Homeಎಲೆಮರೆಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ

ಜನಪದ ಹಾಡುಗಳನ್ನು ಯೂಟೂಬ್ ಮೂಲಕ ಕೋಟಿ ಜನರಿಗೆ ಮುಟ್ಟಿಸಿದ ರೇವಣಸಿದ್ಧ ದ್ಯಾಮಗೋಳ

ರೇವಣಸಿದ್ಧ ದ್ಯಾಮಗೋಳ ಒಂದು ಸಂಸ್ಥೆ, ವಿಶ್ವವಿದ್ಯಾಲಯ ಮಾಡಲಾರದಷ್ಟು ಕೆಲಸವನ್ನು ತಾವೊಬ್ಬರೆ ಮಾಡಿದ್ದಾರೆ. ಆಫ್‍ಲೈನಲ್ಲಿದ್ದ ನೂರಾರು ಅಜ್ಞಾತ ಜನಪದ ಕಲಾವಿದರನ್ನು ಆನ್‍ಲೈನ್ ಲೋಕಕ್ಕೆ ಪರಿಚಯಿಸಿದ್ದಾರೆ.

- Advertisement -
- Advertisement -

ಆ ಹುಡುಗ ಚಡಚಣದಲ್ಲಿ ಡಿಗ್ರಿ ಮುಗಿಸಿದ ನಂತರ ಬಿಜಾಪುರದ ಜಿಎಸ್‍ಎಸ್ ಕಾಲೇಜಿನಲ್ಲಿ ಬಿಎಡ್ ಪೂರೈಸಿ, ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ ತನ್ನ ಊರಾದ ಮೈಲಾರ ಎಂಬ ಚಿಕ್ಕ ಹಳ್ಳಿಯಲ್ಲಿದ್ದ. ಮನೆಯಲ್ಲಿ ತಂದೆ ಕಾಕಾ ಹಾಡಿಕಿ ಸಂಘದಲ್ಲಿದ್ದರು. ಡೊಳ್ಳಿನ ಪದ ಹಾಡತಿದ್ದರು. ಯಾರೋ ಮೊಬೈಲದಾಗ ಡೊಳ್ಳಿನ ಹಾಡ ಹಚ್ಚಿಕೊಟ್ಟರು. ಅಪ್ಪ ಮಗನಿಗೆ ‘ರೇವಣಸಿದ್ಧ ಈ ಮೊಬೈಲದಾಗ ಹಾಡ ಹೆಂಗ್ ಬಿಡತಾರು ನೋಡಿಕೋ’ ಎಂದರು. ಮಗನ ಗ್ಯಾನ ಮೊಬೈಲಿನ ಮ್ಯಾಲೆ ಬಿತ್ತು. ಹೀಗೆ ನೋಡ್ತಾ ನೋಡ್ತಾ ಪದಾನ ಮೊಬೈಲದಾಗ ಹೆಂಗ್ ಬಿಡ್ತಾರ ಅಂತ ತಿಳಕಂಡು ಆಗಸ್ಟ್ 6, 2017 ರಲ್ಲಿ ಯೂಟೂಬ್ ಅಕೌಂಟ್ ಕ್ರಿಯೇಟ್ ಮಾಡಿ, ತಾನೂ ತನ್ನ ಅಪ್ಪ ಕಕ್ಕರು ಹಾಡೋ ಹಾಡ ಮೊಬೈಲಿನ್ಯಾಗ ಬಿಡಾಕತ್ತಿದ.

ಇದೀಗ ಈ ಹುಡುಗ ಹೀಗೆ ಯೂಟೂಬಿಗೆ 1260 ವೀಡಿಯೋಗಳನ್ನು ಅಪ್ಲೋಡ್ ಮಾಡಿದ್ದಾನೆ, 87 ಸಾವಿರದಷ್ಟು ಚಂದಾದಾರರಿದ್ದಾರೆ, ಮೂರು ಕೋಟಿ ನಲವತ್ನಾಲ್ಕು ಲಕ್ಷದಷ್ಟು ವೀಕ್ಷಣೆ ಇದೆ. ಇದೀಗ ಜನಪದ ಹಾಡಿಕೆ ಮದ್ಯೆ ಜಾಹೀರಾತುಗಳು ಕಾಣಿಸಿಕೊಳ್ಳುತ್ತವೆ. ಯೂಟೂಬಿನಿಂದ ಪ್ರತಿ ತಿಂಗಳು ಕನಿಷ್ಠ ಹತ್ತು ಸಾವಿರ ಈ ಹುಡುಗನ ಅಕೌಂಟಿಗೆ ಜಮೆ ಆಗುತ್ತದೆ. ಇಂದು ಉತ್ತರ ಕರ್ನಾಟಕ ಹೈದರಬಾದ ಕರ್ನಾಟಕದ ಮುನ್ನೂರಕ್ಕಿಂತ ಹೆಚ್ಚು ಜನಪದ ಕವಿಗಳ ಹಾಡಿಕೆಯ, ಡೊಳ್ಳಿನ ಹಾಡು, ಭಜನೆ, ಮೊಹರಂ ಪದ, ಗೀಗೀ, ಸೋಬಾನೆ, ಚೌಡಕಿ ಪದ ಹೀಗೆ ಹಲವು ಜನಪದ ಪ್ರಕಾರಗಳ ಹಾಡುಗಳನ್ನು `ರೇವಣಸಿದ್ಧ ದ್ಯಾಮಗೋಳ್’ ಎನ್ನುವ ಯೂಟೂಬ್ ಚಾನಲ್ಲಿನಲ್ಲಿ ನೀವು ಕೇಳಬಹುದು.

ರೇವಣಸಿದ್ಧ ದ್ಯಾಮಗೋಳಗೆ ಈಗ 28 ವರ್ಷದ ಹರೆಯ. ಪುಟಿಯುವ ಉತ್ಸಾಹ. ಇಂಥ ಕಡೆ ಜನಪದ ಹಾಡಿಕೆ ಇದೆ ಎಂದು ಗೊತ್ತಾದರೆ, ಬೈಕಿಗೆ ಪೆಟ್ರೋಲ್ ತುಂಬಿಸಿ, ಟ್ರೈಪ್ಯಾಡ್ ತಗೊಂಡು ಹೊರಡುತ್ತಾನೆ. ಹಾಡಿಕೆ ಇರೋ ಕಡೆ ಹೋಗಿ, ಹಾಡಿಕೆ ಮಾಡುವ ಕಲಾವಿದರಿಗೆ ಕಾಣಿಕೆ ಸಲ್ಲಿಸಿ ಆಶೀರ್ವಾದ ತಗೊಳ್ತಾನೆ. ನನ್ನ ಬಗ್ಗೆ ಏನೂ ಹೇಳಬ್ಯಾಡ್ರಿ ಅಂದ್ರೂನು, ಹಾಡಿಕೆ ಆರಂಭಿಸುವ ಮುನ್ನ ಕಲಾವಿದರು `ರೇವಣಸಿದ್ಧ ದ್ಯಾಮಗೋಳ ಅವರು ತಮ್ಮ ಚಾನಲದಿಂದ ನಮ್ಮನ್ನ ಬೆಳಸ್ಯಾರ, ಬಾಳ ಪ್ರಚಾರ ಮಾಡ್ಯಾರ, ನಮಿಗೆ ಅವರ ಕಡೆಲಿಂದ ಬಾಳ ದುಡಿಮಿ ಆಗ್ಯಾತಿ, ಹಂಗಾಗಿ ಅವ್ರು ಬ್ಯಾಡ ಅಂದ್ರೂ ನಾವು ಅವರನ್ನ ನೆನಿಯೋದು ನಮ್ಮ ಧರ್ಮ ಐತಿ. ರೇವಣಸಿದ್ಧಪ್ಪರೋನ್ನ ದೇವರು ಆಯುಶ್ಯಾರೋಗ್ಯ ಕೊಟ್ ಚೆನ್ನಾಗಿ ಇಟ್ಟಿರಲಿ’ ಅಂತ ಹಾರೈಸುತ್ತಾರೆ. ಈ ಹುಡುಗ ನಾಚಿಕೆಯ ಮುದ್ದೆಯಾಗಿ ತಾನು ರೆಕಾರ್ಡ್ ಮಾಡುವುದರಲ್ಲಿ ತಲ್ಲೀನನಾಗುತ್ತಾನೆ.

ನಾನು ಗಮನಿಸಿದಂತೆ ಆಡಿಯೋ-ವೀಡಿಯೋ ಸಂಸ್ಥೆಗಳನ್ನು ಹೊರತುಪಡಿಸಿ ಹೀಗೆ ವೈಯಕ್ತಿಕ ನೆಲೆಯಲ್ಲಿ ಚಾನಲ್ ರೂಪಿಸಿ ಜನಪದ ಹಾಡಿಕೆ ವೀಡಿಯೋಗಳನ್ನು ಕೆಲವರು ಅಪ್ಲೋಡ್ ಮಾಡಿದ್ದಾರೆ. ಆದರೆ ಆ ಎಲ್ಲಾ ಚಾನಲ್ಲುಗಳಲ್ಲಿಯೇ ಅತಿಹೆಚ್ಚು ಚಂದಾದಾರಿಕೆ ಮತ್ತು ವೀಕ್ಷೆಣೆಯನ್ನು ದ್ಯಾಮಗೋಳ್ ಚಾನಲ್ ಹೊಂದಿದೆ. ಹಿಂದೆ ಆಡಿಯೋ ರೆಕಾರ್ಡ್ ಆಗಿದ್ದ ಕ್ಯಾಸೆಟ್‍ಗಳನ್ನು ತೆಗೆದುಕೊಂಡು, ಆ ಕ್ಯಾಸೆಟ್‍ನಲ್ಲಿ ಹಾಡಿದ ಕವಿಗಳ ಒಪ್ಪಿಗೆ ಪಡೆದು, ಕ್ಯಾಸೆಟ್ ಹಾಡಿಕೆಯನ್ನು ಎಂಪಿ-3 ಆಡಿಯೋ ಫೈಲನ್ನಾಗಿ ವರ್ಗಾಯಿಸಿಕೊಂಡು ಆ ನಂತರ, ಎಂಪಿ-3 ಪೈಲನ್ನು ವೀಡಿಯೋವಾಗಿ ರೂಪಾಂತರಿಸಲಾಗುತ್ತದೆ. ಇಂತಹ ಸಂದರ್ಭದಲ್ಲಿ ಕೆಸೆಟ್ಟಿನ ಪೋಸ್ಟರ್ ಅನ್ನು ವೀಡಿಯೋದ ಕವರ್ ಫೋಟೋವಾಗಿ ಬಳಸಲಾಗುತ್ತದೆ. ಆಗ ಕ್ಯಾಸೆಟ್ ಮೇಲಿನ ಮುಖ ಹೊದಿಕೆ, ಅದೇ ಹಾಡುಗಳ ವೀಡಿಯೋ ಮುಖಹೊದಿಕೆಯಾಗಿ ಬದಲಾಗುತ್ತದೆ.

ಹೀಗೆ ರೂಪಾಂತರಿಸುವಾಗ ಹಾಡಿಕೆ ಮಾಡಿದ ಕವಿಯ ಫೋಟೋ ಮತ್ತು ವೀಡಿಯೋದಲ್ಲಿಯೇ ಕವಿಯ ಮೊಬೈಲ್ ನಂಬರನ್ನು ಕೊಡಲಾಗುತ್ತದೆ. ಯೂಟೂಬಲ್ಲಿ ಈ ಹಾಡು ಕೇಳಿದವರು ಇಷ್ಟವಾದರೆ ಹಾಡಿಕೆ ತಂಡಕ್ಕೆ ಪೋನಚ್ಚಿ ಮಾತಾಡಿಸಿ ತಮ್ಮ ಊರಿನ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಾರೆ. `ಮೊದಲಾದರೆ ಹೀಗೆ ರೆಕಾರ್ಡ್ ಮಾಡಬೇಕಾದರೆ ಜನಪದ ಕಲಾವಿದರನ್ನೇ ರೆಕಾರ್ಡಿಂಗ್ ಸ್ಟುಡಿಯೋಕ್ಕೆ ಕರೆಯಿಸಬೇಕಿತ್ತು. ಹೀಗೆ ರೆಕಾರ್ಡ್ ಮಾಡಲು ಸ್ವತಃ ಜನಪದ ಕಲಾವಿದರೆ ರೆಕಾರ್ಡಿಂಗ್ ಕಂಪನಿಗಳಿಗೆ ಹಣ ಕೊಟ್ಟದ್ದೂ ಇದೆ. ಈಗ ಹಾಗಿಲ್ಲ. ನಾವೇ ಹಾಡುವಲ್ಲಿಗೆ ಹೋಗಿ ರೆಕಾರ್ಡ್ ಮಾಡಿಕೊಂಡು ಬಂದು ಯೂಟೂಬಿಗೆ ಹಾಕುತ್ತೇವೆ. ನಾನು ಅಪ್ಲೋಡ್ ಮಾಡಿದ್ದಕ್ಕಿಂತ ಒಳ್ಳೆಯ ಹಾಡುಗಳು ಇದಾವ್ ಸರ್, ಅಂತವುಗಳನ್ನೆಲ್ಲಾ ಸಂಗ್ರಹಿಸಬೇಕು ಅಂತ ಆಸೆ ಇದೆ’ ಎಂದು ರೇವಣಸಿದ್ಧ ಹೇಳುತ್ತಾರೆ.

ಮುಂದುವರಿದು `ನಮ್ಮ ಚಾನಲ್ ಫೇಮಸ್ ಆಗಿರೋದ್ರಿಂದ, ನಮ್ಮ ಚಾನಲದಾಗ ಹಾಡು ಹಾಕಿದ್ರೆ ಹೆಚ್ಚು ಪ್ರಚಾರ ಆಗಿ ಹಾಡಿಕಿ ಆರ್ಡರ್ ಸಿಗುತ್ತೆ ಅಂತೇಳಿ ಕೆಲವೊಮ್ಮೆ ಜನಪದ ಕಲಾವಿದರೆ ನಮ್ಮ ಹಾಡ ಯೂಟೂಬದಾಗ ಬಿಡರಿ ಅಂತೇಳಿ ಹಣ ಕೊಡೋಕೆ ಬರ್ತಾರೆ. ಆದರೆ ನಾನು ಯಾವ ಕಲಾವಿದರಿಂದಲೂ ಹಣ ಪಡೆಯೋಲ್ಲ. ಯೂಟೂಬಿಂದ ನನ್ನ ಕೆಲಸಕ್ಕೆ ಒಂದಷ್ಟು ಹಣ ಕೊಡ್ತಾರೆ. ಹಾಗಾಗಿ ನಿಮ್ಮಿಂದ ಹಣ ನಾನು ತಗೊಳ್ಳಲ್ಲ ಎಂದು ಹೇಳುತ್ತೇನೆ’ ಎಂದು ತನ್ನ ವೃತ್ತಿನಿಷ್ಠೆಯನ್ನು ವಿವರಿಸುತ್ತಾರೆ.

ಅವರು ಅಪ್‌ಲೋಡ್ ಮಾಡಿರುವ ಒಂದು ಹಾಡು ಕೇಳಿ

ಕಲ್ಬುರ್ಗಿ, ಅಫಜಲಫುರ, ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಮಹರಾಷ್ಟ್ರದ ಸಾಂಗಲಿ, ಜತ್ತ ಮೊದಲಾದ ಕಡೆಗಳ ಸುಮಾರು ಇನ್ನೂರಕ್ಕಿಂತ ಹೆಚ್ಚು ಜನಪದ ಹಾಡಿಕೆ ತಂಡಗಳು ರೇವಣಸಿದ್ಧ ಅವರಿಗೆ ಸಂಪರ್ಕವಿದೆ. ಶಿವರಾಯ ಮಾಸ್ತರ್, ಕಲ್ಮೇಶ, ಕೇದಾರ ಮಾಸ್ತರ್, ಗುರುಲಿಂಗ ಮಾಸ್ತರ ಸಂಕನಾಳ, ನಾಗೂರು ಲಕ್ಷ್ಮಣ, ಸುಮಿತ್ರಾ ಮುಗಳಿಹಾಳ, ಸಾವಿತ್ರಿ ಕಿರಣಗಿ, ಆಕಾಶ ಮನಗುಳಿ ಮುಂತಾದ ಜನಪ್ರಿಯ ಜನಪದ ಕವಿಗಳು ಪದಕಟ್ಟುವ ಬಗ್ಗೆ, ಹಾಡಿಕೆ ಬಗ್ಗೆ ರೇವಣಸಿದ್ಧ ಅಭಿಮಾನ ಇಟ್ಟುಕೊಂಡಿದ್ದಾರೆ. ರೇವಣಸಿದ್ಧ ಸದ್ಯಕ್ಕೆ ತಂದೆ ರಾಮಚಂದ್ರ, ತಾಯಿ ಕಮಲಾಬಾಯಿ, ಕಾಕಾ ಲಕ್ಷ್ಮಣ, ಅಣ್ಣಂದಿರಾದ ಶಿವಣ್ಣ ಮತ್ತು ಸಂತೋಷ್, ಒಂದು ವರ್ಷದ ಹಿಂದೆ ಮದುವೆಯಾದ ಪತ್ನಿ ಮೋನಿಕಾರೊಂದಿಗೆ ನೆಲೆಸಿ, ಹೈಸ್ಕೂಲ್ ಮೇಷ್ಟ್ರಾಗುವ ಕನಸೊತ್ತು ಸಿಇಟಿಗೆ ಅಗತ್ಯವಾದ ಓದು ಓದಿಕೊಂಡಿದ್ದಾರೆ.

ರೇವಣಸಿದ್ಧ ದ್ಯಾಮಗೋಳ ಒಂದು ಸಂಸ್ಥೆ, ವಿಶ್ವವಿದ್ಯಾಲಯ ಮಾಡಲಾರದಷ್ಟು ಕೆಲಸವನ್ನು ತಾವೊಬ್ಬರೆ ಮಾಡಿದ್ದಾರೆ. ಆಫ್‍ಲೈನಲ್ಲಿದ್ದ ನೂರಾರು ಅಜ್ಞಾತ ಜನಪದ ಕಲಾವಿದರನ್ನು ಆನ್‍ಲೈನ್ ಲೋಕಕ್ಕೆ ಪರಿಚಯಿಸಿದ್ದಾರೆ. ಎಷ್ಟೋ ಜನಪದ ಕಲಾ ತಂಡಗಳಿಗೆ ತಮ್ಮ ಚಾನಲ್ ಮೂಲಕ ಹಾಡಿಕೆಯ ಅವಕಾಶಗಳನ್ನು ಕಲ್ಪಿಸಿಕೊಟ್ಟು ನೆರವಾಗಿದ್ದಾರೆ. ಜಾನಪದ ಸಂಶೋಧಕರಿಗೆ/ಅಧ್ಯಯನಕಾರರಿಗೆ ಆಕರ ಒದಗಿಸಿದ್ದಾರೆ. ನನ್ನ ಪೋಸ್ಟ್ ಡಾಕ್ಟರಲ್ ಸಂಶೋಧನೆಯ ಭಾಗವಾಗಿ ಜನಪದ ಹಾಡಿಕೆ ಕೇಳುವಾಗಲೆ ನನಗೂ ರೇವಣಸಿದ್ಧ ಅವರು ಪರಿಚಯವಾದದ್ದು. ರೇವಣಸಿದ್ಧ ಅವರ ನಿರಂತರ ಶ್ರಮದ ಫಲವಾಗಿ ಯೂಟೂಬಿನಿಂದ ಒಂದಷ್ಟು ಹಣ ಸಂದಾಯವಾದರೂ, ಅದು ಅವರ ಶ್ರಮಕ್ಕೆ ಕಡಿಮೆಯೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯವಾಗಲಿ, ಕರ್ನಾಟಕದ ಜಾನಪದ ಪರಿಷತ್ತಾಗಲಿ, ಜಾನಪದ ಅಕಾಡೆಮಿಯಾಗಲಿ ಇಂಥವರನ್ನು ಗುರುತಿಸಬೇಕಿದೆ.

ಫೇಸ್ ಬುಕ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ

ರೇವಣಸಿದ್ಧ ದ್ಯಾಮಗೊಳ ಅವರ ಯೂಟೂಬ್ ಚಾನಲ್ ಲಿಂಕ್ ಗೆ ಇಲ್ಲಿ ಕ್ಲಿಕ್ ಮಾಡಿ

  • ಅರುಣ್ ಜೋಳದ ಕೂಡ್ಲಿಗಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅರುಣ್ ಸರ್,
    ನೀವೂ ಕೂಡ ಇಂಥ ಎಲೆಮರೆಯ ಪ್ರತಿಭೆಯನ್ನು ನಮಗೆ ಪರಿಚಯಿಸುವ ಮುಖಾಂತರ ಬೇರೆಯವರಿಗೂ ಸ್ಪೂರ್ತಿಯಾಗುವಂತ ರೇವಣಸಿದ್ಧರನ್ನು ಹುಡುಕಿ ಕೊಟ್ಟಿದ್ದೀರಿ.
    ಕಂಡಿತವಾಗಿಯೂ ಇಂಥ ಪ್ರತಿಭೆಗಳನ್ನು ಗುರುತಿಸಿ ಕರೆತಂದು ಇಡೀ ಲೋಕಕ್ಕೆ ಪರಿಚಯಿಸುಂಥ ಕೆಲಸ ವಿಶ್ವವಿದ್ಯಾಲಯ, ಅಕಾಡೆಮಿಗಳು ಮಾಡಲೆಎಬೇಕಾದ ಅನಿವಾರ್ಯತೆಯಿದೆ. ಇದು ಅವುಗಳ ಕರ್ತವ್ಯವೂ ಕೂಡ ಎಂದರೆ ತಪ್ಪಾಗದು.
    -ರಾಜಶೇಖರ ಚಂ.ಡೊಂಬರಮತ್ತೂರ
    ಹಾವೇರಿ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...