Homeಸಾಮಾಜಿಕಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

ಉಸಿರು ಕಟ್ಟಿಸುವ ಹೊಗೆ: ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ

- Advertisement -
- Advertisement -

ಡಾ.ಎಚ್.ಎಸ್.ಅನುಪಮ |

೨೦೧೮ರ ನವೆಂಬರ್ ಕೊನೆಯ ವಾರ ಭಾರತಕ್ಕೆ ಬಂದಿದ್ದ ಟ್ವಿಟರ್ ಸಿಇಒ ಜಾಕ್ ಡಾರ್ಸ್ ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ನಾಶವಾಗಲಿ’ (ಸ್ಮಾಷ್ ಬ್ರಾಹ್ಮಿನಿಕಲ್ ಪೇಟ್ರಿಯಾರ್ಕಿ) ಎಂಬ ಪೋಸ್ಟರನ್ನು ಕೈಲಿ ಹಿಡಿದು ಕೆಲವು ಭಾರತೀಯ ಪತ್ರಕರ್ತೆಯರ ಜೊತೆ ಫೋಟೋಗೆ ನಿಂತರು. ಈ ನೆಲದ ಎಲ್ಲ ವಿಕಾರ-ವಿಪರ್ಯಾಸಗಳ ಮೂಲಕಾರಣವಾಗಿರುವ, ವಿಶ್ವದ ಯಾವ ಸಮಾಜವೂ ಕೇಳರಿಯದಷ್ಟು ಅನಿರ್ಬಂಧಿತ, ಏಕಮುಖಿ ಅಧಿಕಾರ-ಸುಖಸವಲತ್ತನ್ನು ಬ್ರಾಹ್ಮಣರಿಗೆ, ಎಲ್ಲ ಪುರುಷರಿಗೆ ನೀಡಿರುವ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಕುರಿತು ಜಾಕ್‌ಗೆ ಗೊತ್ತಿತ್ತೋ ಇಲ್ಲವೋ, ಆದರೆ ಪೋಸ್ಟರ್ ಹಿಡಿದು ನಿಂತ ಫೋಟೋ ನೋಡಿದ್ದೇ ತಡ, ದಾರವಂತರು ಕೆರಳಿಹೋದರು. ಅಂಕಣಕಾರ್ತಿ ಸ್ಮಿತಾ ಬರೂವಾ, ಮಣಿಪಾಲ ಸಮೂಹ ಸಂಸ್ಥೆಗಳ ಮೋಹನದಾಸ ಪೈ, ಬಾಲಿವುಡ್ ಚಿತ್ರಕತೆಗಾರರಾದ ಅದ್ವೈತ್ ಕಲಾ, ರಿಪಬ್ಲಿಕ್ ಟಿವಿಯ ಚಿತ್ರಾ ಸುಬ್ರಹ್ಮಣಿಯನ್, ಲೇಖಕ ಹಿಂದೋಳ್ ಸೇನ್‌ಗುಪ್ತ ಮೊದಲಾದವರು ಈ ಘಟನೆಯನ್ನು ‘ಜನಾಂಗ ದ್ವೇಷ’, ‘ಜಾತಿ ನಿಂದನೆ’ ಎನ್ನುವಂತೆ ಬಿಂಬಿಸಿದರು. ಭಾರತೀಯ ಪತ್ರಿಕೋದ್ಯಮದ 49% ಉಚ್ಛ ಸ್ಥಾನಗಳನ್ನು ತುಂಬಿರುವ ‘ಅಲ್ಪಸಂಖ್ಯಾತ’ ಬ್ರಾಹ್ಮಣರು ಹಾಗೂ ಅನಿವಾಸಿ ಜಾಲಿಗ ಬ್ರಾಹ್ಮಣರು ಟ್ವಿಟರಿನಲ್ಲಿ ಧೂಳೆಬ್ಬಿಸಿ, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎನ್ನುವುದೆಲ್ಲ ಸ್ತ್ರೀವಾದಿಗಳ ಕುತರ್ಕ, ಎಲ್ಲಿದೆ ಅವೆಲ್ಲ? ಎಂದು ಬೊಬ್ಬೆ ಹಾಕಿದರು.

‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆಯೆ! ಅಹಹ, ಹೊಗೆ ದೆಹಲಿಯನ್ನು ಆವರಿಸಿರುವಂತೆ ಈ ದೇಶದ ಜೀವಜಂತುಗಳ ಉಸಿರುಕಟ್ಟಿಸಿರುವುದೇ ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಮತ್ತೇನೂ ಬೇಡ, ತಮ್ಮದೇ ಜಾತಿಯ ನಿಷ್ಪಾಪಿ ವಿಧವೆಯರು, ಪರಿತ್ಯಕ್ತೆಯರು, ಅಡುಗೆ ಕೋಣೆಯಲ್ಲಿ ಬೇಯುವ ತಾಯಂದಿರನ್ನು ನೆನಪಿಸಿಕೊಂಡಿದ್ದರೂ ಸಾಕಿತ್ತು, ‘ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ’ ಎಲ್ಲಿದೆ ಎಂದು ಗೊತ್ತಾಗುತ್ತಿತ್ತು. ಆದರೆ ಜಾತಿ ಅಭಿಮಾನ ಅವರನ್ನು ಎಷ್ಟು ಕುರುಡಾಗಿಸಿತು ಎಂದರೆ ತಮ್ಮ ಜಾತಿಯ ಹೆಣ್ಣುಗಳನ್ನೂ ಸೇರಿದಂತೆ ಬಾಧಿಸುತ್ತಿರುವ ಒಂದು ಕೇಡನ್ನು ಕಣ್ಣು ತೆರೆದು ನೋಡುವುದೂ ಅಸಾಧ್ಯವಾಯಿತು.

ಏನಿದು ಬ್ರಾಹ್ಮಣೀಯ ಪಿತೃಪ್ರಧಾನತೆ?

ಜೈವಿಕವಾಗಿ ಗಂಡುಹೆಣ್ಣುಗಳ ನಡುವೆ ಕೆಲವು ಭಿನ್ನತೆಗಳಿವೆ, ಹಾಗೆಯೇ ಅನನ್ಯತೆಗಳಿವೆ. ದೈಹಿಕ ಭಿನ್ನತೆಯನ್ನೇ ಮುಂದಿಟ್ಟುಕೊಂಡು ಸಮಾನತೆ, ಸ್ವಾತಂತ್ರ್ಯ, ಪೌರ ಹಕ್ಕುಗಳಿಂದ ಹೆಣ್ಣನ್ನು ವಂಚಿಸುವ ವ್ಯವಸ್ಥೆ ಪಿತೃಪ್ರಾಧಾನ್ಯತೆ. ಹೊಸ ಜೀವವನ್ನು ಹೆರುವ ಶಕ್ತಿಯಿರುವ, ಜೀವ ಪೊರೆವ ಆಹಾರವಾಗಿ ಮೊಲೆಹಾಲು ಸ್ರವಿಸಬಲ್ಲ ಹೆಣ್ಣೆಂಬ ಅದ್ಭುತವನ್ನು ತನ್ನ ಅಂಕೆಯಲ್ಲಿಟ್ಟುಕೊಳ್ಳಲು ಯತ್ನಿಸದ ಗಂಡು ಸಮುದಾಯವೇ ಇಲ್ಲ. ಹೆಣ್ಣನ್ನು ಅಂಕೆಯಲ್ಲಿಟ್ಟುಕೊಳ್ಳುವ ಪ್ರಯತ್ನಗಳಿಗೆ ಮನ್ನಣೆ ಪಡೆಯುವ ಸಲುವಾಗಿ, ಅದಕ್ಕೆ ಧಾರ್ಮಿಕ ಸಮ್ಮತಿ ಇದೆ ಎಂಬಂತೆ ಬಿಂಬಿಸುವ ಹುನ್ನಾರವಾಗಿ ಮೊದಲು ಅವಳ ಧಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸಲಾಯಿತು. ಅದಕ್ಕಾಗಿ ಪುರಾಣ, ಕಟ್ಟುಕತೆ, ಐತಿಹ್ಯಗಳ ಸೃಷ್ಟಿಸಲಾಯಿತು. ನಂತರ ಸಾಮಾಜಿಕ, ರಾಜಕೀಯ ಅವಕಾಶಗಳನ್ನು ಕಡಿತಗೊಳಿಸಲಾಯ್ತು. ಕಾಲಕಾಲಕ್ಕೆ ಹೊಸಪ್ರಶ್ನೆಗಳು ಏಳತೊಡಗಿದಾಗ ಅವುಗಳನ್ನು ಹತ್ತಿಕ್ಕಲು ಹೊಸಹೊಸ ಆಚರಣೆಗಳ ಜಾರಿಗೊಳಿಸಲಾಯ್ತು.

ಇದುವೆ ಪಿತೃಪ್ರಾಧಾನ್ಯ ಅಥವಾ ಗಂಡು ಮೇಲರಿಮೆ. ಪಿತೃಪ್ರಾಧಾನ್ಯ ವಿಶ್ವದ ಬಹುತೇಕ ಸಮಾಜಗಳಲ್ಲಿ ಚಾಲ್ತಿಯಲ್ಲಿದೆ. ಇದು ಜಾಕ್ ಪ್ರತಿನಿಧಿಸುವ ಸಮಾಜಕ್ಕೂ, ಅವರು ಪ್ರತಿನಿಧಿಸುವ ಸಂಸ್ಥೆಗೂ ಅನ್ವಯಿಸುತ್ತದೆ. ಮುಂದುವರಿದ ಪಾಶ್ಚಾತ್ಯ ಸಮಾಜಗಳಲ್ಲೂ ನಾನಾ ಲಿಂಗಾಧಾರಿತ ತಾರತಮ್ಯಗಳು ಇವತ್ತಿಗೂ ಚಾಲ್ತಿಯಲ್ಲಿವೆ. ಬಹುಪಾಲು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಲಿಂಗಾಧಾರಿತ ಉದ್ಯೋಗ ತಾರತಮ್ಯ, ವೇತನ ತಾರತಮ್ಯ ಮುಂದುವರೆದಿದೆ. ಹಾಗಾಗಿ ಜಾಕ್ ಆ ಪೋಸ್ಟರ್ ಹಿಡಿಯುವ ಮೂಲಕ ತಮ್ಮ ಸಮಾಜ-ಕಂಪನಿಯ ಪಿತೃಪ್ರಾಧಾನ್ಯ ಕೊನೆಗೊಳಿಸಲು ಮುಂದಾಗುವ ಇಚ್ಛೆ ಹೊಂದಿದ್ದಲ್ಲಿ ಅದು ಸ್ವಾಗತಾರ್ಹ ಎನ್ನಬಹುದು.

ಆದರೆ ಅವರ ಪೋಸ್ಟರು ಕೆಲವು ಭಾರತೀಯರನ್ನು ಕೆರಳಿಸಲು ಕಾರಣ ಅದರಲ್ಲಿದ್ದ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎಂಬ ಪದ. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ, ಒಂದು ಶೋಷಕ ಮನಸ್ಥಿತಿಯ ಪ್ರತೀಕವಾದ ಪದದ ಮೊದಲೆರೆಡು ಅಕ್ಷರಗಳನ್ನು ತಮ್ಮ ಜಾತಿಯ ಹೆಸರಲ್ಲಿಟ್ಟುಕೊಂಡವರು ತಮ್ಮನ್ನೇ ನಿಂದಿಸಿದಂತೆ ಕೆರಳಿದರು. ಆ ಬ್ರಹ್ಮಜ್ಞಾನಿಗಳಿಗೆ ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನುವುದು ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದವರನ್ನು ಬೈಯಲು ರೂಪಿಸಿದ ಪದವಲ್ಲ, ಬದಲಾಗಿ ಅದೊಂದು ಮನಸ್ಥಿತಿ; ಈ ದೇಶದ ಹೆಣ್ಣುಗಳನ್ನು, ಅಧಿಕಾರಹೀನರನ್ನು ತುಳಿಯಲು ಮಾಡಿಕೊಂಡ ಒಂದು ದುಷ್ಟ ಚೌಕಟ್ಟು ಎಂದು ಅರ್ಥವೇ ಆಗಲಿಲ್ಲ. ದಾರವಂತರು ತಿಳಿಯಲಿ: ಜಾತಿ-ಲಿಂಗದ ಕಾರಣವಾಗಿ ಮನುಷ್ಯರನ್ನು ಕೀಳಾಗಿ ನಡೆಸಿಕೊಳ್ಳುವುದು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ನಿರಾಕರಿಸುವುದು, ತಾನು ಶ್ರೇಷ್ಠ ಎಂಬ ಜಾತಿ/ಲಿಂಗ ಮೇಲರಿಮೆಯನ್ನು ಉಳಿದವರ ಮೇಲೆ ಹೇರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯ. ಅದು ಈ ನೆಲದ, ಸಂವಿಧಾನದ ಆಶಯಗಳಿಗೆ ವಿರುದ್ಧ. ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆಯ ನಾಶ ಎಂದರೆ ಬ್ರಾಹ್ಮಣರ ನಾಶವಲ್ಲ; ಜಾತಿ ಮೇಲರಿಮೆಯ ನಾಶ.

ಭಾರತದ ಪಿತೃಪ್ರಾಧಾನ್ಯತೆಯನ್ನು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನ್ನಲು ಕಾರಣಗಳಿವೆ. ಪಿತೃಪ್ರಾಧಾನ್ಯವನ್ನು ಭಾರತದಲ್ಲಿ ಮತ್ತಷ್ಟು ಅಸಹನೀಯಗೊಳಿಸಿರುವುದು ಮತ್ತು ದುಷ್ಟಗೊಳಿಸಿರುವುದು ಇಲ್ಲಿನ ಜಾತಿವ್ಯವಸ್ಥೆ. ಅದು ಎರಡಲಗಿನ ಕತ್ತಿಯಾಗಿ ಈ ದೇಶದ ಹೆಣ್ಣುಗಳ ಘನತೆಯ ಬದುಕಿಗೆ ಎರವಾಗಿದೆ. ಭಾರತದ ಜಾತಿಪದ್ಧತಿಯು ನಡತೆ, ವ್ಯಕ್ತಿತ್ವ, ಸಾಧನೆ, ಉದಾತ್ತತೆ ಮುಂತಾದ ಗುಣಗಳಿಂದ ಅಲ್ಲ; ಹುಟ್ಟಿನಿಂದ ಬ್ರಾಹ್ಮಣರನ್ನು ಶ್ರೇಷ್ಠರೆಂದು ವರ್ಗೀಕರಿಸಿದೆ. ಅವರಿಗೆ ಎಲ್ಲ ವಿಶೇಷ ಸವಲತ್ತು, ಮೀಸಲಾತಿಗಳನ್ನು ಪ್ರಶ್ನಾತೀತವಾಗಿ ಕೊಟ್ಟಿದೆ. ಹುಟ್ಟಿನಿಂದಲೇ ಯಾವುದಾದರೂ ಮೇಲು ಅಥವಾ ಕೀಳೆಂದು ನಿರ್ಧಾರ ಮಾಡುವುದು ಪ್ರಕೃತಿ ವಿರೋಧಿ ತತ್ವ. ಆದರೆ ಜಾತಿಹೆಮ್ಮೆ, ಜಾತಿಪ್ರಜ್ಞೆ, ಜಾತಿ ಶ್ರೇಷ್ಠತೆಯ ವ್ಯಸನಗಳು ಬ್ರಾಹ್ಮಣರ ನಂತರದವೆಂದು ಗುರುತಿಸಲ್ಪಟ್ಟ ಸಾವಿರಾರು ಜಾತಿಗಳಿಗೂ ಹಾಗೇ ಸೋಸಿಕೊಂಡು ಇಳಿಯಿತು. ಅಂಬೇಡ್ಕರ್ ಮನೋಜ್ಞವಾಗಿ ವಿಶ್ಲೇಷಿಸಿರುವಂತೆ ಭಾರತದ ಪ್ರತಿಜಾತಿಯೂ ತಾನು ಮತ್ತೊಂದು ಜಾತಿಗಿಂತ ಶ್ರೇಷ್ಠ ಎಂಬ ಹಿರಿಮೆಯಲ್ಲಿ ಕೆಳಗಿನ ಜಾತಿಯನ್ನು ತುಳಿಯುವುದರಲ್ಲಿ ಮೇಲಿನ ಜಾತಿಯ ತುಳಿತವನ್ನು ಮರೆಯುತ್ತದೆ. ಹೀಗೆ ಬ್ರಾಹ್ಮಣ್ಯವು – ಎಂದರೆ ಅಸಮಾನತೆಯ ಉತ್ಸಾಹ, ಜಾತಿ ಮೇಲರಿಮೆ, ಜನ್ಮಜಾತ ಜಾತಿಅಸ್ಮಿತೆಗಳು – ಪ್ರತಿಜಾತಿಗೂ ಸೋಸಿಕೊಂಡು ಇಳಿದಿವೆ. ಬ್ರಾಹ್ಮಣ್ಯ ಮತ್ತು ಪಿತೃಪ್ರಾಧಾನ್ಯ ಸೇರಿ ಪ್ರತಿ ಜಾತಿಯ ಹೆಣ್ಣುಗಳನ್ನೂ ಬಾಧಿಸುತ್ತಿರುವುದು ಬ್ರಾಹ್ಮಣೀಯ ಪಿತೃಪ್ರಾಧಾನ್ಯತೆ ಎನಿಸಿಕೊಂಡಿದೆ. ಭಾರತದ ಪ್ರತಿಜಾತಿಯಲ್ಲೂ, ಪ್ರತಿಧರ್ಮದಲ್ಲೂ ಪಿತೃಪ್ರಾಧಾನ್ಯವಿದೆ; ಪಿತೃಪ್ರಾಧಾನ್ಯತೆ ಅಷ್ಟೇ ಅಲ್ಲ, ಬ್ರಾಹ್ಮಣೀಯ ಪಿತೃಪ್ರಾಧಾನ್ಯವಿದೆ.

ಅಂಬೇಡ್ಕರರು ಹೇಳಿದ್ದು 

ಅಂಬೇಡ್ಕರರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಜಿಐಪಿ ರೈಲ್ವೇ ವರ್ಕ್‌ಮೆನ್ಸ್ ಕಾನ್ಫರೆನ್ಸ್‌ನಲ್ಲಿ ಇಂಡಿಪೆಂಡೆಂಟ್ ಲೇಬರ್ ಪಾರ್ಟಿ ಅಧ್ಯಕ್ಷರಾಗಿ ಹಾಗೂ ಸಮ್ಮೇಳನದ ಅಧ್ಯಕ್ಷರಾಗಿ ಮಾತನಾಡುತ್ತ ೧೯೩೮ರಲ್ಲಿ ಮನೋಜ್ಞವಾಗಿ ಹೇಳಿದ್ದು ಗಮನಾರ್ಹವಾಗಿದೆ:

” ‘ಬ್ರಾಹ್ಮಣಿಕೆಯು ಪರಿಗಣಿಸಲೇಬೇಕಾದ ಶತ್ರು’ ಎಂಬ ನನ್ನ ಹೇಳಿಕೆ ಅಪಾರ್ಥಕ್ಕೊಳಗಾಗುವುದು ನನಗಿಷ್ಟವಿಲ್ಲ. ಬ್ರಾಹ್ಮಣಿಕೆಯೆಂದರೆ ಒಂದು ಸಮುದಾಯವಾಗಿ ಬ್ರಾಹ್ಮಣರ ಶಕ್ತಿ, ಅಧಿಕಾರ, ಅವಕಾಶ, ಆಸಕ್ತಿಯೆಂದಷ್ಟೇ ನಾನು ತಿಳಿಯುವುದಿಲ್ಲ. ಬ್ರಾಹ್ಮಣಿಕೆಯೆಂದರೆ ಸ್ವಾತಂತ್ರ್ಯ, ಸೋದರತೆ, ಸಮಾನತೆಯನ್ನು ನಾಶ ಮಾಡುವ ಶಕ್ತಿ. ಈ ಅರ್ಥದಲ್ಲಿ ಎಲ್ಲ ಜಾತಿ-ವರ್ಗಗಳಲ್ಲೂ ಬ್ರಾಹ್ಮಣಿಕೆಯಿದೆ ಮತ್ತು ಇದನ್ನು ಹುಟ್ಟುಹಾಕಿದವರು ಬ್ರಾಹ್ಮಣರಾದರೂ ಅವರಿಗಷ್ಟೇ ಇದು ಸೀಮಿತವಾಗಿಲ್ಲ. ಎಲ್ಲ ಕಡೆ ಕಾಣುವ, ಎಲ್ಲರ ಯೋಚನೆ-ಕ್ರಿಯೆಯನ್ನು ಹಿಡಿತದಲ್ಲಿಟ್ಟುಕೊಂಡಿರುವುದು ಇದೇ ಬ್ರಾಹ್ಮಣಿಕೆಯೆಂಬುದು ಅವಿವಾದಿತ ಸತ್ಯ. ಇದು ಕೆಲವರಿಗಷ್ಟೇ ಹೆಚ್ಚು ಅವಕಾಶ ಮಾಡಿಕೊಡುತ್ತದೆಂಬುದೂ ವಿವಾದಾತೀತ ಸಂಗತಿ. ಕೆಲ ವರ್ಗಗಳಿಗೆ ಇದು ಅವಕಾಶಗಳಲ್ಲಿ ಸಮಾನತೆಯನ್ನು ನಿರಾಕರಿಸುತ್ತದೆ. ಬ್ರಾಹ್ಮಣಿಕೆಯು ಅಂತರ್ಜಾತಿ ಭೋಜನ, ಅಂತರ್ಜಾತಿ ವಿವಾಹಗಳಂಥ ಸಾಮಾಜಿಕ ಹಕ್ಕುಗಳನ್ನು ತಡೆಯುವುದಕ್ಕಷ್ಟೇ ಸೀಮಿತವಾಗಿಲ್ಲ. ಅದು ಪೌರ ಹಕ್ಕುಗಳಿಗೂ ವಿಸ್ತರಿಸುತ್ತದೆ… ಕೋಟಿಗಟ್ಟಲೆ ಜನರಿಗೆ ಪೌರ ಹಕ್ಕುಗಳನ್ನು ನಿರಾಕರಿಸಲಾಗಿದೆ. ಸಾವಿರಾರು ವರ್ಷಗಳಿಂದ ಆಚರಣೆಯಲ್ಲಿರುವ, ಈಗಲೂ ಉರಿಯುವ ಕೊಳ್ಳಿಯಂತೆ ಜೀವಂತವಾಗಿರುವ ಬ್ರಾಹ್ಮಣಿಕೆಯೇ ಇಂದಿನ ಸಮಸ್ಯೆಗಳಿಗೆ ಕಾರಣವೆಂಬುದನ್ನು ಯಾರಾದರೂ ಸಂಶಯಿಸಲು ಸಾಧ್ಯವೆ?

ಬ್ರಾಹ್ಮಣಿಕೆ ಎಂದರೆ ಅಸಮಾನತೆಯ ಉತ್ಸಾಹ.. ಬ್ರಾಹ್ಮಣ್ಯವು ಜೀವಂತ ಶಕ್ತಿಯಾಗಿರುವ ತನಕ, ಅದು ಕೊಡುವ ಸವಲತ್ತಿಗಾಗಿ ಕೆಲವರು ಬ್ರಾಹ್ಮಣ್ಯಕ್ಕೆ ಅಂಟಿಕೊಂಡಿರುವ ತನಕ ಅದರಿಂದ ತೊಂದರೆಗೊಳಗಾದವರು ಸಂಘಟಿತರಾಗಲೇಬೇಕಾಗಿದೆ. ಹಾಗೆ ಅದರ ವಿರುದ್ಧ ಸಂಘಟಿತರಾಗುವುದರಲ್ಲಿ ತಪ್ಪೇನಿದೆ?”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...