಶೋಷಿತ ಸಮುದಾಯಗಳು ತಮ್ಮದೇ ಆದ ಸಾಮಾಜಿಕ ಸಾಂಸ್ಕøತಿಕ ಗುರುತನ್ನು ಗಳಿಸಿಕೊಳ್ಳುವ ಮತ್ತು ಉಳಿಸಿಕೊಳ್ಳುವ ಮಾರ್ಗ. ಆದ್ದರಿಂದಲೇ ರಷ್ಯಾ ಕ್ರಾಂತಿಯ ನಂತರ ಲೆನಿನ್ ತಮ್ಮ ಭಾಷಣವೊಂದರಲ್ಲಿ “ರಷ್ಯಾದ ದುಡಿಯುವ ಜನತೆಯ ಶೇ.90ಕ್ಕಿಂತ ಹೆಚ್ಚು ಮಂದಿ ಶಿಕ್ಷಣ ಪಡೆದಿಲ್ಲ; ಆದರೆ, ಬಂಡವಾಳಶಾಹಿಗಳ ಮೇಲೆ ವಿಜಯ ಸಾಧಿಸಲು ತಮಗೆ ಅದು ಬೇಕೇಬೇಕು ಎಂಬುದನ್ನು ಅರಿತಿದ್ದಾರೆ. ಇಲ್ಲಿ ಶಿಕ್ಷಣ ಕೇವಲ ಅಕ್ಷರ ಜ್ಞಾನವಲ್ಲ, ಹೊಸ ಮಾನವರ ಹುಟ್ಟು” ಎನ್ನುತ್ತಾರೆ. ಇದೇ ಮಾದರಿಯಲ್ಲಿ ಭೀಮ್ ಪಾಠಶಾಲೆಯ ಪ್ರಯೋಗ ಏಕಕಾಲದಲ್ಲಿ ರಚನಾತ್ಮಕವಾದದ್ದೂ ಹಾಗೂ ಅತ್ಯಂತ ರಾಜಕೀಯವಾದದ್ದೂ ಹೌದು.

ಛತ್ತೀಸ್‍ಗಢದಲ್ಲಿ ಹೋರಾಟ ಮತ್ತು ರಚನಾತ್ಮಕ ಕೆಲಸಗಳು ಜೊತೆಜೊತೆಯಾಗಿ ಸಾಗಬೇಕಿರುವ ಕುರಿತು ಛತ್ತೀಸ್‍ಗಡ ಮುಕ್ತಿ ಮೋರ್ಚಾದ ಸಂಸ್ಥಾಪಕ ಶಂಕರ್ ಗುಹಾ ನಿಯೋಗಿ ‘ಸಂಘರ್ಷ್ ಔರ್ ನಿರ್ಮಾಣ್’ ಎಂದು ಸೂತ್ರೀಕರಿಸಿದ್ದರು. ಶಹೀದ್ ಶಾಲೆಗಳು ಮತ್ತು ಶಹೀದ್ ಆಸ್ಪತ್ರೆಗಳು ಇಂದಿಗೂ ಮಾದರಿ ಸಂಸ್ಥೆಗಳಾಗಿವೆ. ಮಹಾರಾಷ್ಟ್ರದಲ್ಲಿ ಅನೂಪ್ ವಾರ್ಧಾರವರು ನಡೆಸುತ್ತಿರುವ ನಳಂದ ಅಕಾಡೆಮಿಯ ಪ್ರಯೋಗದ ಕುರಿತು, ಅವರ ಸಂದರ್ಶನದ ಮೂಲಕ ಓದುಗರಿಗೆ ‘ಪತ್ರಿಕೆ’ ತಿಳಿಸಿತ್ತು.

ಬಹುಶಃ ಸಂಘರ್ಷ್ ಔರ್ ನಿರ್ಮಾಣ್‍ಗಳು ಇಂದು ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿವೆ. ಈ ತಲೆಮಾರಿನ ಯುವಜನರನ್ನು ಒಳಗೊಂಡು, ಮಕ್ಕಳು ಕುಟುಂಬ ಎಲ್ಲರನ್ನೂ ಜೊತೆಗೊಯ್ಯಬಲ್ಲ ಹೋರಾಟದ ಮಾದರಿಗಳು ಹೆಚ್ಚೆಚ್ಚು ಜನರನ್ನೂ ತಲುಪುತ್ತವೆ ಹಾಗೂ ಇದರ ಪ್ರಭಾವ ಹಾಗೂ ಪರಿಣಾಮ ದೂರಗಾಮಿಯಾದದ್ದೂ ಆಗಿರುತ್ತದೆ. ಇದನ್ನು ಭೀಮ್‍ಆರ್ಮಿ ತಂಡವು ಚೆನ್ನಾಗಿಯೇ ಮನಗಂಡಿದೆ. ಅವರಿಗೊಂದು ಜೈಭೀಮ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...