ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು, ಇವರ ಹೆಸರನ್ನೇ ಪಕ್ಷದ ವರಿಷ್ಠರಿಗೆ ಕಳುಹಿಸಿಕೊಡುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಶಿರಾ ಉಪಚುನಾವಣಾ ಹಿನ್ನೆಲೆಯಲ್ಲಿಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಛೇರಿಯಲ್ಲಿ ಡಿ.ಕೆ ಶಿವಕುಮಾರ್ ಅವರು ಪಕ್ಷದ ನಾಯಕರೊಂದಿಗೆ ಬುಧವಾರ ಸಭೆ ನಡೆಸಿದ್ದು, ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ: ಶಿರಾ ಉಪಚುನಾವಣೆ: ಅಭಿವೃದ್ದಿ ಮಂತ್ರ ಜಪಿಸಿದ ಕಾಂಗ್ರೆಸ್
“ಶಿರಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದ್ದೇವೆ. ರಾಜಣ್ಣ ಅವರೇ ಜಯಚಂದ್ರ ಅವರ ಹೆಸರನ್ನು ಸೂಚಿಸಿದ್ದಾರೆ. ಅವರ ಅಭಿಪ್ರಾಯ ಪಡೆದಿದ್ದು, ಇದನ್ನೇ ಪಕ್ಷದ ಹೈಕಮಾಂಡ್ ಗೆ ಕಳುಹಿಸಿಕೊಡುತ್ತೇವೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
“ಚುನಾವಣೆಗೆ ಸಂಬಂಧಿಸಿದಂತೆ ಇಂದು ತುಮಕೂರು ಜಿಲ್ಲೆಯ ನಾಯಕರ ಜೊತೆ ಸಮಾಲೋಚನೆ ನಡೆಸಲಾಯಿತು. ಶಿರಾ ಉಪಚುನಾವಣೆಯನ್ನು ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಎದುರಿಸಲು ತೀರ್ಮಾನಿಸಿದ್ದು, ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರು ಕೋಚೇರ್ಮನ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಎಲ್ಲ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಇಂದಿನಿಂದ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ
ಸಭೆಯಲ್ಲಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಮಾಜಿ ಸಚಿವ ಟಿ.ಬಿ ಜಯಚಂದ್ರ, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಮಾಜಿ ಸಂಸದರಾದ ಮುದ್ದಹನುಮೇಗೌಡ, ಬಿ.ಎನ್ ಚಂದ್ರಪ್ಪ, ಮಾಜಿ ಶಾಸಕರುಗಳಾದ ಕೆ.ಎನ್.ರಾಜಣ್ಣ, ಡಾ.ರಫೀಕ್ ಅಹ್ಮದ್, ಕೆ.ಷಡಕ್ಷರಿ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.
ಇದನ್ನೂ ಓದಿ: ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು