ಬೆಂಗಳೂರಿನ ಪೊಬ್ಬತ್ತಿ ಹೆರಿಗೆ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ನಡೆಸದೆಯೇ ಹಣ ಪಡೆದು ನೆಗೆಟಿವ್ ರಿಪೋರ್ಟ್ ಕೊಡುತ್ತಿದ್ದ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ವಿ.ವಿ ಪುರಂನ ಪೊಬ್ಬತ್ತಿ ಹೆರಿಗೆ ಆಸ್ಪತ್ರೆಯಲ್ಲಿ ಗಂಟಲು ದ್ರವ ತೆಗೆದುಕೊಳ್ಳದೇ ಟೆಸ್ಟ್ ಟ್ಯೂಬ್ನಲ್ಲಿ ನೀರು ತುಂಬಿ ಲ್ಯಾಬ್ಗೆ ಕಳಸಲಾಗುತ್ತಿತ್ತು. ಮೊಬೈಲ್ ನಂಬರ್ನಲ್ಲಿ ಒಟಿಪಿ ಜನರೇಟ್ ಮಾಡಿ ನಂತರ ಪರೀಕ್ಷೆ ನಡೆಸದೆಯೇ ನೆಗೆಟಿವ್ ವರದಿ ಕೊಡುವ ದಂಧೆ ನಡೆಯುತ್ತಿರುವುದನ್ನು ಕನ್ನಡದ ಖಾಸಗಿ ಸುದ್ದಿವಾಹಿನಿಯೊಂದು ಬಯಲಿಗೆಳೆದಿತ್ತು.
ಬಿಬಿಎಂಪಿ ಜಂಟಿ ಆಯುಕ್ತರು ಹಾಗೂ ಆರೋಗ್ಯ ಅಧಿಕಾರಿಗಳ ತಂಡ ಬೆಂಗಳೂರಿನ ಪೊಬ್ಬತ್ತಿ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋವಿಡ್ ಟೆಸ್ಟಿಂಗ್ ಅವ್ಯವಹಾರದಲ್ಲಿ ಭಾಗಿಯಾಗಿರುವ ಆಶಾ ಕಾರ್ಯಕರ್ತೆ ಹಾಗೂ ಲ್ಯಾಬ್ ಟೆಕ್ನಿಷಿಯನ್ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. (1/2)
— Dr Sudhakar K (@mla_sudhakar) October 27, 2020
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸುಧಾಕರ್, “ಬಿಬಿಎಂಪಿ ಜಂಟಿ ಆಯುಕ್ತರು ಹಾಗೂ ಆರೋಗ್ಯ ಅಧಿಕಾರಿಗಳ ತಂಡ ಬೆಂಗಳೂರಿನ ಪೊಬ್ಬತ್ತಿ ಹೆರಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋವಿಡ್ ಟೆಸ್ಟಿಂಗ್ ಅವ್ಯವಹಾರದಲ್ಲಿ ಭಾಗಿಯಾಗಿರುವ ಆಶಾ ಕಾರ್ಯಕರ್ತೆ ಹಾಗೂ ಲ್ಯಾಬ್ ಟೆಕ್ನಿಷಿಯನ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ” ಎಂದಿದ್ದಾರೆ.
ಅಕ್ರಮ ಎಸಗುತ್ತಿದ್ದ ಸಿಬ್ಬಂದಿಗಳ ವಿರುಧ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ನಿರ್ಧರಿಸಲಾಗಿದ್ದು ಶೀಘ್ರವೇ FIR ದಾಖಲಿಸಲಾಗುವುದು. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ನ ಅನ್ನು ಈ ಕೂಡಲೇ ವಜಾಗೊಳಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.