ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರೊಂದಿಗಿನ ವೈಮನಸ್ಸಿನ ಕಾರಣಕ್ಕಾಗಿ ಬಂಡಾಯವೆದ್ದಿರುವ ಉಪಮುಖ್ಯಮಂತ್ರಿ ಸಚಿನ್ ಪೈಲಟ್ 19 ಶಾಸಕರ ಬೆಂಬಲವೊಂದಿದ್ದು, ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
16 ಕಾಂಗ್ರೆಸ್ ಶಾಸಕರು ಮತ್ತು ಮೂವರು ಪಕ್ಷೇತರರ ಬೆಂಬಲದೊಂದಿಗೆ ದೆಹಲಿಯಲ್ಲಿ ಬೀಡುಬಿಟ್ಟಿರುವ ಸಚಿನ್ ಪೈಲಟ್ ಏಕಕಾಲದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು ಬಿಜೆಪಿ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ರಾಜಸ್ಥಾನದ ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಅವರು ಒಂದು ವೇಳೆ ಬಿಜೆಪಿ ಸಿಎಂ ಹುದ್ದೆ ನೀಡದಿದ್ದರೆ ಪ್ರಾದೇಶಿಕ ಪಕ್ಷ ಸ್ಥಾಪಿಸಲು ಮುಂದಾಲಿದ್ದಾರೆ ಎನ್ನಲಾಗುತ್ತಿದೆ.
ಮಧ್ಯಪ್ರದೇಶದಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಸಂದರ್ಭದಲ್ಲಿಯೇ ಸಚಿನ್ ಪೈಲಟ್ರವರನ್ನು ಬಿಜೆಪಿ ಸಂಪರ್ಕಿಸಿತ್ತು ಎನ್ನಲಾಗುತ್ತಿದೆ. ಆದರೆ ಕಳೆದ ಶುಕ್ರವಾರ ಸರ್ಕಾರವನ್ನು ಅಸ್ಥಿರಗೊಳಿಸುವ ಆರೋಪದ ಮೇಲೆ ವಿಶೇಷ ಕಾರ್ಯಾಚರಣೆ ಗುಂಪು ಸಚಿನ್ ಪೈಲಟ್ರನ್ನು ಪ್ರಶ್ನಿಸಿ ಸಮನ್ಸ್ ನೀಡಿದ್ದು ಅವರನ್ನು ಕೆರಳಿಸಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಗೃಹ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ರವರು ಒಂದು ಕರೆ ಮಾಡಿ ವಿಚಾರಣೆಗೆ ನೋಟಿಸ್ ನೀಡಿರುವುದಾಗಿ ತಿಳಿಸುತ್ತಾರೆ. ಇದು ಒಬ್ಬ ಉಪಮುಖ್ಯಮಂತ್ರಿಯನ್ನು ನಡೆಸುಕೊಳ್ಳವ ವಿಧಾನವೇ? ಎಂದು ಪೈಲಟ್ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ರವರನ್ನು ಭೇಟಿ ಮಾಡಿರುವ ಪೈಲಟ್ ಗೆಹ್ಲೋಟ್ ಜೊತೆಗಿನ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಪ್ರಾದೇಶಿಕ ಪಕ್ಷವನ್ನು ರಚಿಸಲು ಸಿದ್ಧನಿದ್ದೇನೆ ಮತ್ತು ಬಿಜೆಪಿಗೆ ಸೇರುವುದಿಲ್ಲ ಎಂದು ಸಚಿನ್ ಪೈಲಟ್ ಕಾಂಗ್ರೆಸ್ ಹೈಕಮಾಂಡ್ಗೆ ಸೂಚಿಸಿದ್ದಾರೆ ಕಾಂಗ್ರೆಸ್ ಹಿರಿಯ ಮುಖಂಡರು ತಿಳಿಸಿದ್ದಾರೆ. ಅದೇ ಸಮಯದಲ್ಲಿ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಸಿಎಂ ಸ್ಥಾನ ಕೊಟ್ಟರೆ ಮಾತ್ರ ಬೆಂಬಲ ಎಂದಿದ್ದಾರೆ ಎನ್ನಲಾಗಿದೆ.
ಸಚಿನ್ ಪೈಲಟ್ಗೆ ಮುಖ್ಯಮಂತ್ರಿ ಹುದ್ದೆ ನೀಡುವುದನ್ನು ಬಿಜೆಪಿ ತಳ್ಳಿಹಾಕಿದೆ ಎಂದು ಮೂಲಗಳು ತಿಳಿಸಿವೆ. ಇದು ಆಂತರಿಕ ನಾಯಕತ್ವದ ಸಮಸ್ಯೆಗಳನ್ನು ಹುಟ್ಟುಹಾಕಲಿದೆ ಎಂಬುದು ಬಿಜೆಪಿ ಲೆಕ್ಕಾಚಾರ. ಆದರೂ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆಗೆ 45 ಶಾಸಕರ ಬೆಂಬಲವಿದ್ದು, ಅವರ ಮೊದಲ ಆದ್ಯತೆ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಉರುಳಿಸುವುದು ಎಂದು ಮೂಲಗಳು ತಿಳಿಸಿವೆ.
ಸಚಿನ್ ಪೈಲಟ್ ಪ್ರಶ್ನಿಸಲು ಆದೇಶ ಹೊರಡಿಸಿದ್ದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಅಶೋಕ್ ಗೆಹ್ಲೋಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ. “ಸೋನಿಯಾ ಮತ್ತು ರಾಹುಲ್ ಗಾಂಧಿ ಇಬ್ಬರಿಗೂ ಪರಿಸ್ಥಿತಿಯ ಬಗ್ಗೆ ವಿವರಿಸಲಾಗಿದೆ. ಮಧ್ಯಪ್ರದೇಶದ ಪರಿಸ್ಥಿತಿ ಇಲ್ಲಿ ಮರಕಳಿಸಲು ನಾವು ಅನುಮತಿಸುವುದಿಲ್ಲ” ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.
ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ರಾತ್ರಿ ಎಲ್ಲಾ ಕಾಂಗ್ರೆಸ್ ಶಾಸಕರ ಸಭೆಯನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕರೆದಿದ್ದಾರೆ.
ಇದನ್ನೂ ಒದಿ: ರಾಜಸ್ಥಾನದಲ್ಲಿ ಆಪರೇಷನ್ ಕಮಲ; ಹಲವು ಕಾಂಗ್ರೆಸ್ ಶಾಸಕರೊಂದಿಗೆ ದೆಹಲಿಯಲ್ಲಿ ಸಚಿನ್ ಪೈಲಟ್