ಪಾದರಾಯನಪುರ ಘಟನೆಯನ್ನು ಖಂಡಿಸುವುದರ ಜೊತೆಗೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ತಪ್ಪಿತಸ್ಥರ ವಿರುದ್ದ ಸರ್ಕಾರ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಿ, ಆದರೆ ಇದನ್ನು ವ್ಯಕ್ತಿಗಳ ವಿರುದ್ಧದ ಕ್ರಿಮಿನಲ್ ಚಟುವಟಿಕೆ ಆಗಿ ನೋಡಬೇಕೇ ಹೊರತು ಒಂದು ಸಮುದಾಯದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಬಾರದು ಎಂದು ಅವರು ಹೇಳಿದ್ದಾರೆ.
“ನಮ್ಮ ತುರ್ತು ಸಭೆಯಲ್ಲಿ ರಾಜ್ಯದಲ್ಲಿ ಹಾಗೂ ಪಾದರಾಯನಪುರದಲ್ಲಿ ನಡೆದ ಘಟನೆಗಳ ಬಗ್ಗೆ ನಮ್ಮ ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸಿದ್ದೇನೆ. ಜನರ ರಕ್ಷಣೆ, ಕಾನೂನು ಸುವ್ಯವಸ್ಥೆ ರಕ್ಷಣೆ ಸೇರಿದಂತೆ ಸರಕಾರದ ಉತ್ತಮ ಕಾರ್ಯಗಳಿಗೆ ನಮ್ಮ ಪಕ್ಷ ಸಂಪೂರ್ಣ ಬೆಂಬಲಕೊಡುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷದ ಯಾವುದೇ ನಾಯಕರು ತಕರಾರು ಮಾಡುವುದಿಲ್ಲ.” ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
“ಈ ಸಂದರ್ಭದಲ್ಲಿ ನಾನು ಮುಖ್ಯಮಂತ್ರಿಗಳಲ್ಲಿ ಒಂದು ವಿಚಾರವಾಗಿ ನಮ್ರತೆಯಿಂದ ಮನವಿ ಮಾಡಿಕೊಳ್ಳುತ್ತೇನೆ. ಇದು ವ್ಯಕ್ತಿಗಳು ಮಾಡಿರುವ ಅಪರಾಧವೇ ಹೊರತು, ಒಂದು ಸಮಾಜ, ಸಮುದಾಯ ಮಾಡಿದ ತಪ್ಪಲ್ಲ. ಯಾರೋ ಕೆಲವರು ಮಾಡಿದ ತಪ್ಪನ್ನು ಇಡೀ ಸಮುದಾಯದ ಮೇಲೆ ಹೊರಿಸುವುದು ಸರಿಯಲ್ಲ. ಯಾರು ತಪ್ಪು ಮಾಡಿದ್ದಾರೋ ಅವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಬೇಕು.” ಎಂದು ಆಗ್ರಹಿಸಿದ್ದಾರೆ.
“ಕೆಲವು ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಹಾಗೂ ನೀಡುತ್ತಿದ್ದಾರೆ ಎಂಬುದನ್ನು ಮುಖ್ಯಮಂತ್ರಿಗಳು ಗಮನಿಸಬೇಕು. ಮೊದಲಿನಿಂದಲೂ ಯಾರು ಶಾಂತಿಭಂಗ ಮಾಡಲು ಪ್ರಚೋದನೆ ನೀಡುತ್ತಿದ್ದಾರೆ ಎಂಬುದನ್ನು ಪರಿಶೀಲಿಸಬೇಕು” ಎಂದು ಹೇಳಿದರು.
“ಪ್ರಚೋದನಕಾರಿ ಹೇಳಿಕೆ ನೀಡಿದವರು ಯಾವುದೇ ಪಕ್ಷದವರಾಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಿ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತಿಳುವಳಿಕೆ ನಿಮಗೆ ಇದೆ. ಬಿಜೆಪಿ ನಾಯಕರು, ಕಾರ್ಯಕರ್ತರು ನೀಡುತ್ತಿರುವ ಹೇಳಿಕೆ ಸರಿಯೋ ಅಲ್ಲವೋ ಎಂಬುದನ್ನು ಸರ್ಕಾರ ಗಮನಿಸಬೇಕು. ಒಬ್ಬ ವ್ಯಕ್ತಿ ಅಥವಾ ಒಂದು ಪಕ್ಷದ ಹಿನ್ನೆಲೆಯಲ್ಲಿ ನೋಡಬಾರದು” ಎಂದು ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
ಆಗ್ರಹಿಸು(ಸಂ)>ಒತ್ತಾಯಿಸು(ಕ)