ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಉದ್ಭವಿಸಿರುವ ನಡುವೆಯೇ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಹನ್ನೆರೆಡು ಬೆಂಬಲಿಗರ ನಿವಾಸಗಳ ಮೇಲೆ ಐಟಿ ದಾಳಿ ನಡೆದಿದೆ. ಭಾರಿ ಮೊತ್ತದ ಹಣಕಾಸು ವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿಗೆ ಕಾರಣ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ಬಂಗಾರದ ವ್ಯಾಪಾರಿ ರಾಜೀವ್ ಆರೋರ, ಉದ್ಯಮಿ ಧರ್ಮೇಂದ್ರ ರಾಥೋರ್ ಸೇರಿದಂತೆ 12 ಮಂದಿ ಕಾಂಗ್ರೆಸ್ ಮುಖಂಡರು ಮತ್ತು ಬೆಂಬಲಿಗರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಇಂದು ಮುಂಜಾನೆಯೇ ದೆಹಲಿ, ಜೈಪುರ, ಮುಂಬೈ, ಕೋಟ ನಿವಾಸಗಳ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದಾರೆ.
ಭಾರೀ ಪ್ರಮಾಣದ ಹಣಕಾಸು ವ್ಯವಹಾರ ನಡೆದಿರುವ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ೆಎಂದು ಮೂಲಗಳು ತಿಳಿಸಿವೆ.
ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳ ದಾಳಿ ನಡೆಸಿರುವುದನ್ನು ಕಾಂಗ್ರೆಸ್ ಮುಖಂಡರು ಖಂಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮಾಧ್ಯಮ ವಕ್ತಾರ ರಣದೀಫ್ ಸುರ್ಜಿವಾಲ್ ಇದೊಂದು ರಾಜಕೀಯ ಪ್ರೇರಿತ ದಾಳಿ. ಕೇಂದ್ರದ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
ಈ ನಡುವೆ ರಾಜಸ್ಥಾನದ ಜೈಪುರದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕರೆದಿರುವ ಸಭೆಗೆ 80 ಶಾಸಕರು ಪಾಲ್ಗೊಂಡಿದ್ದು, ಒಟ್ಟು 109 ಮಂದಿ ಶಾಸಕರು ಗೆಹ್ಲೋಟ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಮುಖಂಡರಾದ ಜಯ್ ಮಾಕನ್, ರಣದೀಪ್ ಸುರ್ಜಿವಾಲ್ ಮೊದಲಾದ ನಾಯಕರು ಜೈಪುರದಲ್ಲಿ ಮೊಕ್ಕಾಂ ಹೂಡಿದ್ದು ಸರ್ಕಾರ ಉಳಿಸಿಕೊಳ್ಳಲು ಸತಪ್ರಯತ್ನ ಮುಂದುವರಿಸಿದ್ದಾರೆ.
ಓದಿ:ರಾಜಸ್ಥಾನದಲ್ಲಿ ಆಪರೇಷನ್ ಕಮಲ; ಸಂಪೂರ್ಣ ವಿವರ