ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಅದರ ಅಪನಿರ್ವಹಣೆಯ ಬಗ್ಗೆ ಕೇಂದ್ರ ಸರ್ಕಾರದ ಮೇಲಿನ ಆರೋಪಗಳ ಕುರಿತು ತನಿಖೆ ನಡೆಸಲು ಆಯೋಗವನ್ನು ನೇಮಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಎಸ್. ರವೀಂದ್ರ ಭಟ್ ಮತ್ತು ಎಲ್.ನಾಗೇಶ್ವರ ರಾವ್ ನೇತೃತ್ವದ ನ್ಯಾಯಪೀಠವು ಈ ಆರೋಪಗಳ ಬಗ್ಗೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಸಾಂಕ್ರಾಮಿಕ ಪಿಡುಗಿನ ತುರ್ತು ಪರಿಸ್ಥಿತಿಯಲ್ಲಿ ನ್ಯಾಯಾಂಗವು ಕಾರ್ಯನಿರ್ವಾಹಕ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂಬ ಅಭಿಪ್ರಾಯ ವಿಶ್ವದಾದ್ಯಂತ ಇದೆ ಎಂದು ಕೋರ್ಟ್ ಹೇಳಿದೆ.
ನಿವೃತ್ತ ಅಧಿಕಾರಿಗಳು ಸೇರಿದಂತೆ ಆರು ಮಂದಿ ಅರ್ಜಿದಾರರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ವೈರಸ್ ಹರಡುವಿಕೆಯನ್ನು ತಡೆಗಟ್ಟಲು, ಸಮಯೋಚಿತ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸಲ್ಲಿಸಲಾದ ಈ ಅರ್ಜಿಯಲ್ಲಿ, ಸಾಂಕ್ರಾಮಿಕ ರೋಗಕ್ಕೆ ಕೇಂದ್ರದ ಪ್ರಕ್ರಿಯೆಗಳು, ನಾಗರಿಕರ ಜೀವನ ಮತ್ತು ಜೀವನೋಪಾಯದ ಮೇಲೆ ಅದರ ಹಾನಿಕಾರಕ ಪರಿಣಾಮಗಳು, ಸಾರ್ವಜನಿಕ ಪ್ರಾಮುಖ್ಯತೆಯ ಒಂದು ನಿರ್ದಿಷ್ಟ ವಿಷಯವಾಗಿದೆ. ಹಾಗಾಗಿ ಇದರ ತನಿಖೆಗೆ ಆಯೋಗದ ನೇಮಕಾತಿ ಅವಶ್ಯಕ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಮಾರ್ಚ್ 25 ರಿಂದ ಪ್ರಾರಂಭವಾದ ರಾಷ್ಟ್ರವ್ಯಾಪಿ ಲಾಕ್ಡೌನ್ ಮತ್ತು ಅದನ್ನು ಜಾರಿಗೆ ತಂದ ವಿಧಾನವು, ಸಾರ್ವಜನಿಕರ ಉದ್ಯೋಗಗಳು ಮತ್ತು ಜೀವನೋಪಾಯ, ವಲಸೆ ಕಾರ್ಮಿಕರು ಹಾಗೂ ಒಟ್ಟಾರೆ ಆರ್ಥಿಕತೆಯ ಮೇಲೆ ವಿನಾಶಕಾರಿ ಪರಿಣಾಮ ಬೀರಿದೆ ಎಂದು ಅರ್ಜಿದಾರರು ವಾದಿಸಿದ್ದರು.
ತಜ್ಞರು ಮತ್ತು ರಾಜ್ಯ ಸರ್ಕಾರಗಳೊಂದಿಗೆ ಸರಿಯಾದ ಸಮಾಲೋಚನೆ ಇಲ್ಲದೆ ಮಾರ್ಚ್ 24 ರಂದು ಘೋಷಿಸಲಾದ ಲಾಕ್ ಡೌನ್ ಈಗ ದೊಡ್ಡ ಸಮಸ್ಯೆಯಾಗಿದೆ ಎಂದು ಆರೋಪಿಸಲಾಗಿತ್ತು.
ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ರಾಷ್ಟ್ರೀಯ ಯೋಜನೆಯನ್ನು ರೂಪಿಸುವಲ್ಲಿ ಮತ್ತು ಇದರಿಂದ ತೊಂದರೆಗೊಳಗಾದ ಸಮಾಜದ ದುರ್ಬಲ ವರ್ಗಗಳಿಗೆ ಕನಿಷ್ಠ ಪರಿಹಾರದ ನೀಡುವಲ್ಲಿ ಸರ್ಕಾರ ಮತ್ತು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅರ್ಜಿ ಆರೋಪಿಸಿದೆ.
ಸಾಂಕ್ರಾಮಿಕ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರ ಸುರಕ್ಷತೆಗಾಗಿ ವೈಯಕ್ತಿಕ ರಕ್ಷಣಾ ಸಾಧನಗಳ ಸಮರ್ಪಕ ಸರಬರಾಜನ್ನು ಒದಗಿಸುವಲ್ಲಿ ವಿಳಂಬವಾಗಿದೆ ಎಂದು ವಾದಿಸಿದ್ದರು.
ಈ ವರ್ಷದ ಜನವರಿಯ ಆರಂಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಈ ಬಗ್ಗೆ ತಿಳಿಸಿದ ನಂತರವೂ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ವಿಫಲವಾಗಿದೆ. ಈ ವೈಫಲ್ಯಗಳು ಜನರ ಮೂಲಭೂತ ಹಕ್ಕುಗಳ ತೀವ್ರ ಉಲ್ಲಂಘನೆಗೆ ಕಾರಣವಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಮಾರ್ಚ್ 4 ರ ಮೊದಲು, ಜನವರಿ ಮತ್ತು ಫೆಬ್ರವರಿ ತಿಂಗಳುಗಳಲ್ಲಿ, ಸಾಕಷ್ಟು ಸಂಖ್ಯೆಯ ಅಂತರರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ಮತ್ತು ಕಣ್ಗಾವಲು ನಡೆಸಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅರ್ಜಿ ಒತ್ತಿ ಹೇಳಿದೆ.
ಇದನ್ನೂ ಓದಿ: ಸತತ ವೈಫಲ್ಯಗಳ ನಡುವೆಯೂ ಮೋದಿ ಭಾರೀ ಜನ ಬೆಂಬಲ ಹೊಂದಿರುವುದು ಹೀಗೆ…