ತಮಿಳುನಾಡಿನ ವೈದ್ಯಕೀಯ ಕಾಲೇಜುಗಳಲ್ಲಿ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆಯಲ್ಲಿ ’ಮೀಸಲಾತಿ ಮೂಲಭೂತ ಹಕ್ಕಲ್ಲ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಮೀಸಲಾತಿ ಮೂಲಭೂತ ಹಕ್ಕು ಎಂದು ಯಾರೂ ಕೂಡ ಪ್ರತಿಪಾದಿಸಲು ಸಾಧ್ಯವಿಲ್ಲ. ಮೀಸಲಾತಿ ಸೌಲಭ್ಯ ನಿರಾಕರಿಸಿದಾಗ ಅದು ಸಂವಿಧಾನಿಕ ಹಕ್ಕಿಗೆ ಚ್ಯುತಿ ಎಂದು ಮಂಡಿಸುವಂತಿಲ್ಲ ಎಂದು ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ಸುಪ್ರೀಂ ನ್ಯಾಯಪೀಠ ಹೇಳಿದೆ.
2020-21ರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ, ಸ್ನಾತಕೋತ್ತರ ಪದವಿ ಶಿಕ್ಷಣಕ್ಕೆ ಒಬಿಸಿ ವರ್ಗದವರಿಗೆ ಶೇ. 50ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ತಮಿಳುನಾಡಿನ ವಿಪಕ್ಷಗಳಾದ ಡಿಎಂಕೆ ಮತ್ತು ಸಿಪಿಐನ ಪಕ್ಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.
ತಮಿಳುನಾಡಿನಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿಗೆ ಶೇ. 69ರಷ್ಟು ಮೀಸಲಾತಿ ಇದೆ. ಅದರಲ್ಲಿ ಒಬಿಸಿಗೆ ಶೇ. 50 ಮೀಸಲಾತಿ ಇದೆ. ಆದರೆ, ಅರ್ಜಿದಾರರು ತಮಿಳುನಾಡಿನ ವೈದ್ಯಕೀಯ ಕಾಲೇಜುಗಳಲ್ಲಿ ಒಟ್ಟಾರೆ ಇರುವ ಸೀಟುಗಳ ಪೈಕಿ ಶೇ. 50 ಪಾಲು ಒಬಿಸಿಗೆ ದಕ್ಕಬೇಕು. ಅದರ ಪ್ರಕಾರ ಸೀಟು ಕೊಡದಿದ್ದರೆ ಮೂಲಭೂತ ಹಕ್ಕಿನ ಉಲ್ಲಂಘನೆಯಾದಂತಾಗುತ್ತದೆ ಎಂದು ಆರ್ಟಿಕಲ್ 32 ಅನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ನಲ್ಲಿ ವಾದಿಸಿದ್ದರು.
ಆದರೆ, ಸುಪ್ರೀಂ ಕೋರ್ಟ್ ಈ ವಾದವನ್ನು ಪುರಸ್ಕರಿಸಲಿಲ್ಲ. “ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗುತ್ತದೆ? ಸಂವಿಧಾನದ ಆರ್ಟಿಕಲ್ 32 ಮೂಲಭೂತ ಹಕ್ಕಿನ ಉಲ್ಲಂಘನೆಗೆ ಮಾತ್ರ ಸಂಬಂಧಿಸಿದ್ದಾಗಿದೆ. ನೀವು ತಮಿಳುನಾಡಿನ ಜನರ ಮೂಲಭೂತ ಹಕ್ಕುಗಳ ಬಗ್ಗೆ ಆಸಕ್ತರಾಗಿದ್ದೀರೆಂದು ನಾವು ಭಾವಿಸಿದ್ದೇವೆ. ಮೀಸಲಾತಿ ಎಂಬುದು ಮೂಲಭೂತ ಹಕ್ಕಲ್ಲ” ಎಂದು ನ್ಯಾಯಪೀಠ ಹೇಳಿತು.
ತಮಿಳುನಾಡು ಸರ್ಕಾರ ಮೀಸಲಾತಿಯ ಕಾನೂನನ್ನ ಉಲ್ಲಂಘಿಸಿದೆ ಎಂದು ಅರ್ಜಿದಾರರು ವಾದಿಸಿದಾಗ ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಈ ಹಿಂದಿನ ಕೆಲ ಪ್ರಕರಣಗಳಲ್ಲೂ ಸುಪ್ರೀಂ ಕೋರ್ಟ್ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಹೇಳಿದ್ದನ್ನು ಈ ಸಮಯದಲ್ಲಿ ನೆನಪಿಸಿಕೊಳ್ಳಬಹುದು.
ಓದಿ: ಮೀಸಲಾತಿಯ ಕುರಿತ ಸುಪ್ರೀಂ ತೀರ್ಪು ಅಪಾಯಕಾರಿಯಾದುದು.