ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರನ್ನು ಗೆಲ್ಲಿಸಿದರೆ ಇನ್ನು ಆರು ತಿಂಗಳೊಳಗೆ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುತ್ತೇನೆ. ಗಂಗಾಪೂಜೆಯನ್ನು ನಾನೇ ನೆರವೇರಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಶಿರಾ ತಾಲೂಕಿನ ಮದಲೂರಿನಹಲ್ಲಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಯಡಿಯೂರಪ್ಪ ಅಭ್ಯರ್ಥಿ ರಾಜೇಶ್ ಗೌಡ ಪರ ಮತಯಾಚಿಸಿದರು. ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವುದರಿಂದ ಪ್ರಚಾರ ಕಾರ್ಯ ಆರಂಭಿಸಿದ್ದ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದಲೇ ಹೇಮಾವತಿ ನೀರು ಹರಿಸುವ ಭರವಸೆ ಕೊಡಿಸಿದರು.
“ನಮ್ಮ ಪಕ್ಷದ ಅಭ್ಯರ್ಥಿ ರಾಜೇಶ್ ಗೌಡರನ್ನು ಗೆಲ್ಲಿಸಿ, ಮದಲೂರು ಕೆರೆಗೆ ನೀರು ಹರಿಸುತ್ತೇನೆ. ಕೆರೆ ತುಂಬಿದ ಮೇಲೆ ನಾನೇ ಬಂದು ಗಂಗಾಪೂಜೆಯನ್ನು ಮಾಡುತ್ತೇನೆ” ಎಂದು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರಿಗೆ ಭರವಸೆ ನೀಡಿದರು.
ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ ಕಾಡುಗೊಲ್ಲರಿಗೆ ಇದುವರೆಗೂ ಯಾವ ಸರ್ಕಾರವೂ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿರಲಿಲ್ಲ. ಬಿಜೆಪಿ ಸರ್ಕಾರ ಕಾಡುಗೊಲ್ಲರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ. ನಿಗಮಕ್ಕೆ ಬೇಕಾದ ಹಣವನ್ನು ಒದಗಿಸುತ್ತೇನೆ. ಕಾಡುಗೊಲ್ಲರ ಅಭಿವೃದ್ಧಿಗೆ ಬದ್ದವಾಗಿದ್ದೇನೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಶಿರಾ ಪಟ್ಟಣದಲ್ಲೂ ಸಮಾವೇಶ ನಡೆಸಲಾಯಿತು. ಸಾವಿರಾರು ಮಂದಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಮತದಾನಕ್ಕೆ ಮೂರು ದಿನ ಬಾಕಿ ಇರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕ್ಷೇತ್ರದಲ್ಲಿ ಬಂದು ಪ್ರಚಾರ ನಡೆಸಿರುವುದು ಬಿಜೆಪಿ ಅಭ್ಯರ್ಥಿಗೆ ಸ್ವಲ್ಪಮಟ್ಟಿನ ಪ್ಲಸ್ ಪಾಯಿಂಟ್ ಎಂದು ಹೇಳಲಾಗುತ್ತಿದೆ.
ಈ ಹಿಂದೆ ತ್ರಿಕೋನ ಸ್ಪರ್ಧೆ ಕಂಡುಬರುತ್ತಿದ್ದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿಗೆ ಸ್ವಲ್ಪಮಟ್ಟಿನ ಹಿನ್ನಡೆಯಾಗಿದೆ. ಈಗ ಕಾಂಗ್ರೆಸ್-ಜೆಡಿಎಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇಂದಿ ಮುಖ್ಯಮಂತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿರುವುದು ಬಿಜೆಪಿ ಅಭ್ಯರ್ಥಿಗೆ ಕೊಂಚ ಬಲ ನೀಡಿದೆ.